ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು ಹುಷಾರ್; ಕೇಂದ್ರ ಸರ್ಕಾರದ ಎಚ್ಚರಿಕೆ
ನವದೆಹಲಿ, ಫೆಬ್ರವರಿ 25: ದೇಶದಲ್ಲಿ ಕಳೆದ ಒಂದು ವಾರದಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದ್ದು, ಮತ್ತೆ ಕೊರೊನಾ ಆತಂಕ ಎದುರಾಗಿದೆ. ಐದು ರಾಜ್ಯಗಳಲ್ಲಿ ಅತಿ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಸೂಚನೆ ಹೊರಡಿಸಿದೆ.
ಮಹಾರಾಷ್ಟ್ರ, ಕೇರಳ, ಛತ್ತೀಸ್ ಗಢ, ಮಧ್ಯಪ್ರದೇಶ ಮತ್ತು ಪಂಜಾಬ್ ರಾಜ್ಯಗಳಲ್ಲಿ ಹೆಚ್ಚು ಸೋಂಕಿತರು ಕಂಡುಬಂದಿದ್ದು, ಈ ರಾಜ್ಯಗಳಲ್ಲಿ ಕೊರೊನಾ ಪರೀಕ್ಷೆಯ ಮಾರ್ಗಸೂಚಿಗಳನ್ನು ಉಲ್ಲಂಘಿಸದಂತೆ ಎಚ್ಚರಿಕೆ ನೀಡಲಾಗಿದೆ. ಕೊರೊನಾ ಸೋಂಕಿನ ಹರಡುವಿಕೆ ತಡೆಗೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ. ರಾಜ್ಯಗಳಲ್ಲಿ ಜನರು ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಸುತ್ತೋಲೆ ಹೊರಡಿಸಿದೆ. ಜೊತೆಗೆ ಈಗಾಗಲೇ ಸೋಂಕು ಹೆಚ್ಚಿರುವ ರಾಜ್ಯಗಳಲ್ಲಿ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಮಾಡಿದರೆ ಈಗಿರುವ ಪರಿಸ್ಥಿತಿ ಹದಗೆಡುವುದರಲ್ಲಿ ಸಂಶಯವೇ ಇಲ್ಲ ಎಂದು ತಿಳಿಸಿದೆ. ಮುಂದೆ ಓದಿ...
ಹುಷಾರ್; ಬೆಂಗಳೂರಿನಲ್ಲಿ ಮತ್ತೆ ಲಾಕ್ಡೌನ್ ಎಚ್ಚರಿಕೆ ಕೊಟ್ಟ ಬಿಬಿಎಂಪಿ ಆಯುಕ್ತ
ಪರಿಸ್ಥಿತಿ ಹದಗೆಡಬಹುದು ಹುಷಾರ್
ಕೊರೊನಾ ಸೋಂಕು ತಗ್ಗಿದೆಯೆಂದು ಜನರು ಮಾಸ್ಕ್ ಧರಿಸುವುದನ್ನು ಬಿಟ್ಟಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನೂ ಮರೆಯುತ್ತಿದ್ದಾರೆ ಎಂದು ಎಚ್ಚರಿಸಿರುವ ಕೇಂದ್ರ ಸರ್ಕಾರ, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವತ್ತ ರಾಜ್ಯಗಳು ನಿಗಾ ವಹಿಸಬೇಕು. ಇಲ್ಲದಿದ್ದರೆ ಈಗಿರುವ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು ಎಂದು ಎಚ್ಚರಿಕೆ ನೀಡಿದೆ.
ಹತ್ತು ರಾಜ್ಯಗಳಿಗೆ ಕೇಂದ್ರ ತಂಡ ಭೇಟಿ
ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವ ದೇಶದ 10 ರಾಜ್ಯಗಳಿಗೆ ಕೇಂದ್ರದ ತಜ್ಞರ ತಂಡವು ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಮಹಾರಾಷ್ಟ್ರ, ಕೇರಳ, ಚತ್ತೀಸ್ ಗಢ, ಮಧ್ಯ ಪ್ರದೇಶ, ಗುಜರಾತ್, ಪಂಜಾಬ್, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿರುವ ತಜ್ಞರ ತಂಡ ಕೊರೊನಾ ವೈರಸ್ ನಿಯಂತ್ರಿಸುವ ಮತ್ತು ನಿರ್ವಹಿಸುವ ಬಗ್ಗೆ ಸಲಹೆ ಸೂಚನೆಗಳನ್ನು ನೀಡಲಿದೆ.
11.3 ಮಿಲಿಯನ್ ಮುಟ್ಟಿದ ಸೋಂಕಿತರ ಸಂಖ್ಯೆ
ಭಾರತದಲ್ಲಿ ಇದುವರೆಗೂ ದಾಖಲಾದ ಕೊರೊನಾ ಸೋಂಕಿತರ ಸಂಖ್ಯೆ 11.3ಮಿಲಿಯನ್ಗೆ ಮುಟ್ಟಿದೆ. ಕಳೆದ 24 ಗಂಟೆಗಳಲ್ಲಿ 13742 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಆದರೆ ಸೋಂಕಿತರ ಜೊತೆಗೆ ಗುಣಮುಖರಾದವರ ಸಂಖ್ಯೆ ಕೂಡ ಹೆಚ್ಚಾಗಿರುವುದು ಸಮಾಧಾನಕರ ಸಂಗತಿ ಎನಿಸಿದೆ. ಕಳೆದ 24 ಗಂಟೆಗಳಲ್ಲಿ 14,037 ಸೋಂಕಿತರು ಗುಣಮುಖರಾಗಿದ್ದು, 104 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
5 ರಾಜ್ಯಗಳಿಂದ ದೆಹಲಿಗೆ ಬರುವವರಿಗೆ ನೆಗೆಟಿವ್ ವರದಿ ಕಡ್ಡಾಯ
ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ದೆಹಲಿ ಸರ್ಕಾರ ಹೊಸ ನಿಯಮ ಜಾರಿಗೊಳಿಸಿದೆ. ಐದು ರಾಜ್ಯಗಳಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ಕೊವಿಡ್-19 ನೆಗೆಟಿವ್ ವರದಿ ತರುವಂತೆ ನಿಯಮ ಜಾರಿಗೊಳಿಸಲಾಗುತ್ತಿದೆ. ಮಹಾರಾಷ್ಟ್ರ, ಕೇರಳ, ಛತ್ತೀಸ್ ಗಢ, ಮಧ್ಯಪ್ರದೇಶ ಮತ್ತು ಪಂಜಾಬ್ ರಾಜ್ಯಗಳಿಂದ ನವದೆಹಲಿಗೆ ತೆರಳುವ ಪ್ರಯಾಣಿಕರು ಕೊರೊನಾವೈರಸ್ RT-PCR ಪರೀಕ್ಷೆಗೆ ಒಳಪಡಬೇಕು. ನೆಗೆಟಿವ್ ವರದಿ ಹೊಂದಿದ ಪ್ರಯಾಣಿಕರಿಗೆ ಮಾತ್ರ ದೆಹಲಿ ಪ್ರವೇಶಿಸುವುದಕ್ಕೆ ಅನುಮತಿ ನೀಡಲಾಗುತ್ತದೆ. ಫೆಬ್ರವರಿ 26 ರಿಂದ ಮಾರ್ಚ್15ರವರೆಗೂ ಈ ನಿಯಮ ಜಾರಿಯಲ್ಲಿರುತ್ತದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.