Bengaluru 2nd Airport: 2ನೇ ಏರ್ಪೋರ್ಟ್ನಿರ್ಮಾಣಕ್ಕೆ ತಮಿಳುನಾಡು ಗ್ರೀನ್ ಸಿಗ್ನಲ್; ಹೊಸೂರು ಬಳಿ ಆ ಸ್ಥಳ ಫೈನಲ್
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡಲು ಬೆಂಗಳೂರು ಸಮೀಪವೇ ನಿರ್ಮಿಸಲು ಉದ್ದೇಶಿಸಿರುವ ಪರ್ಯಾಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಬಂಧ ಕರ್ನಾಟಕದ ಜತೆ ತಮಿಳುನಾಡು ಪೈಪೋಟಿಗೆ ಇಳಿದಿದೆ. ಈಗಾಗಲೇ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಮೂರು ಸ್ಥಳಗಳನ್ನ ಫೈನಲ್ ಮಾಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನ ಸಲ್ಲಿಸಿದೆ. ಇದೀಗ ಬೆಂಗಳೂರು ಹಾಗೂ ಕರ್ನಾಟಕಕ್ಕೆ ಟಕ್ಕರ್ ಕೊಡುವ ರೀತಿಯಲ್ಲಿ ತಮಿಳುನಾಡು ಸರ್ಕಾರವು ತಮಿಳುನಾಡಿನ ಹೊಸೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಮುಂದಿನ ದಿನಗಳಲ್ಲಿ ಒತ್ತಡ ಜಾಸ್ತಿ ಆಗುತ್ತದೆ ಎನ್ನುವ ವಿಷಯ ತಿಳಿಯುತ್ತಿದ್ದಂತೆಯೇ ತಮಿಳುನಾಡು ಅಲರ್ಟ್ ಆಗಿದ್ದು. ಬೆಂಗಳೂರಿನಿಂದ ಕೇವಲ 40 ಕಿ.ಮೀ ದೂರದಲ್ಲಿ ಇರುವ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಸಿದ್ಧತೆ ಮಾಡಿಕೊಂಡಿದೆ. ಇದೀಗ ತಮಿಳುನಾಡು ಹೊಸೂರಿನಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ತಿಳಿದು ಬಂದಿದೆ.

ಸಿಲಿಕಾನ್ ಸಿಟಿಯಲ್ಲಿ ಎರಡನೇ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನ ಆಯ್ಕೆ ಮಾಡಿ ಮೊನ್ನೆಯಷ್ಟೇ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಈ ನಡುವೆ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಎರಡು ಸ್ಥಳ ಸೂಕ್ತ ಅಂತ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಗ್ರೀನ್ ಸಿಗ್ನಲ್ ಪಡೆದುಕೊಂಡು ಬಂದಿದೆ.
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ದಟ್ಟಣೆ ತಗ್ಗಿಸಲು ಎರಡನೇ ವಿಮಾನ ನಿಲ್ದಾಣವನ್ನು ಸ್ಥಾಪಿಸಲು ಕರ್ನಾಟಕ ಸರ್ಕಾರವು ನಿರ್ಧಾರ ಕೈಗೊಂಡಿತ್ತು. ಇತ್ತ ತಮಿಳುನಾಡು ಸರ್ಕಾರ ಕೂಡ ಹೊಸೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಮುಂದಾಗಿತ್ತು. ಆದರೆ, ಕರ್ನಾಟಕ ಸರ್ಕಾರವು ಸ್ಥಳ ಹುಡುಕಾಟ ನಡೆಸಿ 2-3 ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಅಷ್ಟರೊಳಗೆ ತಮಿಳುನಾಡು ಸರ್ಕಾರವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಹೊಸೂರು ಬಳಿಯ 2 ಸ್ಥಳ ಸೂಕ್ತ ಎಂಬ ವರದಿಯನ್ನು ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ.
ಆಯ್ಕೆಯಾದ ಸ್ಥಳಗಳಾವುವು?
ತಮಿಳುನಾಡು ಸರ್ಕಾರವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಹೊಸೂರು ಬಳಿಯ 2 ಸ್ಥಳ ಸೂಕ್ತ ಎಂಬ ವರದಿಯನ್ನು ಪಡೆದುಕೊಂಡಿದ್ದು, ಒಂದು ತನೇಜಾ ಏರೋಸ್ಪೇಸ್ ಮತ್ತು ಏವಿಯೇಷನ್ ಲಿಮಿಟೆಡ್ (TAAL) ವಿಮಾನ ನಿಲ್ದಾಣದಿಂದ ಸುಮಾರು 1.5 ಕಿ.ಮೀ ದೂರದಲ್ಲಿದೆ. ಮತ್ತೊಂದು ಉಲಗಂ ಬಳಿ (ಹೊಸೂರಿನ ಪೂರ್ವ ಮತ್ತು ಶೂಲಗಿರಿಯ ಉತ್ತರ) ಹೊಸೂರಿನಿಂದ ಸುಮಾರು 15.5 ಕಿ.ಮೀ ದೂರದಲ್ಲಿದೆ. ಎಲೆಕ್ಟ್ರಾನಿಕ್ ಸಿಟಿ ಹಾಗೂ ಸರ್ಜಾಪುರ ಎರಡಕ್ಕೂ ಉಲಗಂ ಸಮೀಪದಲ್ಲಿಯೇ ಇದೆ. ಎರಡರಲ್ಲಿ ಒಂದು ಸ್ಥಳವನ್ನು ಆಯ್ಕೆ ಮಾಡಿಕೊಳ್ಳುವಂತೆ ತಮಿಳುನಾಡಿಗೆ ಕೇಂದ್ರ ಸರ್ಕಾರ ತಿಳಿಸಿದೆ.
ಹೊಸ ವಿಮಾನ ನಿಲ್ದಾಣದ ಕುರಿತು ಕರ್ನಾಕಟ ಹಾಗೂ ತಮಿಳುನಾಡು ನಡುವೆ ಜಟಾಪಟಿ ಶುರುವಾಗಿದ್ದು, ಈ ಕುರಿತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಕರ್ನಾಟಕದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಕುರಿತು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವರು ಚರ್ಚೆ ನಡೆಸಿ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ. ಇನ್ನೂ ತಮಿಳುನಾಡು ಸರ್ಕಾರವು 2024ರ ಅಕ್ಟೋಬರ್ನಲ್ಲಿ ಅಧ್ಯಯನಕ್ಕಾಗಿ ಐದು ಸ್ಥಳಗಳನ್ನು ಆಯ್ಕೆ ಮಾಡಿತ್ತು. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಕುರಿತು ಸಾಧ್ಯಾಸಾಧ್ಯತಾ ವರದಿಯನ್ನು ತಮಿಳುನಾಡು ಸರ್ಕಾರಕ್ಕೆ ನೀಡಿದೆ. ಎರಡೂ ಸ್ಥಳಗಳು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತವಾಗಿವೆ ಎಂದು ತಿಳಿದುಬಂದಿದೆ.












Click it and Unblock the Notifications