Breaking: ಐಎಎಫ್ 3000 ಹುದ್ದೆಗೆ 7.5 ಲಕ್ಷ ಅರ್ಜಿಯಾದರೆ, ಪರಿಸ್ಥಿತಿ ಅಷ್ಟು ಕೆಟ್ಟಿದೆಯಾ?
ನವದೆಹಲಿ, ಜುಲೈ 08: ಭಾರತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಟೀಕಿಸಿದ್ದಾರೆ.
ಅಗ್ನಿಪಥ್ ನೇಮಕಾತಿ ಯೋಜನೆ ಅಡಿಯಲ್ಲಿ ಲಕ್ಷ ಲಕ್ಷ ಅರ್ಜಿದಾರರು ತಮ್ಮ ಅರ್ಜಿ ಸಲ್ಲಿಸುತ್ತಿರುವುದಕ್ಕೆ ಮುಖ್ಯ ಕಾರಣವೇನು ಎಂಬುದನ್ನು ತಮ್ಮ ಟ್ವೀಟ್ ಮೂಲಕ ಉಲ್ಲೇಖಿಸಿ ಹೇಳಿದ್ದಾರೆ. ಒಂದೇ ಒಂದು ಟ್ವೀಟ್ ಮೂಲಕ ಕೇಂದ್ರ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.
ಅಗ್ನಿಪಥ್ ಯೋಜನೆ; ವಾಯುಪಡೆಗೆ 7.5 ಲಕ್ಷ ಅರ್ಜಿ
ಕೇಂದ್ರ ಸರ್ಕಾರವು ಅಗ್ನಿಪಥ್ ಯೋಜನೆಯಡಿ ನೋಂದಣಿ ಪ್ರಕ್ರಿಯೆ ಆರಂಭಿಸಿದ ಕಳೆದ ಜೂನ್ 24ರಂದು ಅರ್ಜಿ ಆಹ್ವಾನಿಸಿತ್ತು. ಅಂದಿನಿಂದ ಇಂದಿನವರೆಗೆ ಒಟ್ಟು 7.5 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಭಾರತೀಯ ವಾಯುಪಡೆ ಬುಧವಾರ ತಿಳಿಸಿತ್ತು. ವಾಯುಪಡೆಯ ಮಾಹಿತಿಯನ್ನು ಉಲ್ಲೇಖಿಸಿ ಪಿ. ಚಿದಂಬರಂ ಟ್ವೀಟ್ ಮಾಡಿದ್ದಾರೆ.
Fact: 7,50,000 applicants for 3000 posts in IAF under the Agniveer scheme.
— P. Chidambaram (@PChidambaram_IN) July 7, 2022
Wrong conclusion: the Agniveer scheme is popular among the youth.
Right conclusion: the unemployment situation is so extreme that desperate youth are willing to take any job.
ಪಿ ಚಿದಂಬರಂ ಟ್ವೀಟ್ ಸಂದೇಶದಲ್ಲಿ ಏನಿದೆ?: "ಅಗ್ನಿವೀರ್ ಯೋಜನೆಯಡಿ ಐಎಎಫ್ನಲ್ಲಿ 3000 ಹುದ್ದೆಗಳಿಗೆ 7,50,000 ಅರ್ಜಿದಾರರು ತಮ್ಮ ಅರ್ಜಿ ಸಲ್ಲಿಸಿದ್ದಾರೆ. ಇದರಿಂದ ಅಗ್ನಿವೀರ್ ಯೋಜನೆಯು ಯುವಕರನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ ಎಂದು ಕೇಂದ್ರ ಸರ್ಕಾರವು ತಿಳಿದುಕೊಂಡಿರುವ ತಪ್ಪು ತೀರ್ಮಾನ ತೆಗೆದುಕೊಂಡಿದೆ. ಆದರೆ ದೇಶದಲ್ಲಿ ನಿರುದ್ಯೋಗ ಪರಿಸ್ಥಿತಿಯು ತುಂಬಾ ತೀವ್ರವಾಗಿದೆ, ಹೀಗಾಗಿ ಹತಾಶರಾಗಿರುವ ಯುವಕರು ಯಾವುದೇ ಉದ್ಯೋಗ ಸಿಕ್ಕರೂ ಸರಿ ಎನ್ನುವ ಹಂತಕ್ಕೆ ತಲುಪಿದ್ದಾರೆ ಎನ್ನುವುದೇ ಸರಿಯಾದ ತೀರ್ಮಾನ," ಎಂದು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಟ್ವೀಟ್ ಮಾಡಿದ್ದಾರೆ.
ಅಗ್ನಿಪಥ್ ನೇಮಕಾತಿ ಯೋಜನೆ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯು ದೇಶದ ಮೂರು ಸೇನೆಗಳಿಗೆ ಯೋಧರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿದ್ದಾಗಿದೆ. 17.5 ರಿಂದ 23 ವಯೋಮಾನ ಯುವಕರನ್ನು ಒಪ್ಪಂದದ ಮೇರೆಗೆ ನಾಲ್ಕು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಈ ಅವಧಿಯಲ್ಲಿ 6 ತಿಂಗಳು ತರಬೇತಿಯೂ ಸೇರಿರುತ್ತದೆ. ನಾಲ್ಕು ವರ್ಷದ ಸೇವಾವಧಿಯಲ್ಲಿ ಮಾಸಿಕ 30 ರಿಂದ 40 ಸಾವಿರ ರೂಪಾಯಿ ವೇತನದ ಜೊತೆಗೆ ವೈದ್ಯಕೀಯ ವಿಮೆ ಮತ್ತು ಆರೋಗ್ಯ ವಿಮೆ ಸೌಲಭ್ಯವನ್ನು ನೀಡಲಾಗುತ್ತದೆ.
ನಾಲ್ಕು ವರ್ಷಗಳ ನಂತರ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಶೇ.75ರಷ್ಟು ಯೋಧರನ್ನು ಸೇನೆಯಿಂದ ವಿಮುಕ್ತಿಗೊಳಿಸಲಾಗುವುದು.
ತದನಂತರದಲ್ಲಿ ಈ ಯೋಧರಿಗೆ ಯಾವುದೇ ರೀತಿ ಪಿಂಚಣಿ ಸೌಲಭ್ಯವನ್ನು ನೀಡಲಾಗುವುದಿಲ್ಲ. ಮುಂದಿನ ಒಂದೂವರೆ ವರ್ಷದ ಅವಧಿಯಲ್ಲಿ ಅಗ್ನಿಪಥ್ ಯೋಜನೆ ಅಡಿಯಲ್ಲಿ ಸುಮಾರು 10 ಲಕ್ಷ ಯುವಕರಿಗೆ ಉದ್ಯೋಗವನ್ನು ಕಲ್ಪಿಸುವ ಗುರಿಯೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದರು.
Recommended Video