ಶೀಘ್ರದಲ್ಲೇ ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ಹೆಸರು ಘೋಷಣೆ
ನವದೆಹಲಿ, ಜೂನ್ 20: ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ನಡೆಸುತ್ತಿರುವ ಸಾಲು ಸಾಲು ಸಭೆಗಳ ನಂತರ ಭಾನುವಾರ ಭಾರತೀಯ ಜನತಾ ಪಕ್ಷ (ಬಿಜೆಪಿ) ಸಹ ಮಹತ್ವದ ಸಭೆಯೊಂದನ್ನು ನಡೆಸಿತು.
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಗಜೇಂದ್ರ ಸಿಂಗ್ ಶೇಖಾವತ್, ಅಶ್ವಿನಿ ವೈಷ್ಣವ್, ಜಿ ಕಿಶನ್ ರೆಡ್ಡಿ, ಅರ್ಜುನ್ ರಾಮ್ ಮೇಘವಾಲ್, ವಿನೋದ್ ತಾವ್ಡೆ, ಸಿ. ಟಿ. ರವಿ, ಸಂಬಿತ್ ಪಾತ್ರ ಮುಂತಾದ ಹಿರಿಯ ನಾಯಕರು ಪಾಲ್ಗೊಂಡಿದ್ದರು.
ರಾಷ್ಟ್ರಪತಿ ಚುನಾವಣೆ: ಭಾನುವಾರ ಬಿಜೆಪಿಯ ಮೊದಲ ಸಮನ್ವಯ ಸಮಿತಿ ಸಭೆ
ಭಾನುವಾರ ಸುಮಾರು ಒಂದು ಗಂಟೆ ಕಾಲ ನಡೆದ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆ ಕಾರ್ಯತಂತ್ರಗಳ ಕುರಿತು ಕೂಲಂಕಷವಾಗಿ ಚರ್ಚಿಸಲಾಗಿದೆ. ಸದ್ಯದಲ್ಲೇ ಅಭ್ಯರ್ಥಿಯ ಕುರಿತು ದೊಡ್ಡ ಘೋಷಣೆಯೊಂದು ಹೊರಬೀಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಎನ್ಡಿಎ ಅಭ್ಯರ್ಥಿಗೆ ಬೆಂಬಲಿಸುವಂತೆ ಇತರ ಪಕ್ಷಗಳೊಂದಿಗೆ ಸಂಪರ್ಕ
ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯ ಕೇಂದ್ರ ನಿರ್ವಹಣಾ ತಂಡವು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿನ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸುತ್ತದೆ ಮತ್ತು ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಗೆ ಮತ ಕೇಳಲು ಇತರ ಪಕ್ಷಗಳೊಂದಿಗೆ ಸಂಪರ್ಕದಲ್ಲಿರುತ್ತದೆ," ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರಪತಿ ಅಭ್ಯರ್ಥಿಯ ಬಗ್ಗೆ ಎಲ್ಲಾ ಮಿತ್ರಪಕ್ಷಗಳೊಂದಿಗೆ ಚರ್ಚಿಸುವ ಮೂಲಕ ಒಮ್ಮತ ಮೂಡಿಸುವ ಜವಾಬ್ದಾರಿಯನ್ನು ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೆಗಲಿಗೆ ವಹಿಸಲಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ತನ್ನ ರಾಜ್ಯ ಘಟಕಗಳು ಮತ್ತು ಮಿತ್ರಪಕ್ಷಗಳೊಂದಿಗೆ ಸಮನ್ವಯ ಸಾಧಿಸಲು 14 ಸದಸ್ಯರ ಸಮನ್ವಯ ಸಮಿತಿಯನ್ನು ರಚಿಸಿದೆ.
ತಮ್ಮ ಅಭ್ಯರ್ಥಿ ಬೆಂಬಲಿಸುವಂತೆ ಪ್ರತಿಪಕ್ಷದ ಜೊತೆ ಚರ್ಚೆ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಇತರ ವಿರೋಧ ಪಕ್ಷದ ನಾಯಕರೊಂದಿಗೆ ಬಿಜೆಪಿಯ ಜೆಪಿ ನಡ್ಡಾ ಮತ್ತು ರಾಜನಾಥ್ ಸಿಂಗ್ ಚರ್ಚೆ ನಡೆಸಿದರು. ಆದಾಗ್ಯೂ, ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ಮತ್ತು ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ಸಿಪಿ ಎನ್ಡಿಎ ಅಭ್ಯರ್ಥಿಗೆ ಮತ ಹಾಕುತ್ತದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.
ಪ್ರತಿಪಕ್ಷಗಳ ಒಮ್ಮತದಿಂದ ಅಭ್ಯರ್ಥಿಯ ಆಯ್ಕೆ
"ಹಲವು ಪಕ್ಷಗಳು ಇಂದು ಇಲ್ಲಿವೆ. ನಾವು ಒಬ್ಬ ಒಮ್ಮತದ ಅಭ್ಯರ್ಥಿಯನ್ನು ಮಾತ್ರ ಆಯ್ಕೆ ಮಾಡಲು ನಿರ್ಧರಿಸಿದ್ದೇವೆ. ಈ ಅಭ್ಯರ್ಥಿಗೆ ಎಲ್ಲರೂ ಬೆಂಬಲ ನೀಡಲಿದ್ದಾರೆ. ನಾವು ಇತರರೊಂದಿಗೆ ಸಮಾಲೋಚಿಸುತ್ತೇವೆ. ಇದೊಂದು ಉತ್ತಮ ಆರಂಭವಾಗಿದ್ದು, ನಾವು ಹಲವಾರು ತಿಂಗಳ ನಂತರ ಒಟ್ಟಿಗೆ ಕುಳಿತಿದ್ದೇವೆ. ನಾವು ಮತ್ತೆ ಈ ರೀತಿ ಒಟ್ಟಾಗಿ ಚರ್ಚೆಗೆ ಕುಳಿತುಕೊಳ್ಳುತ್ತೇವೆ," ಎಂದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಇತ್ತೀಚೆಗೆ ನಡೆಸಿದ ಸಭೆಯ ನಂತರ ಹೇಳಿದ್ದರು.
ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ವಿರುದ್ಧ ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಒಮ್ಮತ ಮೂಡಿಸಲು ಮಮತಾ ಬ್ಯಾನರ್ಜಿ ಕರೆದಿದ್ದ ವಿರೋಧ ಪಕ್ಷಗಳ ಮಹತ್ವದ ಸಭೆಯಲ್ಲಿ 17 ರಾಜಕೀಯ ಪಕ್ಷಗಳ ನಾಯಕರು ಸೇರಿಕೊಂಡಿದ್ದರು. TMC, ಕಾಂಗ್ರೆಸ್, CPI, CPI(M), CPIML, RSP, ಶಿವಸೇನೆ, NCP, RJD, SP, National Conference, PDP, JD(S), DMK, RLD, IUML ಮತ್ತು JMM ಪಕ್ಷದ ನಾಯಕರು ಈ ಸಭೆಗೆ ಹಾಜರಾಗಿದ್ದರು.
Recommended Video
ರಾಷ್ಟ್ರಪತಿ ಚುನಾವಣೆ ನಡೆಯುವುದು ಯಾವಾಗ?
ರಾಷ್ಟ್ರಪತಿ ಚುನಾವಣೆಗೆ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ವಿರೋಧ ಪಕ್ಷಗಳು ನಿರ್ಧರಿಸಿವೆ. 16ನೇ ರಾಷ್ಟ್ರಪತಿ ಚುನಾವಣೆ ಜುಲೈ 18ರಂದು ನಡೆಯಲಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ. ನಾಮಪತ್ರಗಳ ಪರಿಶೀಲನೆಗೆ ಜೂನ್ 30 ಮತ್ತು ಉಮೇದುವಾರಿಕೆ ಹಿಂಪಡೆಯಲು ಜುಲೈ 2 ಕೊನೆಯ ದಿನಾಂಕವಾಗಿದೆ. ಭಾರತದ 14 ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸುತ್ತಿರುವ ರಾಮನಾಥ್ ಕೋವಿಂದ್ ಜುಲೈ 25, 2017 ರಂದು ಅಧಿಕಾರ ವಹಿಸಿಕೊಂಡಿದ್ದು, ಅವರ ಅವಧಿಯು ಜುಲೈ 24, 2022 ರಂದು ಕೊನೆಗೊಳ್ಳುತ್ತದೆ.