Jammu & Kashmir Election: ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ಮಾಡಿಕೊಂಡಿವೆ. ಬಿಜೆಪಿ ಕೂಡ ಸಿದ್ಧತೆ ಮಾಡಿಕೊಂಡಿದ್ದು, ಇದೀಗ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಶುಕ್ರವಾರ ನಡೆದ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ಮತ್ತು ಪಕ್ಷದ ಇತರ ಮುಖಂಡರು ಕೂಡ ಹಾಜರಿದ್ದರು.
ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ಸಚಿವ ಅಮಿತ್ ಶಾ, "ಸ್ವಾತಂತ್ಯ್ರದ ಬಳಿಕ, ಜಮ್ಮು ಮತ್ತು ಕಾಶ್ಮೀರದ ವಿಚಾರ ಬಿಜೆಪಿಗೆ ಮುಖ್ಯವಾಗಿದೆ. ಜಮ್ಮು ಮತ್ತು ಕಾಶ್ಮೀರ ಯಾವತ್ತಿಗೂ ಭಾರತದ ಭಾಗ" ಎಂದರು.

"ಪಂಡಿತ್ ಪ್ರೇಮ್ನಾಥ್ ಡೋಗ್ರಾ ಅವರ ಹೋರಾಟದಿಂದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ತ್ಯಾಗದವರೆಗೆ ಜಮ್ಮು ಮತ್ತು ಕಾಶ್ಮೀರದ ಹೋರಾಟವನ್ನು ಬಿಜೆಪಿ ಮತ್ತು ಜನಸಂಘ ಮುಂದುವರೆಸಿಕೊಂಡು ಹೋಗಿದೆ. ಜಮ್ಮು ಮತ್ತು ಕಾಶ್ಮೀರ ಯಾವಗಲೂ ಭಾರತದ ಭಾಗವಾಗಿದೆ ಮತ್ತು ಮುಂದೆ ಕೂಡ ಭಾರತದ ಭಾಗವಾಗೇ ಉಳಿಯುತ್ತದೆ" ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಇದ್ದ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದದ ದೀರ್ಘಕಾಲದ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಮಾಡಿದರು. ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ನಿಭಾಯಿಸಲು ಬೇರೆ ಪಕ್ಷಗಳು ವಿಫಲವಾಗಿದ್ದವು. ಹಿಂದಿನ ಸರ್ಕಾರ ರಾಜಕೀಯ ತುಷ್ಟೀಕರಣ ರಾಜಕೀಯ ಮಾಡಿದವು, 2014 ರಿಂದ 2024 ರವರೆಗೆ ಜಮ್ಮು ಮತ್ತು ಕಾಶ್ಮೀರದ ಇತಿಹಾಸವನ್ನು ಸುವರ್ಣಾಕ್ಷರದಲ್ಲಿ ಬರೆಯಲಾಗುತ್ತದೆ ಎಂದರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, 370 ನೇ ವಿಧಿ ರದ್ದು ಮಾಡಿದ್ದು ಇತಿಹಾಸ, ಅದು ಎಂದಿಗೂ ವಾಪಸ್ ಬರುವುದಿಲ್ಲ ನಾವು ಅದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.
ಆರ್ಟಿಕಲ್ 370 ಯುವಕರ ಕೈಯಲ್ಲಿ ಶಸ್ತ್ರಾಸ್ತ್ರಗಳು ಮತ್ತು ಕಲ್ಲುಗಳನ್ನು ನೀಡಿದೆ. ನಾವು ಅದನ್ನು ನಿಲ್ಲಿಸಿದ್ದೇವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಾ ಸಮ್ಮಾನ್ ಯೋಜನೆ ಅಡಿಯಲ್ಲಿ ಪ್ರತಿ ಕುಟುಂಬದ ಹಿರಿಯ ಮಹಿಳೆಗೆ ವರ್ಷಕ್ಕೆ ₹ 18,000 ಕೊಡುವುದಾಗಿ ಬಿಜೆಪಿ ಭರವಸೆ ನೀಡಿದೆ.
ಉಜ್ವಲ ಯೋಜನೆಯಡಿ ವರ್ಷಕ್ಕೆ ಎರಡು ಉಚಿತ ಸಿಲಿಂಡರ್ ಕೊಡುತ್ತೇವೆ. ಪ್ರಗತಿ ಶಿಕ್ಷಾ ಯೋಜನೆಯಡಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಯಾಣ ಭತ್ಯೆಯಾಗಿ ವರ್ಷಕ್ಕೆ ₹ 3,000 ನೀಡುತ್ತೇವೆ ಎಂದು ಬಿಜೆಪಿ ಭರವಸೆ ನೀಡಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುತ್ತದೆ ಎಂದು ಅಮಿತ್ ಶಾ ಭರವಸೆ ನೀಡಿದರು. ರಾಜ್ಯದಲ್ಲಿ ಭಯೋತ್ಪಾದನೆ ಸೃಷ್ಟಿಸುವಲ್ಲಿ ಭಾಗಿಯಾದವರ ಹೊಣೆಗಾರಿಕೆಯನ್ನು ಸರಿಪಡಿಸಲು ಶ್ವೇತಪತ್ರ ತರುವುದಾಗಿ ಭರವಸೆ ನೀಡಿದ್ದಾರೆ.












Click it and Unblock the Notifications