ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ; ಬ್ರಿಜ್ ಭೂಷಣ್ ಕೈಬಿಟ್ಟು, ಅವರ ಮಗನನ್ನು ಕಣಕ್ಕಿಳಿಸಿದ ಬಿಜೆಪಿ
ಬಿಜೆಪಿ ಸಂಸದ ಮತ್ತು ಕುಸ್ತಿ ಫೆಡರೇಷನ್ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಈ ಬಾರಿ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಉತ್ತರ ಪ್ರದೇಶದ ಕೈಸರ್ಗಂಜ್ನಿಂದ ಬಿಜೆಪಿ ಅಭ್ಯರ್ಥಿಯಾಗಿ ಅವರ ಪುತ್ರ ಕರಣ್ ಭೂಷಣ್ ಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ಕೊಟ್ಟಿದೆ.
ಗುರುವಾರ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ಬ್ರಿಜ್ ಭೂಷಣ್ ಸಿಂಗ್ ಅವರಿಗೆ ಟಿಕೆಟ್ ನೀಡುವ ಬಗೆಗಿನ ಗೊಂದಲಗಳಿಗೆ ಇತಿಶ್ರೀ ಹಾಡಿದೆ. ಬ್ರಿಜ್ ಭೂಷಣ್ ಸಿಂಗ್ ಮಗ ಕರಣ್ ಭೂಷಣ್ ಸಿಂಗ್ ಹೆಸರನ್ನು ಬಿಜೆಪಿ ಘೋಷಣೆ ಮಾಡಿದೆ.

ಕಾಂಗ್ರೆಸ್ ಭದ್ರಕೋಟೆಯಾದ ರಾಯ್ ಬರೇಲಿಯಿಂದ ಪ್ರತಾಪ್ ಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಕಳೆದ ಬಾರಿ ಕಾಂಗ್ರೆಸ್ನಿಂದ ಸೋನಿಯಾ ಗಾಂಧಿ ಇಲ್ಲಿ ಸ್ಪರ್ಧೆ ಮಾಡಿದ್ದರು, ಈ ಬಾರಿ ಕಾಂಗ್ರೆಸ್ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.
ಆರು ಅವಧಿಗೆ ಸಂಸದರಾಗಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ತಮ್ಮ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳಿಂದಾಗಿ ರಾಜಕೀಯ ಹಿನ್ನಡೆ ಅನುಭವಿಸಿದರು. ಪ್ರಮುಖ ಕುಸ್ತಿಪಟುಗಳು ಅವರ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದರು. ಅವರ ವಿರುದ್ಧ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಬಿಜೆಪಿ ಅವರ ಮಗನಿಗೆ ಟಿಕೆಟ್ ನೀಡಿದೆ.
ಅವರ ಹಿರಿಯ ಪುತ್ರ ಪ್ರತೀಕ್ ಭೂಷಣ್ ಸಿಂಗ್ ಶಾಸಕರಾಗಿದ್ದಾರೆ. ಕರಣ್ ಭೂಷಣ್ ಸಿಂಗ್ ಉತ್ತರ ಪ್ರದೇಶದ ಕುಸ್ತಿ ಸಂಸ್ಥೆಯ ಮುಖ್ಯಸ್ಥರಾಗಿದ್ದಾರೆ. ಕೈಸರ್ಗಂಜ್ ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮೇ 20 ರಂದು ಮತದಾನ. ನಾಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಬ್ರಿಜ್ ಭೂಷಣ್ ಶರಣ್ ಸಿಂಗ್ ಒಂದು ದಶಕದಿಂದ ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿದ್ದರು. 2023ರ ಆರಂಭದಲ್ಲಿ ಪ್ರಮುಖ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಅವರ ವಿರುದ್ಧದ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿತ್ತು, ದೆಹಲಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.












Click it and Unblock the Notifications