Manipur Horror: 140 ಕೋಟಿ ಭಾರತೀಯರು ಅವಮಾನ ಅನುಭವಿಸುತ್ತಿದ್ದಾರೆ- ಮಣಿಪುರ ಘಟನೆ ಖಂಡಿಸಿದ ಬಿಜೆಪಿ ಸಂಸದ ಗೌತಮ್ ಗಂಭೀರ್
ನವದೆಹಲಿ, ಜುಲೈ 22: ಮಣಿಪುರದಲ್ಲಿ ನಡೆದ ಭೀಕರ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಗೌತಮ್ ಗಂಭೀರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ತಿಳಿಸಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ವಿರೋಧ ಪಕ್ಷದ ವಿರುದ್ಧವೂ ಗಂಭೀರ್ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಗಂಭೀರ್, 'ಮಣಿಪುರ ಘಟನೆ ಕೇವಲ ರಾಜ್ಯಕ್ಕೆ ಸಂಬಂಧಿಸಿದ ವಿಷಯವಲ್ಲ. ಇದರಿಂದ 140 ಕೋಟಿ ಭಾರತೀಯರ ತಲೆ ನಾಚಿಕೆಯಿಂದ ಬಾಗಿದೆ' ಎಂದು ಹೇಳಿದ್ದಾರೆ.

ರಾಜಕೀಯ ಪಕ್ಷಗಳು ಈ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ ಅವರು, ದೇಶದ ಯಾವುದೇ ಭಾಗದಲ್ಲಿ ಯಾವುದೇ ಮಹಿಳೆಯ ಮೇಲೆ ಇಂತಹ ದೌರ್ಜನ್ಯ ನಡೆಯಬಾರದು ಎಂದು ಒತ್ತಿ ಹೇಳಿದರು.
ಈ ಭೀಕರ ಕೃತ್ಯವನ್ನು ಬಿಂಬಿಸುವ ವಿಡಿಯೊ ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ನಂತರ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷಗಳು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆಗೆ ಒತ್ತಾಯಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಸಂಸತ್ನಲ್ಲಿ ಚರ್ಚೆ ನಡೆಸಬೇಕೆಂದು ಆಗ್ರಹಿಸಿವೆ.

ಈ ಘೋರ ಪ್ರಕರಣಕ್ಕೆ ಕಾರಣವಾಗಿರುವ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ ಎಂದು ಗಂಭೀರ್ ತಿಳಿಸಿದ್ದಾರೆ.
ಮಣಿಪುರ ಹಿಂಸಾಚಾರದ ಕುರಿತು ಮಾತನಾಡಿರುವ ಪ್ರಧಾನಿ ಮೋದಿ, ಯಾವುದೇ ತಪ್ಪಿತಸ್ಥ ವ್ಯಕ್ತಿಯು ನ್ಯಾಯದಿಂದ ತಪ್ಪಿಸಿಕೊಳ್ಳುವುದಿಲ್ಲ. ನಮ್ಮ ಕಾನೂನು ದೃಢವಾಗಿ ಮತ್ತು ನಿರ್ಣಾಯಕವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಮಾಜಿ ಕ್ರಿಕೆಟರ್, ಬಿಜೆಪಿ ಸಂಸದ ಗೌತಮ್ ಗಂಭೀರ್ ಹೇಳಿದ್ದಾರೆ.












Click it and Unblock the Notifications