ಅಗ್ನಿಪಥ್ ವೀರರಿಗೆ ಸಿಎಪಿಎಫ್, ಅಸ್ಸಾಂ ರೈಫಲ್ಸ್ನಲ್ಲಿ ಶೇ.10ರಷ್ಟು ಮೀಸಲಾತಿ
ನವದೆಹಲಿ, ಜೂನ್ 18: ಅಗ್ನಿಪಥ್ ನೇಮಕಾತಿ ಯೋಜನೆ ವಿರುದ್ಧ ಉಗ್ರ ಪ್ರತಿಭಟನೆಗಳು ನಡೆಯುತ್ತಿರುವುದರ ಮಧ್ಯೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPFs) ಮತ್ತು ಅಸ್ಸಾಂ ರೈಫಲ್ಸ್ನಲ್ಲಿ 'ಅಗ್ನಿವೀರ್'ಗಳಿಗೆ ಶೇ.10ರಷ್ಟು ಮೀಸಲಾತಿ ನೀಡಲಾಗುವುದು ಎಂದು ಸರ್ಕಾರ ಪ್ರಕಟಿಸಿದೆ.
ದೇಶದ ಎರಡು ಅರೆಸೇನಾ ಪಡೆಗಳಲ್ಲಿ ನೇಮಕಾತಿಗಾಗಿ ಅಗ್ನಿವೀರ್ಗಳಿಗೆ ನಿಗದಿತ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ಸಿಕಂದರಾಬಾದ್ನಲ್ಲಿ ಬೆಂಕಿ ಹಚ್ಚಿದ ರೈಲಿನಿಂದ ಬಚಾವ್ ಆಗಿದ್ದು ಹೇಗೆ 40 ಪ್ರಯಾಣಿಕರು!?
ಅಗ್ನಿವೀರ್ನ ಮೊದಲ ಬ್ಯಾಚ್ ನಿಗದಿತ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ ಐದು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ಪಡೆಯಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಗ್ನಿವೀರರಿಗೆ CAPF ನೇಮಕಾತಿಯಲ್ಲಿ ಆದ್ಯತೆ
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಳಲ್ಲಿ 'ಅಗ್ನಿವೀರ್'ಗಳಿಗೆ ಆದ್ಯತೆ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಹೊಸ ಸೇನಾ ನೇಮಕಾತಿ ಯೋಜನೆಯ ವಯೋಮಿತಿಯನ್ನು 21 ರಿಂದ 23ಕ್ಕೆ "ಒಂದು ಬಾರಿ" ಬದಲಾವಣೆಯನ್ನು ಕೇಂದ್ರ ಸರ್ಕಾರವು ಈಗಾಗಲೇ ಘೋಷಿಸಿದೆ. ಕಳೆದ ಎರಡು ವರ್ಷಗಳಿಂದ ಯಾವುದೇ ನೇಮಕಾತಿ ನಡೆಯದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪ್ರಸ್ತುತ 73 ಸಾವಿರಕ್ಕೂ ಅಧಿಕ ಹುದ್ದೆಗಳು ಖಾಲಿ
ಪ್ರಸ್ತುತ ಅರೆಸೈನಿಕ ಪಡೆಗಳ ಐದು ವಿಭಾಗಗಳಲ್ಲಿ 73,000ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಗಡಿ ಭದ್ರತಾ ಪಡೆ (BSF), ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF), ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP), ಶಾಸ್ತ್ರ ಸೀಮಾ ಬಾಲ್ (SSB), ಮತ್ತು ಕೇಂದ್ರ ಕೈಗಾರಿಕಾ ಭದ್ರತೆ ಫೋರ್ಸ್ (ಸಿಐಎಸ್ಎಫ್) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.
ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್ನಲ್ಲಿ 73,219 ಹುದ್ದೆಗಳು ಖಾಲಿ ಇವೆ. ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೊಲೀಸ್ ಪಡೆಗಳಲ್ಲಿ 18,124 ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಗೃಹ ಸಚಿವಾಲಯದ ಅಂಕಿ-ಅಂಶಗಳು ಸೂಚಿಸುತ್ತವೆ.
ಅಗ್ನಿಪಥ್ ಯೋಜನೆ ಘೋಷಿಸಿದ್ದು ಯಾವಾಗ?
ಕೇಂದ್ರ ಸರ್ಕಾರವು ಮಂಗಳವಾರ ಅಗ್ನಿಪಥ್ ಅನ್ನು ಅನಾವರಣಗೊಳಿಸಿದ್ದು, ಇದನ್ನು "ಪರಿವರ್ತನೆ"ಯ ಯೋಜನೆ ಎಂದು ಕರೆದಿದೆ. ದೇಶದ ಭೂ ಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ಸೈನಿಕರ ನೇಮಕಾತಿಗಾಗಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಆದಾಗ್ಯೂ, ಈ ಯೋಜನೆಯು "ವಿವಾದಾತ್ಮಕವಾಗಿದೆ. ಕೇಂದ್ರ ಸರ್ಕಾರದ ಈ ಯೋಜನೆಯು ಬಹು ಅಪಾಯಕಾರಿ ಆಗಿದ್ದು, ದೀರ್ಘಕಾಲದ ಸಂಪ್ರದಾಯಗಳನ್ನು ಬುಡಮೇಲು ಮಾಡುತ್ತದೆ," ಎಂದು ಕಾಂಗ್ರೆಸ್ ಟೀಕಿಸಿದೆ.
ಏನಿದು ಅಗ್ನಿಪಥ್ ನೇಮಕಾತಿ ಯೋಜನೆ?
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯು ದೇಶದ ಮೂರು ಸೇನೆಗಳಿಗೆ ಯೋಧರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿದ್ದಾಗಿದೆ. 17.5 ರಿಂದ 23 ವಯೋಮಾನ ಯುವಕರನ್ನು ಒಪ್ಪಂದದ ಮೇರೆಗೆ ನಾಲ್ಕು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಅವಧಿಯಲ್ಲಿ 6 ತಿಂಗಳು ತರಬೇತಿಯೂ ಸೇರಿರುತ್ತದೆ. ನಾಲ್ಕು ವರ್ಷದ ಸೇವಾವಧಿಯಲ್ಲಿ ಮಾಸಿಕ 30 ರಿಂದ 40 ಸಾವಿರ ರೂಪಾಯಿ ವೇತನದ ಜೊತೆಗೆ ವೈದ್ಯಕೀಯ ವಿಮೆ ಮತ್ತು ಆರೋಗ್ಯ ವಿಮೆ ಸೌಲಭ್ಯವನ್ನು ನೀಡಲಾಗುತ್ತದೆ.
ಆದರೆ ನಾಲ್ಕು ವರ್ಷಗಳ ನಂತರ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಶೇ.75ರಷ್ಟು ಯೋಧರನ್ನು ಸೇನೆಯಿಂದ ವಿಮುಕ್ತಿಗೊಳಿಸಲಾಗುವುದು. ತದನಂತರದಲ್ಲಿ ಈ ಯೋಧರಿಗೆ ಯಾವುದೇ ರೀತಿ ಪಿಂಚಣಿ ಸೌಲಭ್ಯವನ್ನು ನೀಡಲಾಗುವುದಿಲ್ಲ.
ಮುಂದಿನ ಒಂದೂವರೆ ವರ್ಷದ ಅವಧಿಯಲ್ಲಿ ಅಗ್ನಿಪಥ್ ಯೋಜನೆ ಅಡಿಯಲ್ಲಿ ಸುಮಾರು 10 ಲಕ್ಷ ಯುವಕರಿಗೆ ಉದ್ಯೋಗವನ್ನು ಕಲ್ಪಿಸುವ ಗುರಿಯೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.