ಕಾಂಗ್ರೆಸ್ ಚುಕ್ಕಾಣಿ ರಾಹುಲ್ ಗೆ ನೀಡುವಂತೆ ಪಕ್ಷದಲ್ಲೇ ನಿರ್ಣಯ
ಶ್ರೀನಗರ/ಜೈಪುರ, ಅಕ್ಟೋಬರ್ 10: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿಯವರನ್ನು ಕರೆ ತರುವಂತೆ ಆಗ್ರಹಿಸಿ ಜಮ್ಮು ಮತ್ತು ಕಾಶ್ಮೀರ ಹಾಗೂ ರಾಜಸ್ಥಾನ ಕಾಂಗ್ರೆಸ್ ಘಟಕಗಳು ನಿರ್ಣಯ ಕೈಗೊಂಡಿವೆ.
"ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಜೆಪಿ ವಿರುದ್ಧ ವಿರೋಧ ಪಕ್ಷವಾಗಿ ಕಾಂಗ್ರೆಸ್ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದೆ. ಜನರ ಧ್ವನಿಗೆ ಪಕ್ಷ ಶಕ್ತಿ ನೀಡುತ್ತಿದೆ. ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗುವಂತೆ ಕಾರ್ಯಕರ್ತರು ಬಯಸಿದ್ದಾರೆ. ಹೀಗಾಗಿ ನಾವು ಇವತ್ತು ರಾಜಸ್ಥಾನದಲ್ಲಿ ಈ ನಿರ್ಣಯ ಕೈಗೊಂಡಿದ್ದೇವೆ," ಎಂದು ಕಾಂಗ್ರೆಸ್ ರಾಜಸ್ಥಾನ ರಾಜ್ಯ ಘಟಕದ ಅಧ್ಯಕ್ಷ ಸಚಿನ್ ಪೈಲಟ್ ಹೇಳಿದ್ದಾರೆ.
ಇದೇ ವೇಳೆ ಅವರು ಮುಂದಿನ ವರ್ಷ ನಡೆಯಲಿರುವ ರಾಜಸ್ಥಾನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನು ಹುಸೇನ್ ದಳ್ವಾಯಿ ನೇತೃತ್ವದಲ್ಲಿ ನಡೆದ ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಸಭೆಯಲ್ಲೂ ರಾಹುಲ್ ಗಾಂಧಿಯನ್ನು ಅಧ್ಯಕ್ಷ ಸ್ಥಾನಕ್ಕೆ ತರಬೇಕು ಎಂಬ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಎರಡು ರಾಜ್ಯ ಘಟಕಗಳು ಮುಂದಿನ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿಯವರನ್ನು ನೇಮಕ ಮಾಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಹಾಗೂ ಎಐಸಿಸಿ ಪದಾಧಿಕಾರಿಗಳಿಗೆ ಮನವಿ ಮಾಡಿವೆ.