ಸಿಎಂ ಸಿದ್ದು ವಿರುದ್ಧ ಸೋನಿಯಾಗೆ ಷರೀಫ್ ಪತ್ರ
ಊಟಿ, ಏ.6: ಕಾಂಗ್ರೆಸ್ ಹಿರಿಯ ಮುಖಂಡ ಜಾಫರ್ ಷರೀಫ್ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ. ಪತ್ರದುದ್ದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿ ಕಾರಿದ್ದಾರೆ. ಸಿದ್ದರಾಮಯ್ಯ ಅವರಿಂದ ನಾನು ಚುನಾವಣೆ ಸ್ಪರ್ಧಿಸಲು ಆಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಿಎಂ ಇಬ್ರಾಹಿಂಗೆ ಮನ್ನಣೆ ನೀಡುತ್ತಿದ್ದಾರೆ. ಇಬ್ರಾಹಿಂ ಅಸಲಿಗೆ ಮುಸ್ಲಿಂ ನಾಯಕ ಎಂದು ಕರೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಮತ ಬ್ಯಾಂಕ್ ಮೇಲೆ ಹೆಚ್ಚಿನ ಅವಲಂಬನೆ ಮಾಡಿಕೊಂಡಿರುವುದು ಮುಂದೆ ದೊಡ್ದಪಾಠ ಕಲಿಸಲಿದೆ. ಅಮಾನತ್ ಬ್ಯಾಂಕ್ ಅವ್ಯವಹಾರ ಬೆಳಕಿಗೆ ಬಂದಿದ್ದರೂ ಯಾರಿಗೂ ಶಿಕ್ಷೆಯಾಗಿಲ್ಲ. ಪಕ್ಷ ಹಿರಿಯ ನಾಯಕರನ್ನು ನಡೆಸಿಕೊಳ್ಳುತ್ತಿರುವ ರೀತಿ ಬೇಸರ ತರೆಸಿದೆ. ಸಿಎಂ ಸಿದ್ದರಾಮಯ್ಯ ನನ್ನನ್ನು ಕಡೆಗಣಿಸಿದ್ದಾರೆ ಎಂದು ಜಾಫರ್ ಷರೀಫ್ ಅವರು ಪತ್ರದಲ್ಲಿ ವಿವರಿಸಿದ್ದಾರೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]

ಕಾಂಗ್ರೆಸ್ ಪಕ್ಷದೊಂದಿಗಿನ ದಶಕಗಳ ಸಂಬಂಧವನ್ನು ಕಡಿದುಕೊಂಡಿರುವ ಜಾಫರ್ ಷರೀಫ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದರು. ಯಾವುದೇ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡದೆ ತಟಸ್ಥವಾಗಿ ಉಳಿಯುವುದಾಗಿ ತಿಳಿಸಿದ್ದರು. ಈಗ ಮೆಕ್ಕಾ ಯಾತ್ರೆ ನಂತರ ತಮಿಳುನಾಡಿನ ಊಟಿಗೆ ಬಂದಿರುವ ಷರೀಫ್ ಅವರು ಅಲ್ಲಿಂದಲೇ ಸೋನಿಯಾ ಅವರಿಗೆ ಪತ್ರ ರವಾನಿಸಿದ್ದಾರೆ.
ಮೆಕ್ಕಾ ಯಾತ್ರೆ ತೆರಳಿದ್ದ ಜಾಫರ್ ಷರೀಫ್ ಅವರು ಮಾ.25ರಂದು ಅಲ್ಲಿಂದಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರವನ್ನು ಕಳುಹಿಸಿದ್ದರು.. ಆದರೆ, ಕಾಂಗ್ರೆಸ್ ಹೈಕಮಾಂಡ್ ಷರೀಫ್ ಅವರ ರಾಜೀನಾಮೆಯನ್ನು ಇನ್ನೂ ಅಂಗೀಕರಿಸಿಲ್ಲ.
ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಜಾಫರ್ ಷರೀಫ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿ ಮೈಸೂರಿನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ, ಯಾವುದೇ ಪಕ್ಷ ಸೇರದಿರಲು ಷರೀಫ್ ನಿರ್ಧರಿಸಿದ್ದಾರೆ.
ಕಾಂಗ್ರೆಸ್ ಪಕ್ಷದೊಂದಿಗೆ ಜಾಫರ್ ಷರೀಫ್ ಅವರದ್ದು ದಶಕಗಳ ಸಂಬಂಧ ಇಂದಿರಾಗಾಂಧಿ ನಿಕಟವರ್ತಿಯಾಗಿದ್ದ ಷರೀಫ್, ಬೆಂಗಳೂರು ಉತ್ತರದಿಂದ 7 ಬಾರಿ ಹಾಗೂ ಕನಕಪುರ ಕ್ಷೇತ್ರದಿಂದ ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದರು. 1991-95ರ ವರೆಗೆ ಕೇಂದ್ರ ರೈಲ್ವೆ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಅವರು ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಟಿಕೆಟ್ ಕೈ ತಪ್ಪಿತ್ತು. ಅಲ್ಲಿ ಈಗ ಯುವ ಕ್ರಾಂಗ್ರೆಸ್ ನಾಯಕ ರಿಜ್ವಾನ್ ಅರ್ಷದ್ ಕಣದಲ್ಲಿದ್ದಾರೆ.












Click it and Unblock the Notifications