'ಮಿಷನ್ ಸೌತ್ ಇಂಡಿಯಾ' ತೀವ್ರಗೊಳಿಸಲು ಬಿಜೆಪಿ ಸಜ್ಜು
ನವದೆಹಲಿ ಮೇ 30: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಎಂಟು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆ ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ. ಇದೇ ವೇಳೆ ಪಕ್ಷದ 'ಮಿಷನ್ ವಿಸ್ತರಣೆ' ಯೋಜನೆಯನ್ನು ತೀವ್ರಗೊಳಿಸುವ ಕಾರ್ಯ ಭರದಿಂದ ಸಾಗಿದೆ.
2014ರ ನಂತರ ಛತ್ತೀಸಘಡ, ರಾಜಸ್ಥಾನ, ದೆಹಲಿ, ಪಂಜಾಬ್ ಮತ್ತು ದಕ್ಷಿಣ ರಾಜ್ಯಗಳನ್ನು ಹೊರತುಪಡಿಸಿ ಇತರೆ ರಾಜ್ಯಗಳಲ್ಲಿ ಬಿಜೆಪಿ ನಿರಂತರವಾಗಿ ಗೆಲುವು ಸಾಧಿಸುತ್ತಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಪಕ್ಷದ ಗೆಲುವು ದೊಡ್ಡ ಸವಾಲು ಮತ್ತು ಬಿಜೆಪಿಯ ಮುಂದಿರುವ ಗುರಿಯಾಗಿದೆ.
ಬಿಜೆಪಿ ಸೇರುವ ಬಗ್ಗೆ ಹಾರ್ದಿಕ್ ಪಟೇಲ್ ಹೇಳಿದ್ದೇನು?
1980ರಲ್ಲಿ ಪಕ್ಷ ಸ್ಥಾಪನೆಯಾದಾಗಿನಿಂದ ದಕ್ಷಿಣ ಭಾರತದಲ್ಲಿ ತನ್ನ ನೆಲೆಯನ್ನು ಹೆಚ್ಚಿಸಲು ಬಿಜೆಪಿ ನಿರಂತರವಾಗಿ ಪ್ರಯತ್ನಿಸುತ್ತಿದೆ. ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿ ಹೊರತಾಗಿ ಬಿಜೆಪಿ ತನ್ನ ಸರಕಾರವನ್ನು ರಚಿಸುವಲ್ಲಿ ಯಶಸ್ವಿಯಾದ ದಕ್ಷಿಣ ಭಾರತದ ಏಕೈಕ ರಾಜ್ಯ ಕರ್ನಾಟಕವಾಗಿದೆ. ಆದರೆ ಎಲ್ಲಾ ಪ್ರಯತ್ನಗಳ ಹೊರತಾಗಿ ಕೇರಳ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳು ಕೇಸರಿ ಪಕ್ಷಕ್ಕೆ ಸವಾಲಾಗಿ ಉಳಿದಿದೆ.
'ಮಿಷನ್ ಸೌತ್ ಇಂಡಿಯಾ' ಯೋಜನೆಗೆ ಸಜ್ಜು
ದಕ್ಷಿಣ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣದಲ್ಲಿ 2023ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ 2026ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅಮಿತ್ ಶಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ದಕ್ಷಿಣ ರಾಜ್ಯಗಳಿಗಾಗಿ 'ಮಿಷನ್ ಸೌತ್ ಇಂಡಿಯಾ' ಎಂಬ ವಿಶೇಷ ಯೋಜನೆಯನ್ನು ಸಿದ್ಧಪಡಿಸಿದ್ದರು. ಈಗ ಈ ಯೋಜನೆಯನ್ನು ಹಾಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜಾರಿಗೆ ತರಲು ಪ್ರಯತ್ನಿಸುತ್ತಿದ್ದಾರೆ.
ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಮಹಾರಾಷ್ಟ್ರದಿಂದ ಪಿಯೂಷ್
ಮೋದಿ, ಶಾ, ನಡ್ಡಾ ನೇತೃತ್ವ
ಬಿಜೆಪಿಯ 'ಮಿಷನ್ ಸೌತ್ ಇಂಡಿಯಾ' ಯಶ್ವಸಿಗೊಳಿಸುವ ಜವಾಬ್ದಾರಿಯನ್ನು ಪಕ್ಷದ ಉನ್ನತ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೊತ್ತಿದ್ದು, ಇವರ ಮುಂದಾಳತ್ವದಲ್ಲಿ ಯೋಜನೆಯನ್ನು ಸಾಕಾರಗೊಳಿಸಲು ಪಕ್ಷ ಶ್ರಮಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೇ 26ರಂದು ತೆಲಂಗಾಣಕ್ಕೆ ಭೇಟಿ ನೀಡಿದ್ದರು. ರಾಜ್ಯದಲ್ಲಿ ಬಿಜೆಪಿ ನೆಲೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.
ಬಿ.ಎಲ್.ಸಂತೋಷ್ ಹೆಗಲಿಗೆ ಜವಾಬ್ದಾರಿ
ಕರ್ನಾಟಕದ ನಂತರ, ಈಗ ತೆಲಂಗಾಣದಿಂದ ಬಿಜೆಪಿಯ ಉನ್ನತ ನಾಯಕತ್ವವು ಹೆಚ್ಚಿನ ನಿರೀಕ್ಷೆ ಹೊಂದಿದೆ. ಹಾಗಾಗಿ ಆ ರಾಜ್ಯದಲ್ಲಿ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಪಕ್ಷವು ತೊಡಗಿಕೊಂಡಿದೆ. ಜೆ.ಪಿ.ನಡ್ಡಾ ಮತ್ತು ಅಮಿತ್ ಶಾ ರಾಜ್ಯದಲ್ಲಿ ನಿರಂತರವಾಗಿ ಪ್ರವಾಸ ಮಾಡುತ್ತಿದ್ದಾರೆ, ಅಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಜವಾಬ್ದಾರಿ ವಹಿಸಿದ್ದಾರೆ.
ಬಲ ಸಾಬೀತಿಗೆ ಬಿಜೆಪಿ ತವಕ
ಹೈದರಾಬಾದನಲ್ಲಿ ನಡೆದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಟಿಆರ್ಎಸ್ ಸರಕಾರದ ವಿರುದ್ಧ ದಾಳಿ ನಡೆಸಿದರು. ಅಲ್ಲದೇ ತೆಲಂಗಾಣ ಮುಖ್ಯಮಂತ್ರಿಗಳ ಕುಟುಂಬ ಆಡಳಿತದ ವಿರುದ್ಧ ಗುಡುಗಿದರು. ವಂಶಾಡಳಿತ ಪಕ್ಷಗಳು ಬೇರು ಮಟ್ಟದಿಂದ ನಿರ್ಮೂಲವಾದ ರಾಜ್ಯಗಳಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಲಿದೆ ಎಂದು ಹೇಳಿದರು. 2026ರಲ್ಲಿ ಕೇರಳ ಮತ್ತು ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯಬೇಕಿದ್ದರೂ ಅದಕ್ಕೂ ಮುನ್ನ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತನ್ನ ಬಲವನ್ನು ಸಾಬೀತುಪಡಿಸಲು ತವಕಿಸುತ್ತಿದೆ. ಈ ಮೂಲಕ ಆ ರಾಜ್ಯಗಳಲ್ಲಿ ಬಿಜೆಪಿ ನೆಲೆಯೂರಿದ ಸೂಚನೆಯನ್ನು ಮತದಾರರಿಗೆ ರವಾನಿಸಲು ಪಕ್ಷ ಬಯಸಿದೆ.
ವಯಾನಾಡ್ ಗೆ ಸ್ಮೃತಿ ಇರಾನಿ ಭೇಟಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡಿನ ಸಂಸದರಾಗಿದ್ದಾರೆ. ಕೇರಳದಲ್ಲಿ ಬಿಜೆಪಿ ತನ್ನ ಬಲವನ್ನು ಹೆಚ್ಚಿಸುವ ಮೂಲಕ ರಾಜ್ಯ ಸರಕಾರ ಮತ್ತು ರಾಹುಲ್ ಗಾಂಧಿಗೆ ಸೆಡ್ಡು ಹೊಡೆಯಲು ಪಕ್ಷ ತವಕಿಸುತ್ತಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಅಮೇಠಿಯಲ್ಲಿ ರಾಹುಲ್ ಗಾಂಧಿ ಅವರನ್ನು ಸೋಲಿಸಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡ ಇತ್ತೀಚೆಗೆ ವಯಾನಾಡ್ ಗೆ ಭೇಟಿ ನೀಡಿದ್ದರು.
ದಕ್ಷಿಣ ರಾಜ್ಯಗಳ ಮೇಲೆ ಬಿಜೆಪಿ ಕಣ್ಣು
ದಕ್ಷಿಣ ಭಾರತದ ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ತೆಲಂಗಾಣ, ಕೇರಳ ಮತ್ತು ತೆಲಂಗಾಣದಿಂದ 129 ಸಂಸದರು ಲೋಕಸಭೆಗೆ ಆಯ್ಕೆಯಾಗುತ್ತಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಈ ಐದು ರಾಜ್ಯಗಳು ಸರಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಬಹುದು. ಆದ್ದರಿಂದ ಈ ರಾಜ್ಯಗಳಲ್ಲಿ ತನ್ನ ಬೆಂಬಲವನ್ನು ಹೆಚ್ಚಿಸುವುದು ಬಿಜೆಪಿಗೆ ಅಗತ್ಯವಾಗಿದೆ.