ಕಾವೇರಿ ನೀರು ಹಂಚಿಕೆ: ಸ್ಕೀಂ ಕರಡು ಸಲ್ಲಿಸಿದ ಕೇಂದ್ರ ಸರ್ಕಾರ
ನವದೆಹಲಿ, ಮೇ 14: ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂಕೋರ್ಟ್ ನಿರ್ದೇಶನದಂತೆ ಸ್ಕೀಂ ಸ್ವರೂಪದ ಕರಡನ್ನು ಕೇಂದ್ರ ಸರ್ಕಾರ ಸಲ್ಲಿಕೆ ಮಾಡಿದೆ.
ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೆರಿಗಳ ನಡುವೆ ಕಾವೇರಿ ನದಿ ನೀರನ್ನು ಹೇಗೆ ಹಂಚಿಕೆ ಮಾಡಬಹುದು ಎಂಬ ಬಗ್ಗೆ ಸ್ಕೀಂ ತಯಾರಿಸಲು ಕರಡು ಸಿದ್ಧಪಡಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು.
ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು ಕಾವೇರಿ ಸ್ಕೀಂನ ಕರಡನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಿದರು.
ಕರಡನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್ ನ್ಯಾಯಪೀಠ, ಮೇ 16ರಂದು ವಿಚಾರಣೆ ನಡೆಸುವುದಾಗಿ ಪೀಠ ಹೇಳಿದೆ. ಕಾವೇರಿ ನೀರು ನಿರ್ವಹಣಾ ಮಂಡಳಿಯನ್ನು ರಚಿಸಲು ಆದೇಶ ನೀಡುವಂತೆ ತಮಿಳುನಾಡು ಇದೇ ಸಂದರ್ಭದಲ್ಲಿ ಸುಪ್ರೀಂಕೋರ್ಟ್ಗೆ ಮತ್ತೆ ಬೇಡಿಕೆ ಸಲ್ಲಿಸಿತು.

ಯಾವ ರಾಜ್ಯಕ್ಕೆ ಎಷ್ಟು ಪ್ರಮಾಣದ ನೀರು ಹಂಚಿಕೆ ಮಾಡಬಹುದು ಎಂಬ ವಿಚಾರವಾಗಿ ಸೂತ್ರ ರಚಿಸಲು ಸ್ಕೀಂನ ಕರಡು ಮೇ 3ರ ಒಳಗೆ ಸಿದ್ಧಪಡಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿತ್ತು.
ಆದರೆ, ಕರ್ನಾಟಕ ವಿಧಾನಸಭೆ ಚುನಾವನೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸಂಪುಟದ ಸಚಿವರು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಹೀಗಾಗಿ ಆ ಅವಧಿಯೊಳಗೆ ಕರಡನ್ನು ಅಂತಿಮಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದ ಕೇಂದ್ರ ಸರ್ಕಾರ, ಎರಡು ವಾರಗಳ ಕಾಲಾವಕಾಶ ಕೇಳಿತ್ತು.
ಸ್ಕೀಂ ಕರಡು ಸಲ್ಲಿಕೆಗೆ ಪದೇ ಪದೇ ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದ ಸುಪ್ರೀಂಕೋರ್ಟ್, ಸೋಮವಾರದಂದು ನಡೆಯಲಿರುವ ವಿಚಾರಣೆ ವೇಳೆ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಕರಡಿನೊಂದಿಗೆ ಹಾಜರಾಗಬೇಕು ಎಂದು ಸೂಚನೆ ನೀಡಿತ್ತು.












Click it and Unblock the Notifications