ಸಚಿವರ ಮಾತು: ಹೊಸ ಕೃಷಿ ಕಾಯ್ದೆಗಳಿಂದ ದೇಶದ ರೈತರೆಲ್ಲ ಶ್ರೀಮಂತ!
ನವದೆಹಲಿ, ಮಾರ್ಚ್.04: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಸಂಬಂಧಿತ ಕಾಯ್ದೆಗಳು ದೇಶದ ಆರ್ಥಿಕತೆ ಬೆನ್ನೆಲುಬು ಆಗಿರುವ ರೈತರ ಆದಾಯ ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಹಾಗೂ ಏಷಿಯ-ಫೆಸಿಫಿಕ್ ಗ್ರಾಮೀಣ ಮತ್ತು ಕೃಷಿ ಸಹಕಾರಿ ಸಂಘಗಳು ಜಂಟಿ ವೇದಿಕೆಯಲ್ಲಿ "ಕೃಷಿ ವ್ಯವಹಾರ ಸಮೂಹಕ್ಕೆ ಉತ್ತೇಜನ ಮತ್ತು ಸಾಲ ವರ್ಧಕ ಸಾಧನಗಳನ್ನು ಅಭಿವೃದ್ಧಿಗೆ ಬೆಂಬಲ" ಎಂಬ ವಿಚಾರದ ಬಗ್ಗೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಾತನಾಡಿದರು.
ಕೇಂದ್ರಕ್ಕೆ ಧಿಕ್ಕಾರ: ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ರೈತರ ತಿರಸ್ಕಾರ
"ಭಾರತದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ" ಯೋಜನೆ ಅಡಿಯಲ್ಲಿ 1.75 ಕೋಟಿ ರೈತರ ಬ್ಯಾಂಕ್ ಖಾತೆಗೆ 1.15 ಲಕ್ಷ ಕೋಟಿ ರೂಪಾಯಿ ಹಣವನ್ನು ನೀಡಲಾಗಿದೆ. ಕೇಂದ್ರದ ಬಿಜೆಪಿ ಸರ್ಕಾರವು ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.
ಆರ್ಥಿಕತೆ ವೃದ್ಧಿಸಲು ರೈತರನ್ನು ಶ್ರೀಮಂತಗೊಳಿಸಬೇಕು
ದೇಶದಲ್ಲಿ ರೈತರು ಶ್ರೀಮಂತರಾಗದೇ ಹೊರತೂ, ಆರ್ಥಿಕತೆ ಸುಧಾರಿಸುವುದಕ್ಕೆ ಸಾಧ್ಯವಿಲ್ಲ ಎಂಬ ಸತ್ಯ ನಮಗೆ ಗೊತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರೈತರ ಆದಾಯವನ್ನು ದ್ವಿಗುಣಗೊಳಿಸುವ ಮೂಲಕ ಅವರನ್ನು ಶ್ರೀಮಂತರನ್ನಾಗಿ ಮಾಡುವ ಗುರಿಯನ್ನು ಹೊಂದಿದೆ. ರೈತರ ಆದಾಯ ಹೆಚ್ಚಾದರೆ ಸಹಜವಾಗಿ ದೇಶದ ಆರ್ಥಿಕತೆಯು ಸದೃಢವಾಗಿರಲಿದೆ ಎಂದು ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ಹೊಸ ಕೃಷಿ ಕಾಯ್ದೆಗಳಿಂದ ಹೊಸ ಕ್ರಾಂತಿ
ಭಾರತದಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಆದಾಯವನ್ನು ವೃದ್ಧಿಸುವ ನಿಟ್ಟಿನಲ್ಲಿ ಹೊಸ ಕ್ರಾಂತಿಯನ್ನು ಹುಟ್ಟು ಹಾಕಲಿವೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಮೂರು ಕೃಷಿ ಕಾಯ್ದೆಗಳಿಂದ ರೈತರ ಆದಾಯ ದ್ವಿಗುಣಗೊಳ್ಳಲಿದ್ದು, ರೈತರಿಗೆ ಹೆಚ್ಚಿನ ಲಾಭಗಳಿವೆ ಎಂದು ಹೇಳಿದ್ದಾರೆ.
ರೈತರಿಗೆ ಹಾನಿಕಾರಕ: ವಿವಾದಿತ 3 ಕೃಷಿ ಕಾಯ್ದೆಗಳ ಬಗ್ಗೆ ವಿವರಣಾತ್ಮಕ ಪಾಠ
ಕೃಷಿ ಕಾಯ್ದೆಗಳ ಬಗ್ಗೆ ರೈತರೊಂದಿಗೆ ಚರ್ಚೆಗೆ ಸಿದ್ಧ
ಕೃಷಿ ಕಾಯ್ದೆಗಳ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತನ್ನ ನಿಲುವಿಗೆ ಬದ್ಧವಾಗಿದೆ. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಜೊತೆಗೆ ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆಸಿದ್ದೇವೆ. ಕೃಷಿ ಕಾಯ್ದೆಗಳಲ್ಲಿ ಲೋಪವಿರುವ ಬಗ್ಗೆ ನೀವು ವಾದವನ್ನು ಬೇಕಿದ್ದಲ್ಲಿ ಮಂಡಿಸಬಹುದು. ಅಗತ್ಯವಿದ್ದಲ್ಲಿ ರೈತರೊಂದಿಗೆ ಮತ್ತೊಂದು ಸುತ್ತಿನ ಸಂಧಾನ ಮಾತುಕತೆ ನಡೆಸುವುದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಕಳೆದ ಫೆಬ್ರವರಿ.25ರಂದು ಸಚಿವ ನರೇಂದ್ರ ಸಿಂಗ್ ತೋಮರ್ ಆಹ್ವಾನ ನೀಡಿದ್ದರು.
100 ದಿನಗಳಿಂದ ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ
ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ನವಂಬರ್.26 ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ 100 ದಿನಗಳಿಂದಲೂ ರೈತರು ಹೋರಾಟ ನಡೆಸುತ್ತಿದ್ದಾರೆ. ಈ ರೈತ ಹೋರಾಟದಲ್ಲಿ ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದಾರೆ.