Heavy Rain Alert: ಭಾರಿ ಮಳೆ ಎಚ್ಚರಿಕೆ; ಶಾಲೆಗಳಿಗೆ ರಜೆ ಘೋಷಣೆ, ಮನೆಯಿಂದ ಕೆಲಸ ಮಾಡಲು ಸೂಚನೆ
ನೈನಲ್ತಮಿಳುನಾಡಿನಲ್ಲಿ ಸೋಮವಾರದಿಂದ ಭಾರಿ ಮಳೆಯಾಗುತ್ತಿದ್ದು, ಮಂಗಳವಾರ ಮಳೆ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ಕೊಟ್ಟಿದೆ. ಚೆನ್ನೈನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚನೆ ಕೊಡಲಾಗಿದೆ.
ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡುವಂತೆ ತಮಿಳುನಾಡು ಸರ್ಕಾರ ಸೂಚನೆ ಕೊಟ್ಟಿದೆ. ಈ ಜಿಲ್ಲೆಗಳಲ್ಲಿ ಉದ್ಯೋಗಿಗಳು ಅಕ್ಟೋಬರ್ 18ರವರೆಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕೊಡುವಂತೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಖಾಸಗಿ ಕಂಪನಿಗಳಿಗೆ ಸೂಚನೆ ಕೊಟ್ಟಿದ್ದಾರೆ.

ಈ ನಾಲ್ಕು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಉಂಟಾಗುವ ಯಾವುದೇ ಪರಿಸ್ಥಿತಿಗಳನ್ನು ನಿಭಾಯಿಸಲು ಜಿಲ್ಲಾಧಿಕಾರಿಗಳು ಸಂಪೂರ್ಣವಾಗಿ ಸಜ್ಜಾಗಿದ್ದಾರೆ. ರಕ್ಷಣಾ ತಂಡಗಳು ಸನ್ನದ್ಧವಾಗಿದ್ದು, ಮುಳುಗಡೆಯಾಗುವ ಪ್ರದೇಶಗಳಲ್ಲಿ ಜನರ ರಕ್ಷಣೆಗೆ ಸಜ್ಜಾಗಿವೆ.
ಮೂರು ದಿನ ಭಾರಿ ಮಳೆ
ಮುಂದಿನ ಮೂರು ದಿನಗಳ ಕಾಲ ತಮಿಳುನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಅಕ್ಟೋಬರ್ 16ರವರೆಗೆ ತಮಿಳುನಾಡು, ಪುದುಚೆರಿ, ಕಾರೈಕಾಲ್ನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಕ್ಟೋಬರ್ 15 ಮತ್ತು 16 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಸೋಮವಾರ ಬೆಳಿಗ್ಗೆ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದ್ದು ಮಳೆ ತೀವ್ರವಾಗಲು ಕಾರಣವಾಗಿದೆ. ಮುಂದಿನ ಎರಡು ದಿನಗಳಲ್ಲಿ ಉತ್ತರ ತಮಿಳುನಾಡು, ಪುದುಚೆರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಕಡೆಗೆ ಚಲಿಸುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಸಿದ್ದತೆ ಪರಿಶೀಲನೆ ಮಾಡಿ ಸಿಎಂ ಸ್ಟಾಲಿನ್
ಭಾರಿ ಮಳೆ ಮುನ್ಸೂಚನೆ ಹಿನ್ನಲೆಯಲ್ಲಿ ತಮಿಳುನಾಡು ಸಿಎಂ ಸ್ಟಾಲಿನ್, ಪೂರ್ವ ಸಿದ್ಧತಾ ಪರಿಶೀಲನೆಗೆ ಸಭೆ ನಡೆಸಿದ್ದಾರೆ. 900 ಪಂಪ್ಗಳು, 57 ಟ್ರಾಕ್ಟರ್ ಪಂಪ್ಸೆಟ್ಗಳನ್ನು ಸಿದ್ದವಾಗಿಟ್ಟುಕೊಳ್ಳಲಾಗಿದೆ ಎಂದು ಚೆನ್ನೈ ಕಾರ್ಪೊರೇಷನ್ ಆಯುಕ್ತರು ಸಭೆಯಲ್ಲಿ ಮಾಹಿತಿ ನಿಡಿದರು. ತಗ್ಗು ಪ್ರದೇಶದಲ್ಲಿ ಸಿಲುಕಿದವರ ರಕ್ಷಣೆಗಾಗಿ 36 ಮೋಟಾರ್ ಬೋಟ್ಗಳು, ಸಾಂಕ್ರಾಮಿಕ ಹರಡುವಿಕೆ ತಡೆಯಲು 46 ಮೆಟ್ರಿಕ್ ಟನ್ ಬ್ಲೀಚ್ ಪೌಡರ್, 25 ಮೆಟ್ರಿಕ್ ಟನ್ ಸುಣ್ಣದ ಪುಡಿ ಮತ್ತು ಫಿನಾಲ್ ಅನ್ನು ಸಿದ್ದವಾಗಿಟ್ಟುಕೊಳ್ಳಲಾಗಿದೆ.
ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಕೂಡ ಸೊಮವಾರ ನಾರಾಯಣಪುರಂ ಕೆರೆ ದಂಡೆ ಹಾಗೂ ಅಂಬೇಡ್ಕರ್ ರಸ್ತೆ ಕಾಲುವೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಅಧಿಕಾರಿಗಳು ಸಜ್ಜಾಗಿರಬೇಕು ಎಂದು ಸೂಚನೆ ಕೊಟ್ಟಿದ್ದಾರೆ.
ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿರುವ ಪರಿಣಾಮ ಬೆಂಗಳೂರು ಕೂಡ ಉತ್ತಮ ಮಳೆಯನ್ನು ಪಡೆಯುತ್ತಿದೆ. ಸೋಮವಾರ ಇಡೀ ದಿನ ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದರೆ, ತುಂತುರು ಮಳೆಯಾಗಿದೆ. ಮಂಗಳವಾರ ಬೆಳಗ್ಗೆಯಿಂದಲೇ ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.












Click it and Unblock the Notifications