ಅಗ್ನಿಪಥ್ ಯೋಜನೆ ಬಗ್ಗೆ ಸುಳ್ಳು ಸುದ್ದಿ ಹರಡಿದ 35 ವಾಟ್ಸಾಪ್ ಗ್ರೂಪ್ ನಿರ್ಬಂಧ
ನವದೆಹಲಿ, ಜೂನ್ 20: ದೇಶದ ಸಶಸ್ತ್ರ ಪಡೆಗಳ ನೇಮಕಾತಿಗಾಗಿ ಹೊಸದಾಗಿ ಘೋಷಿಸಿದ ಅಗ್ನಿಪಥ್ ಯೋಜನೆಯ ಕುರಿತು ಸುಳ್ಳು ಸುದ್ದಿಗಳನ್ನು ಹರಡಿದ 35 ವಾಟ್ಸಾಪ್ ಗ್ರೂಪ್ ಅನ್ನು ಕೇಂದ್ರ ಸರ್ಕಾರವು ಭಾನುವಾರ ನಿರ್ಬಂಧಿಸಿದೆ.
ಅಗ್ನಿಪಥ್ ಯೋಜನೆಯ ಕುರಿತು ತಪ್ಪು ಮಾಹಿತಿಯನ್ನು ಹರಡುವ ಹಾಗೂ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿರುವವರನ್ನು ಪತ್ತೆ ಮಾಡಲಾಗುತ್ತಿದೆ. ಆ ಮೂಲಕ ಪರಿಸ್ಥಿತಿ ನಿಯಂತ್ರಿಸುವ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುದಕ್ಕೆ ಸರ್ಕಾರ ಮುಂದಾಗಿದೆ.
ಅಗ್ನಿಪಥ್ನ ಕುರಿತು ಸುಳ್ಳು ಸುದ್ದಿಗಳನ್ನು ಹರಡಿ ಯುವಕರನ್ನು ದಾರಿ ತಪ್ಪಿಸಿದ್ದಕ್ಕಾಗಿ ಕನಿಷ್ಠ 10 ಜನರನ್ನು ಬಂಧಿಸಲಾಗಿದೆ. ಈ ಯೋಜನೆಗೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸಲು ಪತ್ರಿಕಾ ಮಾಹಿತಿ ಬ್ಯೂರೋ ಸತ್ಯ ಪರಿಶೀಲನಾ ಮಾರ್ಗವನ್ನು ಸಹ ತೆರೆದಿದೆ. ಕಳೆದ ಮಂಗಳವಾರ ಘೋಷಣೆಯಾದ ದಿನದಿಂದ ದೇಶದ ವಿವಿಧ ಭಾಗಗಳಲ್ಲಿ ಅಗ್ನಿಪಥ್ ಯೋಜನೆಯ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವುದರ ಮಧ್ಯೆ ಕೇಂದ್ರ ಸರ್ಕಾರವು ಈ ಕ್ರಮವನ್ನು ತೆಗೆದುಕೊಂಡಿದೆ.

ವಾಟ್ಸಾಪ್ ಮೂಲಕ ಬಿಹಾರದಲ್ಲಿ ಹಿಂಸಾಚಾರಕ್ಕೆ ಸಿದ್ಧತೆ
ಕಳೆದ ಜೂನ್ 17ರಂದು ಬಿಹಾರದಲ್ಲಿ ಅಗ್ನಿಪಥ್ ಯೋಜನೆ ವಿರುದ್ಧ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿತು. ಉಪ ಮುಖ್ಯಮಂತ್ರಿ ರೇಣು ದೇವಿ ಮನೆ ಮೇಲೆ ಹಾಗೂ ರೈಲ್ವೆ ನಿಲ್ದಾಣಗಳಿಗೆ ನುಗ್ಗಿದ ಉದ್ರಿಕ್ತರ ಗುಂಪು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡಿದ್ದರು. ಈ ಹಿಂಸಾಚಾರದ ಪೂರ್ವ ಸಿದ್ಧತೆಗಾಗಿ ವಾಟ್ಸಾಪ್ ಗ್ರೂಪ್ ಅನ್ನು ಬಳಕೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆ ಕೇಂದ್ರ ಗೃಹ ಸಚಿವಾಲಯವು ಶಿಸ್ತು ಕ್ರಮವನ್ನು ತೆಗೆದುಕೊಂಡಿದೆ. ಸುಳ್ಳು ಸುದ್ದಿಗಳ ಬಗ್ಗೆ ಖಾತ್ರಿಪಡಿಸಿಕೊಳ್ಳುವುದಕ್ಕಾಗಿಯೇ ಕೇಂದ್ರ ಸರ್ಕಾರವು 8799711259 ವಾಟ್ಸಾಪ್ ಸಂಖ್ಯೆಯನ್ನು ಸಹ ನೀಡಿದೆ.

ಬಿಹಾರದಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ
ಅಗ್ನಿಪಥ್ ಯೋಜನೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಮತ್ತು ಹಿಂಸಾಚಾರವನ್ನು ನಿಯಂತ್ರಿಸುವ ಉದ್ದೇಶದಿಂದ ಬಿಹಾರ ಸರ್ಕಾರ ಸಹ ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ. ಕಳೆದ ಜೂನ್ 17 ರಿಂದ ಭಾನುವಾರದವರೆಗೆ ರಾಜ್ಯದ 12 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಏಕೆಂದರೆ ಸಾರ್ವಜನಿಕರನ್ನು ಪ್ರಚೋದಿಸುವ ಮತ್ತು ಜೀವ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡುವ ಉದ್ದೇಶದಿಂದ ವದಂತಿಗಳನ್ನು ಹರಡಲು ಆಕ್ಷೇಪಾರ್ಹ ವಿಷಯವನ್ನು ಪ್ರಸಾರ ಮಾಡಲು ಇಂಟರ್ನೆಟ್ ಅನ್ನು ಬಳಸಲಾಗುತ್ತಿದೆ ಎಂದು ತಿಳಿದು ಬಂದಿತ್ತು.

ಬಿಹಾರವೊಂದರಲ್ಲೇ 60ಕ್ಕೂ ಹೆಚ್ಚು ರೈಲು ಸಂಚಾರ ರದ್ದು
"ಕಳೆದ ಮೂರು ದಿನಗಳಲ್ಲಿ ಬಿಹಾರದಲ್ಲಿ ಸುಮಾರು 620 ಜನರನ್ನು ಬಂಧಿಸಲಾಗಿದ್ದು, 130 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ" ಎಂದು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿ ಸಂಜಯ್ ಸಿಂಗ್ ಈ ಹಿಂದೆ ತಿಳಿಸಿದ್ದಾರೆ. ಅದೇ ರೀತಿ ಶನಿವಾರ ಅಗ್ನಿಪಥ್ ನೇಮಕಾತಿ ಯೋಜನೆಯ ವಿರುದ್ಧ ಪ್ರತಿಭಟನೆ ನಡೆಸಿದ 140 ಜನರನ್ನು ಬಂಧಿಸಲಾಗಿದೆ" ಎಂದು ತಿಳಿಸಿದ್ದಾರೆ. ಪೂರ್ವ ಕೇಂದ್ರ ರೈಲ್ವೇ ಪ್ರಕಾರ, ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಹಿನ್ನೆಲೆ ಪ್ರಯಾಣಿಕರಿಗೆ ಹಾಗೂ ರೈಲ್ವೆ ಆಸ್ತಿಗೆ ಬೆದರಿಕೆಯಿರುವ ಹಿನ್ನೆಲೆ ಬಿಹಾರದಲ್ಲಿ 60ಕ್ಕೂ ಹೆಚ್ಚು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು.

ಅಗ್ನಿಪಥ್ ಯೋಜನೆಯನ್ನು ಪರಿಚಯಿಸಿದ ಸಿಂಗ್
ಕೇಂದ್ರ ಸರ್ಕಾರದ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಈ ಹಿಂದೆ "ಟೂರ್ ಆಫ್ ಡ್ಯೂಟಿ" ಎಂದು ನಾಮಕರಣ ಮಾಡಲಾಯಿತು. ಇದನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮೂರು ಸೇವೆಗಳ ಮುಖ್ಯಸ್ಥರ ಸಮ್ಮುಖದಲ್ಲಿ ಪ್ರಾರಂಭಿಸಲಾಯಿತು. ಕೇಂದ್ರ ಸರ್ಕಾರವು ಜೂನ್ 14ರ ಮಂಗಳವಾರ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಅನಾವರಣಗೊಳಿಸಿದ್ದು, ಇದನ್ನು "ಪರಿವರ್ತನೆ" ಯೋಜನೆ ಎಂದು ಕರೆಯಿತು. ದೇಶದ ಭೂ ಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ಸೈನಿಕರ ನೇಮಕಾತಿಗಾಗಿ ಈ ಯೋಜನೆಯನ್ನು ಜಾರಿಗೊಳಿಸಲಾಯಿತು.

ಅಗ್ನಿಪಥ್ ನೇಮಕಾತಿ ಯೋಜನೆ
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯು ದೇಶದ ಮೂರು ಸೇನೆಗಳಿಗೆ ಯೋಧರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿದ್ದಾಗಿದೆ. 17.5 ರಿಂದ 23 ವಯೋಮಾನ ಯುವಕರನ್ನು ಒಪ್ಪಂದದ ಮೇರೆಗೆ ನಾಲ್ಕು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಅವಧಿಯಲ್ಲಿ 6 ತಿಂಗಳು ತರಬೇತಿಯೂ ಸೇರಿರುತ್ತದೆ. ನಾಲ್ಕು ವರ್ಷದ ಸೇವಾವಧಿಯಲ್ಲಿ ಮಾಸಿಕ 30 ರಿಂದ 40 ಸಾವಿರ ರೂಪಾಯಿ ವೇತನದ ಜೊತೆಗೆ ವೈದ್ಯಕೀಯ ವಿಮೆ ಮತ್ತು ಆರೋಗ್ಯ ವಿಮೆ ಸೌಲಭ್ಯವನ್ನು ನೀಡಲಾಗುತ್ತದೆ.
ಆದರೆ ನಾಲ್ಕು ವರ್ಷಗಳ ನಂತರ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಶೇ.75ರಷ್ಟು ಯೋಧರನ್ನು ಸೇನೆಯಿಂದ ವಿಮುಕ್ತಿಗೊಳಿಸಲಾಗುವುದು. ತದನಂತರದಲ್ಲಿ ಈ ಯೋಧರಿಗೆ ಯಾವುದೇ ರೀತಿ ಪಿಂಚಣಿ ಸೌಲಭ್ಯವನ್ನು ನೀಡಲಾಗುವುದಿಲ್ಲ.
ಮುಂದಿನ ಒಂದೂವರೆ ವರ್ಷದ ಅವಧಿಯಲ್ಲಿ ಅಗ್ನಿಪಥ್ ಯೋಜನೆ ಅಡಿಯಲ್ಲಿ ಸುಮಾರು 10 ಲಕ್ಷ ಯುವಕರಿಗೆ ಉದ್ಯೋಗವನ್ನು ಕಲ್ಪಿಸುವ ಗುರಿಯೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.












Click it and Unblock the Notifications