ಸಿಎಎ, ಎನ್ಆರ್ಸಿ ಬಗ್ಗೆ ಬಿಜೆಪಿ ಮಾತಾಡಲು ಗುಜರಾತ್ ಚುನಾವಣೆ ಕಾರಣ?
ಗಾಂಧಿನಗರ, ನವೆಂಬರ್ 9: ಗುಜರಾತ್ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡೇ ಬಿಜೆಪಿಯು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ)ಯನ್ನು ಬಳಸಿಕೊಳ್ಳುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಕೇಸರಿ ಪಾಳಯವು ಪಶ್ಚಿಮ ಬಂಗಾಳದಲ್ಲಿ ಪ್ರತ್ಯೇಕತಾ ವಾದವನ್ನು ಬೆಳೆಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಬ್ಯಾನರ್ಜಿ, ರಾಜ್ಯತ್ವದ ಬೇಡಿಕೆಗಳನ್ನು ಎತ್ತಿ ಹಿಡಿಯುವ ಮೂಲಕ ರಾಜ್ಯ ವಿಭಜನೆಯನ್ನು ಎಂದಿಗೂ ಅನುಮತಿಸುವುದಿಲ್ಲ ಎಂದು ಪುನರುಚ್ಚರಿಸಿದರು. ಅಲ್ಲದೇ ಪಶ್ಚಿಮ ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರು ಪ್ರತಿಪಾದಿಸಿದರು.
ಮದುವೆ ಋತುವಿನಲ್ಲಿ ಗುಜರಾತ್ ಚುನಾವಣೆ: ಮಂಟಪಗಳಲ್ಲಿ ಚುನಾವಣಾ ಪ್ರಚಾರ ಮಾಡುವರೇ ನಾಯಕರು?
"ಯಾವುದೇ ರಾಜ್ಯಗಳಲ್ಲಿ ಚುನಾವಣೆಗಳು ಹತ್ತಿರಕ್ಕೆ ಬರುತ್ತಿದ್ದಂತೆ ಭಾರತೀಯ ಜನತಾ ಪಕ್ಷ ಮತ್ತು ಅದರ ನಾಯಕರು ಸಿಎಎ ಮತ್ತು ಎನ್ಆರ್ಸಿಯನ್ನು ಜಾರಿಗೊಳಿಸುವ ಬಗ್ಗೆ ಮಾತನಾಡಲು ಶುರು ಮಾಡುತ್ತಾರೆ'' ಎಂದು ಗುಡುಗಿದ್ದಾರೆ.
ಲೋಕಸಭೆ ಚುನಾವಣೆಗಾಗಿ ಸಿಎಎ, ಎನ್ಆರ್ಸಿ ಪ್ರಸ್ತಾಪ
ಗುಜರಾತ್ ವಿಧಾನಸಭಾ ಚುನಾವಣೆಯು ಇದೇ ವರ್ಷಾಂತ್ಯದಲ್ಲಿ ನಡೆಯಲಿದ್ದು, ಲೋಕಸಭೆ ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಬಾಕಿ ಇರುವಂತೆ ಬಿಜೆಪಿಯು ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ಪ್ರಕ್ರಿಯೆ ಬಗ್ಗೆ ಮಾತು ಶುರುವಾಗಿದೆ. ಈ ವಿಷಯವನ್ನು ಚುನಾವಣೆಗಾಗಿಯೇ ಬಿಜೆಪಿಯು ಮುನ್ನೆಲೆಗೆ ತರಲು ಪ್ರಯತ್ನಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಬಿಜೆಪಿಯು ದೇಶದ ನಾಗರಿಕರನ್ನು ನಿರ್ಧರಿಸುತ್ತಾ?
"ದೇಶದಲ್ಲಿ ನಾಗರಿಕರು ಯಾರು ಮತ್ತು ಯಾರು ಅಲ್ಲ ಎಂಬುದನ್ನು ಬಿಜೆಪಿ ನಿರ್ಧರಿಸುತ್ತದೆಯೇ?," ಎಂದು ಮಮತಾ ಬ್ಯಾನರ್ಜಿ ಪ್ರಶ್ನೆ ಮಾಡಿದ್ದಾರೆ. ಕೃಷ್ಣನಗರದಲ್ಲಿ ಮಾತನಾಡಿದ ಅವರು, ರಾಜಕೀಯವಾಗಿ ಪ್ರಬಲವಾದ ಮತುವಾ ಸಮುದಾಯವು ಪೂರ್ವ ಬಂಗಾಳ ಅಂದರೆ ಇಂದಿನ ಬಾಂಗ್ಲಾದೇಶದಲ್ಲಿ ತನ್ನ ಮೂಲವನ್ನು ಹೊಂದಿದೆ ಎಂದರು. ಈ ಪೈಕಿ ಹಲವಾರು ಜನರು ಉತ್ತರ 24 ಪರಗಣಗಳು ಮತ್ತು ನಾಡಿಯಾ ಜಿಲ್ಲೆಗಳಲ್ಲಿ ನೆಲೆಸಿದ್ದಾರೆ ಎಂದು ಹೇಳಿದರು.
ಪ್ರತ್ಯೇಕತಾವಾದದ ಬಗ್ಗೆ ಬಿಜೆಪಿ ವಿರುದ್ಧ ದೀದಿ ಸಿಡಿಮಿಡಿ
"ಪಶ್ಚಿಮ ಬಂಗಾಳದ ಉತ್ತರ ಭಾಗಗಳಲ್ಲಿ ಇರುವ ರಾಜಬಂಷಿಗಳು ಮತ್ತು ಗೂರ್ಖಾಗಳನ್ನು ಪ್ರಚೋದಿಸುವ ಮೂಲಕ ಬಿಜೆಪಿಯು ರಾಜ್ಯದಲ್ಲಿ ಪ್ರತ್ಯೇಕತಾವಾದವನ್ನು ಬಿಂಬಿಸುವುದಕ್ಕೆ ಹೊರಟಿದೆ. ಆದರೆ ನಾವು ಪಶ್ಚಿಮ ಬಂಗಾಳದ ವಿಭಜನೆಗೆ ಎಂದಿಗೂ ಅವಕಾಶ ನೀಡುವುದಿಲ್ಲ," ಎಂದು ಮಮತಾ ಬ್ಯಾನರ್ಜಿ ಕಿಡಿ ಕಾರಿದರು. 2024ರ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ಅಧಿಕಾರಕ್ಕೆ ಮರಳುವುದಿಲ್ಲ ಎಂದು ಪುನರುಚ್ಚರಿಸಿದ ಬ್ಯಾನರ್ಜಿ, 2019ರಲ್ಲಿ ದೇಶದ ರಾಜಕೀಯ ಪರಿಸ್ಥಿತಿ ವಿಭಿನ್ನವಾಗಿತ್ತು ಮತ್ತು ಅಂದಿನಿಂದ ಅದು ಬದಲಾಗಿದೆ ಎಂದು ಹೇಳಿದರು.
2019ರ ರೀತಿಯಲ್ಲಿಲ್ಲ ಬಿಜೆಪಿಯ ಸ್ಥಿತಿಗತಿ!
ಕಳೆದ 2019 ರಲ್ಲಿ ದೇಶದ ರಾಜಕೀಯ ಪರಿಸ್ಥಿತಿ ವಿಭಿನ್ನವಾಗಿತ್ತು. ಬಿಹಾರ, ಜಾರ್ಖಂಡ್ ಮತ್ತು ಇತರ ಹಲವು ರಾಜ್ಯಗಳಲ್ಲಿ ಬಿಜೆಪಿಯು ಅಧಿಕಾರದಲ್ಲಿದೆ. ಆದರೆ ಈಗ ಬಿಜೆಪಿಯ ರಾಜಕೀಯ ಅಸ್ತಿತ್ವವು ಕಡಿಮೆಯಾಗಿದ್ದು, ಇದರಿಂದ ಇನ್ನು ಮುಂದೆ ಹಲವು ರಾಜ್ಯಗಳಲ್ಲಿ ಅಧಿಕಾರವನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ. ಹೀಗಾಗಿಯೇ ಬಿಜೆಪಿಯು ವಿರೋಧ ಪಕ್ಷಗಳ ಮೇಲೆ ಹರಿದು ಬೀಳುತ್ತಿದೆ. ವಿರೋಧ ಪಕ್ಷದ ನಾಯಕರನ್ನು ನಿಂದಿಸುವ ಮೂಲಕ ಅವರನ್ನು ಬಂಧಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ.
ಗುಜರಾತ್ ವಿಧಾನಸಭಾ ಚುನಾವಣೆ ಮಾಹಿತಿ
ಗುಜರಾತ್ನಲ್ಲಿ ಒಟ್ಟು ಎರಡು ಹಂತಗಳಲ್ಲಿ 182 ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 89 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತದೆ. ಈ ಸಂಬಂಧ ನವೆಂಬರ್ 5ರಂದು ಅಧಿಸೂಚನೆ ಹೊರಡಿಸಲಾಗಿದೆ. ನವೆಂಬರ್ 14 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ನವೆಂಬರ್ 15 ನಾಮಪತ್ರ ಪರಿಶೀಲನೆ, ನವೆಂಬರ್ 17 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನಾಂಕವಾಗಿದೆ. ಡಿಸೆಂಬರ್ 1ರಂದು ಮೊದಲ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ.
ಅದೇ ರೀತಿ ಗುಜರಾತ್ನ 93 ವಿಧಾನಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಸಲಾಗುತ್ತದೆ. ಈ ಸಂಬಂಧ ನವೆಂಬರ್ 10ರಂದು ಅಧಿಸೂಚನೆ ಹೊರಡಿಸಲಾಗಿದೆ. ನವೆಂಬರ್ 17ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ನವೆಂಬರ್ 18ರಂದು ನಾಮಪತ್ರ ಪರಿಶೀಲನೆ, ನವೆಂಬರ್ 21ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನಾಂಕವಾಗಿದೆ. ಡಿಸೆಂಬರ್ 5ರಂದು ಎರಡನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಗುತ್ತದೆ. ಅಂತಿಮವಾಗಿ ಡಿಸೆಂಬರ್ 8ರಂದು 182 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ.