ಕೊವಿಡ್-19 ಹೆಚ್ಚಿದ 5 ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಪತ್ರ
ನವದೆಹಲಿ, ಏಪ್ರಿಲ್ 8: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಏರಿಕೆ ಆಗುತ್ತಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ.
ಕಳೆದ ವಾರ ಕೊವಿಡ್-19 ಸೋಂಕಿತ ಪ್ರಕರಣಗಳು ಹೆಚ್ಚಾಗಿರುವ ದೆಹಲಿ, ಹರಿಯಾಣ, ಕೇರಳ, ಮಹಾರಾಷ್ಟ್ರ ಮತ್ತು ಮಿಜೋರಾಂ ರಾಜ್ಯಗಳ ಆರೋಗ್ಯ ಕಾರ್ಯದರ್ಶಿಗಳ ಜೊತೆಗೆ ರಾಜೇಶ್ ಭೂಷಣ್ ಸಭೆ ನಡೆಸಲಿದ್ದಾರೆ.
ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಏರಿಕೆ ಮೇಲೆ ನಿಗಾ ವಹಿಸುವುದು ಹಾಗೂ ಅಗತ್ಯಬಿದ್ದರೆ ಪೂರ್ವಭಾವಿಯಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಸೂಚನೆ ನೀಡಿದೆ.

18 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್:
ದೇಶದ ಖಾಸಗಿ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಏಪ್ರಿಲ್ 10 ರಿಂದ ಕೋವಿಡ್-19 ಬೂಸ್ಟರ್ ಲಸಿಕೆಯನ್ನು ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಘೋಷಿಸಿದೆ. 18 ವರ್ಷ ಮೇಲ್ಪಟ್ಟ ನೀವು ಎರಡನೇ ಡೋಸ್ ಪಡೆದು 9 ತಿಂಗಳು ಆಗಿದ್ದರೆ, ಬೂಸ್ಟರ್ ಡೋಸ್ ಪಡೆದುಕೊಳ್ಳುವುದಕ್ಕೆ ಅರ್ಹರಾಗಿರುತ್ತೀರಿ.
ಹಲವು ರಾಜ್ಯಗಳ ಆರೋಗ್ಯಾಧಿಕಾರಿಗಳ ಜೊತೆ ಸಭೆ:
ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಶನಿವಾರ ಮಹತ್ವದ ಸಭೆ ನಡೆಸಲಿದ್ದಾರೆ. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರದ ಕಾರ್ಯದರ್ಶಿ, ಆರೋಗ್ಯ ಅಧಿಕಾರಿಗಳ ಜೊತೆಗೆ ರಾಜ್ಯದ ಕೊವಿಡ್-19 ಪರಿಸ್ಥಿತಿಯ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಭಾರತದಲ್ಲಿ ಶೇ.96ರಷ್ಟು ಮಂದಿಗೆ ಮೊದಲ ಡೋಸ್:
ದೇಶದಲ್ಲಿ 15 ವರ್ಷ ಮೇಲ್ಪಟ್ಟವರಲ್ಲಿ ಶೇ.96ರಷ್ಟು ಮಂದಿ ಮೊದಲ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಅದೇ ರೀತಿ 15 ವರ್ಷ ಮೇಲ್ಪಟ್ಟ ಶೇ.83ರಷ್ಟು ಫಲಾನುಭವಿಗಳು ಎರಡೂ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಕೊವಿಡ್-19 ಲಸಿಕೆ ವಿತರಣೆ ಪ್ರಾರಂಭವಾಗಿ 447 ದಿನಗಳೇ ಕಡೆದಿದ್ದು, ಇದುವರೆಗೂ 185 ಕೋಟಿ ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೂ ಎಷ್ಟು ಜನರಿಗೆ ಲಸಿಕೆ ವಿತರಣೆ?:
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗುತ್ತಿರುವುದರ ಮಧ್ಯೆ ಲಸಿಕೆ ವಿತರಣೆ ವೇಗ ಹೆಚ್ಚಿಸಲಾಗಿದೆ. ದೇಶದಲ್ಲಿ ಇದುವರೆಗೂ 185,36,60,641 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ಈ ನಡುವೆ 99,19,34,228 ಮಂದಿಗೆ ಮೊದಲ ಡೋಸ್, 83,76,84,372 ಜನರಿಗೆ ಎರಡನೇ ಡೋಸ್ ಹಾಗೂ 2,40,42,041 ಬೂಸ್ಟರ್ ಡೋಸ್ ವಿತರಣೆ ಮಾಡಲಾಗಿದೆ.
ದೇಶದಲ್ಲಿ ಒಂದೇ ದಿನ 1,109 ಮಂದಿಗೆ ಕೊವಿಡ್:
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದು ಸಾವಿರಕ್ಕಿಂತ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,109 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 44 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 1,213 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,033,067ಕ್ಕೆ ಏರಿಕೆಯಾಗಿದೆ. ಈ ಪೈಕಿ 42,500,002 ಸೋಂಕಿತರು ಗುಣಮುಖರಾಗಿದ್ದರೆ, 521,604 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 11,461 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications