12 ಜನರನ್ನು ಬಲಿ ತೆಗೆದುಕೊಂಡ ಮಿಡ್ನಾಪುರ ಸ್ಫೋಟಕ್ಕೆ ಕ್ಷಮೆಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ
ಕೋಲ್ಕತ್ತಾ, ಮೇ. 28: ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರದ ಎಗ್ರಾ ಸ್ಫೋಟದಲ್ಲಿ ಕಚ್ಚಾ ಬಾಂಬ್ ತಯಾರಿಕಾ ಘಟಕದಲ್ಲಿ ಉಂಟಾದ ಸ್ಫೋಟದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ ಎಂಬ ವಿಪಕ್ಷಗಳ ಆರೋಪದ ಬಳಿಕ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಆ ಪ್ರದೇಶಕ್ಕೆ ಭೇಟಿ ನೀಡಿದ್ದು, ಅಲ್ಲಿನ ಸಂತ್ರಸ್ತ ಜನರಲ್ಲಿ ಕ್ಷಮೆಯಾಚಿಸಿದ್ದಾರೆ.
ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಸ್ಫೋಟ ಸಂಭವಿಸಿದ 11 ದಿನಗಳ ನಂತರ ಸ್ಫೋಟ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ ಮಮತಾ ಬ್ಯಾನರ್ಜಿ ಗುಪ್ತಚರ ವಿಭಾಗಗಳು ಸರಿಯಾಗಿ ಕೆಲಸ ಮಾಡಿದ್ದರೆ ಘಟನೆಯನ್ನು ತಡೆಯಬಹುದಿತ್ತು ಎಂದು ಹೇಳಿದ್ದಾರೆ.

"ಪಟಾಕಿ ತಯಾರಿಕಾ ಘಟಕದಲ್ಲಿ ನಡೆದ ಘಟನೆಗೆ ನಾನು ನಿಮ್ಮ ಬಳಿ ತಲೆಬಾಗಿ ಕ್ಷಮೆಯಾಚಿಸುತ್ತೇನೆ. ಗುಪ್ತಚರ ವಿಭಾಗ ಸರಿಯಾಗಿ ಕೆಲಸ ಮಾಡಿದ್ದರೆ ಈ ಸ್ಫೋಟವನ್ನು ತಪ್ಪಿಸಬಹುದಿತ್ತು. ರಾಜ್ಯ ಸರ್ಕಾರವು ಸಂತ್ರಸ್ತರ ಕುಟುಂಬಕ್ಕೆ ತಲಾ 2.5 ಲಕ್ಷ ರೂಪಾಯಿ ಮತ್ತು ಮೃತರ ಕುಟುಂಬಗಳಲ್ಲಿ ಒಬ್ಬರಿಗೆ ಹೋಂಗಾರ್ಡ್ನ ಉದ್ಯೋಗವನ್ನು ನೀಡಲಿದೆ" ಎಂದು ಎಗ್ರಾದ ಖಾಡಿಕುಲ್ ಗ್ರಾಮದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರೂ, ಈ ವರ್ಷ ನಡೆಯಲಿರುವ ಪಂಚಾಯತ್ ಚುನಾವಣೆಯಲ್ಲಿ ಹಿಂಸಾಚಾರವನ್ನು ಹರಡಲು ಕಚ್ಚಾ ಬಾಂಬ್ಗಳನ್ನು ತಯಾರಿಸುವ ಘಟಕಗಳಾಗಿದೆ ಇದು ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಕಳೆದ ಐದು ತಿಂಗಳಲ್ಲಿ ರಾಜ್ಯಾದ್ಯಂತ ನಡೆದ 10 ಸ್ಫೋಟಗಳಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ.
ಅಕ್ರಮ ಪಟಾಕಿ ತಯಾರಿಕಾ ಘಟಕಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಆಡಳಿತಕ್ಕೆ ಆದೇಶಿಸಿದ ಮಮತಾ ಬ್ಯಾನರ್ಜಿ, ತಮ್ಮ ಸರ್ಕಾರವು ಈ ಪ್ರದೇಶದಲ್ಲಿ ಕಾನೂನುಬದ್ಧ ಪಟಾಕಿ ಉತ್ಪಾದನಾ ಘಟಕದ ಕ್ಲಸ್ಟರ್ ಅನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.

"ಪಟಾಕಿ ಉತ್ಪಾದನಾ ಘಟಕಗಳಲ್ಲಿ ಕೆಲಸ ಮಾಡುವ ಮೂಲಕ ಅನೇಕ ಜನರು ತಮ್ಮ ಜೀವನ ನಡೆಸುತ್ತಿದ್ದಾರೆ ಎಂದು ನನಗೆ ತಿಳಿದಿದೆ. ಆದರೆ ಅಂತಹ ಘಟಕಗಳಿಗೆ ಅನುಮತಿ ನೀಡಲು ಸ್ಥಳೀಯ ಗ್ರಾಮ ಪಂಚಾಯಿತಿಗಳಿಗೆ ಅಧಿಕಾರವಿಲ್ಲ. ಈ ಪ್ರದೇಶದಲ್ಲಿ ವಾಸಿಸುವ ಮಹಿಳೆಯರು ಮತ್ತು ಪುರುಷರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ನಮ್ಮ ಸರ್ಕಾರವು ಕಾನೂನುಬದ್ಧ ಘಟಕಗಳ ಕ್ಲಸ್ಟರ್ ಅನ್ನು ಸ್ಥಾಪಿಸುತ್ತದೆ" ಎಂದು ಹೇಳಿದ್ದಾರೆ.
ಎಗ್ರಾ ಸ್ಫೋಟಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಂಬತ್ತು ಜನರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಒಡಿಶಾದ ಕಟಕ್ನಲ್ಲಿರುವ ಆಸ್ಪತ್ರೆಯಲ್ಲಿ ಘಟನೆ ನಡೆದ ಮೂರು ದಿನಗಳ ನಂತರ ಸಾವನ್ನಪ್ಪಿದ್ದಾನೆ. ರಾಜ್ಯದ ಪ್ರಮುಖ ಪ್ರತಿಪಕ್ಷವಾದ ಬಿಜೆಪಿ ಘಟನೆಯನ್ನು ತಮ್ಮ ರಾಜಕೀಯಕ್ಕೆ ಬಳಸಿಕೊಳ್ಳಲು ನೋಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಸ್ಫೋಟದ ಪ್ರಮಾಣವು ಕಾರ್ಖಾನೆಯಲ್ಲಿ ಶಕ್ತಿಯುತ ಕಚ್ಚಾ ಬಾಂಬ್ಗಳನ್ನು ತಯಾರಿಸುತ್ತಿದೆ ಎಂದು ಸೂಚಿಸುತ್ತದೆ. ಈಗ ಸಿಎಂ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸುವ ಮೂಲಕ ಎಗ್ರಾದ ಜನರನ್ನು ವಂಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಆರೋಪಿಸಿದ್ದಾರೆ.












Click it and Unblock the Notifications