ಬಿಜೆಪಿ ವಿರೋಧಿ ಪಕ್ಷಗಳ ಸಭೆ ಕರೆದ ಚಂದ್ರಬಾಬು ನಾಯ್ಡು
ಬೆಂಗಳೂರು, ನವೆಂಬರ್ 11 : 2019ರ ಲೋಕಸಭಾ ಚುನಾವಣೆಗೆ ಬಿಜೆಪಿ ವಿರೋಧಿ ಮೈತ್ರಿಕೂಟ ರಚನೆ ಕಸರತ್ತು ಮುಂದುವರೆದಿದೆ. ನವೆಂಬರ್ 22ರಂದು ಚಂದ್ರಬಾಬು ನಾಯ್ಡು ಅವರು ಬಿಜೆಪಿ ವಿರೋಧಿ ಪಕ್ಷಗಳ ಸಭೆ ಕರೆದಿದ್ದಾರೆ.
ಕೇಂದ್ರದ ಎನ್ಡಿಎ ಸರ್ಕಾರದ ವಿರುದ್ಧ ತೃತೀಯ ರಂಗ ರಚನೆ ಮಾಡಲು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಯತ್ನ ಪಡುತ್ತಿದ್ದಾರೆ. ಅದಕ್ಕಾಗಿ ವಿವಿಧ ಪ್ರಾದೇಶಿಕ ಪಕ್ಷದ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರನ್ನು ಭೇಟಿ ಮಾಡಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ವಿವಿಧ ಪಕ್ಷಗಳ ಜೊತೆ ಮಾತುಕತೆ ನಡೆಸಲು ನವೆಂಬರ್ 22ರಂದು ಸಭೆ ಕರೆದಿದ್ದಾರೆ.

ನವದೆಹಲಿಯಲ್ಲಿರುವ ಆಂಧ್ರಪ್ರದೇಶದ ಭವನದಲ್ಲಿ ಈ ಸಭೆ ನಡೆಯಲಿದೆ. ಬಿಜೆಪಿ ವಿರೋಧಿ ಮೈತ್ರಿಕೂಟ ರಚನೆ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಮಹಾಘಟಬಂಧನ್ ಹೆಸರಿನಲ್ಲಿ ಬಿಜೆಪಿ ವಿರೋಧಿ ಪಕ್ಷಗಳನ್ನು ಒಂದುಗೂಡಿಸಲಾಗುತ್ತಿದೆ. ಕೆಲವು ದಿನಗಳ ಹಿಂದೆ ಚಂದ್ರಬಾಬು ನಾಯ್ಡು ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಶನಿವಾರ ಚಂದ್ರಬಾಬು ನಾಯ್ಡು ಅವರು ಕಾಂಗ್ರೆಸ್ನ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿಯಾಗಿದ್ದರು. ಶುಕ್ರವಾರ ಸ್ಟಾಲಿನ್, ಗುರುವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿದ್ದರು.
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರುಕ್ ಅಬ್ದುಲ್ಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನವೆಂಬರ್ 22ಎಂದು ನಡೆಯಲಿರುವ ಸಭೆಯಲ್ಲಿ ಯಾವ-ಯಾವ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications