Arvind Kejriwal: ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ ಸಿಬಿಐ
ನವದೆಹಲಿ, ಜುಲೈ. 29: ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸೋಮವಾರ ತನ್ನ ಪೂರಕ ಆರೋಪಪಟ್ಟಿಯನ್ನು ಸಲ್ಲಿಸಿದೆ. ಸದ್ಯ ರದ್ದುಗೊಂಡಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸೋಮವಾರ ತನ್ನ ಪೂರಕ ಆರೋಪಪಟ್ಟಿಯನ್ನು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಸಲ್ಲಿಸಿದೆ. ದೆಹಲಿಯ ಅಬಕಾರಿ ನೀತಿಯ ದುರುಪಯೋಗದ ಬಗ್ಗೆ ವ್ಯಾಪಕವಾದ ತನಿಖೆಯ ನಂತರ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಚಾರ್ಜ್ಶೀಟ್ನಲ್ಲಿ ಹೆಚ್ಚಿನ ಆರ್ಥಿಕ ದುರುಪಯೋಗದ ಬಗ್ಗೆ ವಿವರಿಸಲಾಗಿದೆ ಎಂದು ಹೇಳಲಾಗಿದೆ.

ಈ ವರ್ಷದ ಮೇ ತಿಂಗಳ ಆರಂಭದಲ್ಲಿ, ಅಬಕಾರಿ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) 200 ಪುಟಗಳ ಆರೋಪಪಟ್ಟಿಯನ್ನೂ ಸಲ್ಲಿಸಿತ್ತು. ಈಗ ಕೇಂದ್ರ ತನಿಖಾ ದಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರಾಥಮಿಕ ಪಿತೂರಿದಾರರಲ್ಲಿ ಒಬ್ಬರು ಎಂದು ಸಿಬಿಐ ಆರೋಪಿಸಿದೆ. ಎಎಪಿಯ ಮಾಜಿ ಮಾಧ್ಯಮ ಉಸ್ತುವಾರಿ ಮತ್ತು ಅರವಿಂದ್ ಕೇಜ್ರಿವಾಲ್ ಅವರ ನಿಕಟವರ್ತಿ ವಿಜಯ್ ನಾಯರ್ ಹಲವಾರು ಮದ್ಯ ಉತ್ಪಾದಕರು ಮತ್ತು ವ್ಯಾಪಾರಿಗಳೊಂದಿಗೆ ಸಂಪರ್ಕದಲ್ಲಿದ್ದರು ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

ತನಿಖಾ ಸಂಸ್ಥೆಯು ಮದ್ಯದ ನೀತಿಯ ಕುರಿತು ದೆಹಲಿಯ ಮಾಜಿ ಸಚಿವ ಮನೀಶ್ ಸಿಸೋಡಿಯಾ ಅವರ ನಿರ್ಧಾರಗಳಿಗೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಹೇಳಿಕೊಂಡಿದೆ. ಮದ್ಯದ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಯಾವುದೇ ತರ್ಕವಿಲ್ಲದೆ ಶೇಕಡಾ 5 ರಿಂದ 12 ಕ್ಕೆ ಹೆಚ್ಚಿಸಿದ್ದಾರೆ ಎಂದು ತನಿಖಾ ಸಂಸ್ಥೆ ತನ್ನ ಚಾರ್ಜ್ಶೀಟ್ನಲ್ಲಿ ಹೇಳಿದೆ.
"ಅರವಿಂದ್ ಕೇಜ್ರಿವಾಲ್ ಮದ್ಯ ಹಗರಣದ ಪಿತೂರಿಯ ಭಾಗವಾಗಿದ್ದಾರೆ. ದೆಹಲಿ ಸರ್ಕಾರದ ಎಲ್ಲಾ ನಿರ್ಧಾರಗಳನ್ನು ಅವರ ನಿರ್ದೇಶನದಂತೆಯೇ ತೆಗೆದುಕೊಳ್ಳಲಾಗಿದೆ" ಎಂದು ಸಿಬಿಐ ನ್ಯಾಯಾಲಯದ ಮುಂದೆ ಹಿಂದಿನ ವಿಚಾರಣೆಗಳಲ್ಲಿ ಹೇಳಿದೆ. ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯವು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿಸಿತ್ತು. ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆದರೆ ಸಂಬಂಧಿತ ಪ್ರಕರಣದಲ್ಲಿ ಸಿಬಿಐ ಅವರನ್ನು ಬಂಧಿಸಿದ್ದರಿಂದ ಅವರು ಇನ್ನೂ ಜೈಲಿನಲ್ಲಿದ್ದಾರೆ.












Click it and Unblock the Notifications