ಬಾಂಬ್ ಬೆದರಿಕೆ: ತುರ್ತು ಭೂಸ್ಪರ್ಶ ಮಾಡಿದ ಮಾಸ್ಕೋದಿಂದ ಬಂದಿದ್ದ ವಿಮಾನ
ಅಹಮದಾಬಾದ್ ಜನವರಿ 10: ಬಾಂಬ್ ಬೆದರಿಕೆ ಬೆನ್ನಲ್ಲೆ 244 ಜನರೊಂದಿಗೆ ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ಚಾರ್ಟರ್ಡ್ ವಿಮಾನವನ್ನು ಗುಜರಾತ್ನ ಜಾಮ್ನಗರಕ್ಕೆ ತುರ್ತು ಭೂಸ್ಪರ್ಶ ಮಾಡಿದ ಘಟನೆ ಸೋಮವಾರ ನಡೆದಿದೆ. ಗೋವಾ ಏರ್ ಟ್ರಾಫಿಕ್ ಕಂಟ್ರೋಲ್ಗೆ ಬಾಂಬ್ ಬೆದರಿಕೆ ಬಂದ ನಂತರ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ರಾತ್ರಿ 9:49 ಕ್ಕೆ ಜಾಮ್ನಗರ (ರಕ್ಷಣಾ) ವಿಮಾನ ನಿಲ್ದಾಣದಲ್ಲಿ ವಿಮಾನ ಸುರಕ್ಷಿತವಾಗಿ ಇಳಿದಿದೆ ಎಂದು ಜಾಮ್ನಗರ ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ.
ಮಾಸ್ಕೋದಿಂದ ಗೋವಾಕ್ಕೆ ತೆರಳುತ್ತಿದ್ದ ಅಜುರ್ ಏರ್ ವಿಮಾನದಲ್ಲಿ ಬಾಂಬ್ ಭೀತಿಯ ಬಗ್ಗೆ ಭಾರತೀಯ ಅಧಿಕಾರಿಗಳು ರಾಯಭಾರ ಕಚೇರಿಯನ್ನು ಎಚ್ಚರಿಸಿದ್ದಾರೆ. ಹೀಗಾಗಿ ವಿಮಾನ ಜಾಮ್ನಗರ ಭಾರತೀಯ ವಾಯುಪಡೆ ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ. ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು ವಿಮಾನವನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ ಎಂದು ರಷ್ಯಾದ ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
ಈ ಬಗ್ಗೆ ಮಾತನಾಡಿದ ಪೊಲೀಸ್ ಮಹಾನಿರೀಕ್ಷಕ (ರಾಜ್ಕೋಟ್ ಮತ್ತು ಜಾಮ್ನಗರ ರೇಂಜ್) ಅಶೋಕ್ ಕುಮಾರ್ ಯಾದವ್, ಮಾಸ್ಕೋದಿಂದ ಟೇಕ್ ಆಫ್ ಆಗಿದ್ದ ವಿಮಾನ ಡಬೋಲಿಮ್ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಆದರೆ ಬಾಂಬ್ ಬೆದರಿಕೆ ಬೆನ್ನಲ್ಲೆ ತುರ್ತು ಭೂಸ್ಪರ್ಶ ಮಾಡಿದೆ. ಇದರಿಂದಾಗಿ ಗೋವಾ ಪೊಲೀಸರು ಮುನ್ನೆಚ್ಚರಿಕೆಯಾಗಿ ದಾಬೋಲಿಮ್ ವಿಮಾನ ನಿಲ್ದಾಣ ಮತ್ತು ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದರು.
ಎಲ್ಲಾ 236 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು (8) ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ವಿಮಾನ ಪ್ರತ್ಯೇಕವಾಗಿದೆ ಎಂದು ಜಾಮ್ನಗರ ವಿಮಾನ ನಿಲ್ದಾಣದ ಅಧಿಕಾರಿಗಳಿಂದ ಮಾಹಿತಿ ಬಂದಿದೆ. ಪೊಲೀಸರು ಮತ್ತು ಬಾಂಬ್ ಪತ್ತೆ ಹಾಗೂ ವಿಲೇವಾರಿ ಸ್ಕ್ವಾಡ್ ಜೊತೆಗೆ ಸ್ಥಳೀಯ ಅಧಿಕಾರಿಗಳು ವಿಮಾನವನ್ನು ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದರು.