ಅಕ್ಕಿ ತಿಕ್ಕಾಟ; ನವದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಿದ ಸಿದ್ದರಾಮಯ್ಯ ಹೇಳಿದ್ದೇನು?
ನವದೆಹಲಿ, ಜೂನ್ 22:ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರಮುಖ ಕಾರಣಗಳಲ್ಲಿ ಒಂದಾಗಿರುವ ಗ್ಯಾರಂಟಿ ಘೋಷಣೆ ಜಾರಿಯಲ್ಲಿ ಆರಂಭಿಕ ಅಡೆತಡೆಗಳು ಹೆಚ್ಚಾಗಿದ್ದು, ಅನ್ನಭಾಗ್ಯ ಯೋಜನೆಗೆ ಅಕ್ಕಿ ವಿತರಣೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ವಾಕ್ಸಮರ ಜೋರಾಗಿದೆ.
ರಾಜ್ಯಕ್ಕೆ ಅಕ್ಕಿ ವಿತರಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.ಈ ವೇಳೆ ಅಕ್ಕಿ ವಿತರಣೆ ವಿಚಾರವಾಗಿ ಸುದೀರ್ಘ ಚರ್ಚೆ ನಡೆದಿದ್ದು, ಇನ್ನು ಅಮಿತ್ ಶಾ ಭೇಟಿ ಬಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಎಫ್.ಸಿ.ಐ ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ.
ಅಮಿತ್ ಶಾ ಅವರು ಸಂಬಂಧಪಟ್ಟ ಮಂತ್ರಿಗಳಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ರಾಜ್ಯಕ್ಕೆ ಎರಡು ಐ.ಆರ್.ಪಿ ಬಟಾಲಿಯನ್ ನ್ನು ಒದಗಿಸಿದ್ದು, ಇನ್ನೆರಡು ಬಟಾಲಿಯನ್ ಒದಗಿಸಬೇಕೆಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಇನ್ನೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿದೆ, ಏನೂ ಸಮಸ್ಯೆ ಇಲ್ಲ. ಅಕ್ಕಿ ಖರೀದಿ ಬಗ್ಗೆ ಕೆಲವು ರಾಜ್ಯಗಳ ಜತೆ ಚರ್ಚೆ ಮಾಡಿದ್ದೇವೆ. ರಾಜ್ಯದ ಜನತೆಗೆ ಭರವಸೆಯನ್ನ ನೀಡಿದ್ದೇವೆ. ಕೆಲವು ಕಡೆ ಅಕ್ಕಿ ಸಿಗುತ್ತೆ, ಆದರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ. ರಾಜ್ಯದಲ್ಲಿ ಆಗಿರುವ ಸಮಸ್ಯೆ ಬಗ್ಗೆ ಅವರ ಗಮನಕ್ಕೆ ತಂದಿದ್ದೇನೆ. FCI ನವರು ಮೊದಲು ಅಕ್ಕಿ ಕೊಡುತ್ತೇನೆ ಅಂತ ಹೇಳಿದ್ರು. ಆಮೇಲೆ ಅವರು ಹೇಳಿದಂತೆ ಅಕ್ಕಿ ಕೊಟ್ಟಿಲ್ಲ, ಮತ್ತೆ ಕೊಡುವುದಕ್ಕೆ ಆಗಲ್ಲ ಎಂದು ಹೇಳಿದ್ದಾರೆ ಎಂದು ವಿವರಣೆಯನ್ನ ಅಮಿತ್ ಶಾಗೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.












Click it and Unblock the Notifications