Union Budget 2025: ಜೆಡಿಎಸ್-ಬಿಜೆಪಿ ದೋಸ್ತಿಯಿದ್ದರೂ ರಾಜ್ಯಕ್ಕೆ ಚೊಂಬು: ಬಜೆಟ್ ಕುರಿತು ಸಿದ್ದರಾಮಯ್ಯ ಆಕ್ರೋಶ
ಮೈಸೂರು, ಫೆಬ್ರವರಿ 01: ಕೇಂದ್ರದ ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ರಾಜ್ಯಕ್ಕೆ ಏಕೆ ಚೊಂಬು ಕೊಟ್ಟಿದ್ದೀರಿ ಎಂದು ಬಿಜೆಪಿ-ಜೆಡಿಎಸ್ ಸಂಸದರು ಮತ್ತು ಕೇಂದ್ರ ಸಚಿವರು ಪ್ರಧಾನಿ ಮೋದಿಯವರಿಗೆ ಕೇಳಿ. ಜೆಡಿಎಸ್-ಬಿಜೆಪಿ ದೋಸ್ತಿಯಿದ್ದರೂ ರಾಜ್ಯಕ್ಕೆ ಚೊಂಬು ಸಿಕ್ಕಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ರಾಜ್ಯದ ಜನರಿಗೆ ಚೊಂಬು ಕೊಡುವ ಅಭಿಯಾನವನ್ನು ಕೇಂದ್ರ ಮುಂದುವರೆಸಿದೆ. ದೆಹಲಿಯಲ್ಲೇ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರದ ಬಜೆಟ್ MSP ಬಗ್ಗೆ ಉಸಿರೇ ಬಿಟ್ಟಿಲ್ಲ. ರೈತ ಸಮುದಾಯಕ್ಕೆ ಅತ್ಯಂತ ದೊಡ್ಡ ದ್ರೋಹವಾಗಿದೆ. ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರಲ್ಲಿ ಒಬ್ಬರೂ ರಾಜ್ಯದ ಹಿತಾಸಕ್ತಿ ಬಗ್ಗೆ ನೆಪಕ್ಕೂ ಬಾಯಿ ಬಿಟ್ಟಿಲ್ಲ ಎಂದು ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಸಿದರು.

ರಾಜ್ಯಕ್ಕೆ ಏಕೆ ಚೊಂಬು ಕೊಟ್ಟಿದ್ದೀರಿ ಎಂದು ಬಿಜೆಪಿ-ಜೆಡಿಎಸ್ ಸಂಸದರು ಮತ್ತು ಕೇಂದ್ರ ಸಚಿವರು ಪ್ರಧಾನಿ ಮೋದಿಯವರಿಗೆ ಕೇಳಿ. ಮನುಸ್ಮೃತಿ ವಿರೋಧಿಸಿ-ಸಂವಿಧಾನ ಪರವಾಗಿರುವ ರಾಜ್ಯಗಳ ವಿರುದ್ಧ ಬಿಜೆಪಿ ಸರ್ಕಾರ ಸೇಡು ತೀರಿಸಿಕೊಳ್ಳುತ್ತಿದೆ. ಆದಾಯ ತೆರಿಗೆಯ ಮಿತಿ 12 ಲಕ್ಷ ರೂಪಾಯಿಗಳಿಗೆ ಏರಿಸಿರುವುದನ್ನು ಕೊಂಡಾಡಲಾಗುತ್ತಿದೆ. ನಮ್ಮಲ್ಲಿ ಕಳೆದ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿ ಮಾಡಿದವರು ಕೇವಲ 8.09 ಕೋಟಿ ಜನ. ಇದು ನಮ್ಮ ಒಟ್ಟು ಜನಸಂಖ್ಯೆಯ ಶೇಕಡಾ 6.64ರಷ್ಟಾಗತ್ತದೆ ಅವರಲ್ಲಿ 4.90 ಕೋಟಿ ಜನ ಸೊನ್ನೆ ತೆರಿಗೆ ಪಾವತಿ ದಾರರು. ಆದ್ದರಿಂದ ಆದಾಯ ತೆರಿಗೆ ಮಿತಿಯ ಹೆಚ್ಚಳ ಮೇಲು ಮಧ್ಯಮ ವರ್ಗದ ಕೆಲವೇ ಕುಟುಂಬಗಳಿಗೆ ನೆರವಾಗಬಹುದೇ ವಿನ: ದಿನದ ಆದಾಯ 100-150 ರೂಪಾಯಿಯಷ್ಟೆ ಹೊಂದಿದ ಶೇಕಡಾ 70ರಷ್ಟು ಜನಸಂಖ್ಯೆಗೆ ಇದರಿಂದ ಯಾವ ಲಾಭವೂ ಇಲ್ಲ ಎಂದರು.
2024-25 ರ ಪತಿಷ್ಕೃತ ಬಜೆಟ್ 47,16000 ಕೋಟಿ ಆಗಿತ್ತು. 104000 ಕೋಟಿ ತೆರಿಗೆ ಕಡಿಮೆ ಆಯ್ತು. ತೆರಿಗೆ ಅವರ ನಿರೀಕ್ಷೆಯಂತೆ ಸಂಗ್ರಹ ಆಗಿಲ್ಲ ಅಂತಲೇ ಅರ್ಥ. ಈ ಸಾಲಿನ 50,65,345 ಕೋಟಿ ಬಜೆಟ್ ಗಾತ್ರದಲ್ಲಿ ಸಾಲದ ಪ್ರಮಾಣವೇ 15,68,936 ಕೋಟಿಯಷ್ಟಿದೆ. ಇದರಲ್ಲಿ ಬಡ್ಡಿಗೇ 12,70000 ಕೋಟಿ ಹೋಗುತ್ತಿದೆ, ದೇಶದ ಸಾಲ 202 ಲಕ್ಷ ಕೋಟಿಯಿಂದ 205 ಲಕ್ಷ ಕೋಟಿವರೆಗೂ ಆಗಿದೆ. ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರದ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರು ಇಂದು ಕೇಂದ್ರದ ಬಜೆಟ್ಟನ್ನು ಮಂಡಿಸಿದ್ದಾರೆ.
ಒಟ್ಟಾರೆ ಬಜೆಟ್ ಗಾತ್ರ 50,65,345 ಕೋಟಿ ರೂಪಾಯಿಗಳು. 2024-25ನೇ ಸಾಲಿಗೆ ಸಂಬಂಧಿಸಿದಂತೆ 48.20 ಲಕ್ಷ ಕೋಟಿ ರೂಪಾಯಿಗಳ ಬಜೆಟ್ಟನ್ನು ಮಂಡಿಸಿದ್ದರು. ಆದರೆ, ಪರಿಷ್ಕೃತ ಅಂದಾಜಿನ ಪ್ರಕಾರ 47.16 ಲಕ್ಷ ಕೋಟಿ ರೂಪಾಯಿಗಳಷ್ಟು ವೆಚ್ಚವಾಗಬಹುದು ಎಂದು ಅಂದಾಜಿಸಿದ್ದಾರೆ. ಅದರಂತೆ ಇದನ್ನು ನೋಡಿದರೆ ಕೇಂದ್ರ ಸರ್ಕಾರಕ್ಕೆ 1.04 ಲಕ್ಷ ಕೋಟಿ ರೂಪಾಯಿಗಳಷ್ಟು ತೆರಿಗೆ ಸಂಗ್ರಹ ಕಡಿಮೆಯಾಗುತ್ತದೆ ಎಂದು ಅಂದಾಜು ಮಾಡಿದ್ದಾರೆ. ಹಾಗಾಗಿ, ದೇಶದ ಆರ್ಥಿಕ ಸ್ಥಿತಿ ಸರಿಯಾಗಿಲ್ಲ ಎಂಬುದನ್ನು ಇದು ಸೂಚಿಸುತ್ತದೆ.
ಕೇಂದ್ರ ಸರ್ಕಾರದ 50.65 ಲಕ್ಷ ಕೋಟಿ ರೂಪಾಯಿಗಳ ಬಜೆಟ್ನಲ್ಲಿ 15,68,936 ಕೋಟಿ ರೂಪಾಯಿಯಷ್ಟು ಸಾಲ ಇರಲಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಪ್ರಸ್ತಾಪಿಸಿದ್ದಾರೆ. ಇದೂ ಸೇರಿದರೆ, ನನ್ನ ಅಂದಾಜಿನ ಪ್ರಕಾರ 2026ರ ಮಾರ್ಚ್ ವೇಳೆಗೆ ದೇಶದ ಸಾಲ 202 ರಿಂದ 205 ಲಕ್ಷ ಕೋಟಿ ರೂಪಾಯಿಗಳನ್ನು ಮುಟ್ಟಬಹುದು. ನಿರ್ಮಲಾ ಸೀತಾರಾಮನ್ ಅವರೆ ತಮ್ಮ ಬಜೆಟ್ ದಾಖಲೆಗಳಲ್ಲಿ ಹೇಳಿರುವಂತೆ ಈ ವರ್ಷ ಬಡ್ಡಿ ಪಾವತಿಗಾಗಿ 12.7 ಲಕ್ಷ ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗುತ್ತದೆ. ಈ ಬಜೆಟ್ನಲ್ಲಿ ವಿತ್ತೀಯ ಕೊರತೆ ಶೇ.4.4 ರಷ್ಟು ಇರಲಿದೆ ಎಂದು ಅಂದಾಜು ಮಾಡಲಾಗಿದೆ. ರೆವಿನ್ಯೂ ಕೊರತೆ ಶೇ.1.5 ರಷ್ಟು ಇರಲಿದೆ ಎಂದು ಅಂದಾಜು ಮಾಡಿದ್ದಾರೆ.
ಮುಖ್ಯವಾಗಿ, ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕ ರಾಜ್ಯಕ್ಕೆ ಈ ಬಜೆಟ್ನಲ್ಲಿ ಯಾವುದೇ ಹೊಸ ಘೋಷಣೆ ಇಲ್ಲ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಸಣ್ಣ ಪ್ರಮಾಣದಲ್ಲಿ ಆಂಧ್ರ ಪ್ರದೇಶ ಬಿಟ್ಟರೆ ಉಳಿದ ಯಾವ ರಾಜ್ಯಗಳಿಗೂ ಯಾವುದೇ ಯೋಜನೆ ಘೋಷಣೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದರು.












Click it and Unblock the Notifications