ರಾಹುಲ್ ಗಾಂಧಿ ಭೇಟಿಯಾದ ಚಂದ್ರಬಾಬು ನಾಯ್ಡು
ನವದೆಹಲಿ, ಜನವರಿ 08 : ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ಮಂಗಳವಾರ ಸಂಜೆ ನವದೆಹಲಿಯಲ್ಲಿ ಚಂದ್ರಬಾಬು ನಾಯ್ಡು ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಚಳಿಗಾಲದ ಅಧಿವೇಶನ ಮುಗಿದ ಬಳಿಕ ಬಿಜೆಪಿ ವಿರುದ್ಧದ ಮೈತ್ರಿಕೂಟದ ಬಗ್ಗೆ ಸರಣಿ ಸಭೆಗಳು ನಡೆಯಲಿವೆ.

ಈ ಸಭೆಗಳ ಹಿನ್ನಲೆಯಲ್ಲಿ ಇಂದಿನ ಉಭಯ ನಾಯಕರ ಭೇಟಿ ಮಹತ್ವ ಪಡೆದುಕೊಂಡಿದೆ. ಜನವರಿ 15ರ ಬಳಿಕ ಮೈತ್ರಿ ಪಕ್ಷಗಳ ಸೀಟು ಹಂಚಿಕೆ ಬಗ್ಗೆ ದೆಹಲಿಯಲ್ಲಿ ಚರ್ಚೆ ನಡೆಯಲಿದೆ. ಅದಕ್ಕೂ ಮೊದಲು ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಿದರು.
ಅತಿ ಹೆಚ್ಚು ಲೋಕಸಭಾ ಕ್ಷೇತ್ರವನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಮತ್ತು ಎಸ್ಪಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಇನ್ನೂ ಯಾವುದೇ ತೀರ್ಮಾನ ಪ್ರಕಟಿಸಿಲ್ಲ. ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ಹೊಣೆಯನ್ನು ಚಂದ್ರಬಾಬು ನಾಯ್ಡು ಹೊತ್ತುಕೊಂಡಿದ್ದಾರೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕರ್ನಾಟಕದಲ್ಲಿ 12 ಸ್ಥಾನಗಳು ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಮೈತ್ರಿಕೂಟ ರಚನೆ ಮಾಡುವ ಮೊದಲು ಸೀಟು ಹಂಚಿಕೆ ಬಗ್ಗೆ ಅಂತಿಮ ತೀರ್ಮಾನವನ್ನು ಕಾಂಗ್ರೆಸ್ ತೆಗೆದುಕೊಳ್ಳಲಿದೆ.












Click it and Unblock the Notifications