ಬಿಹಾರ ಚುನಾವಣೆ; ಇಂಡಿಯಾ ಒಕ್ಕೂಟದ ಜೊತೆ ಕಾಂಗ್ರೆಸ್ ಸ್ಪರ್ಧೆ ಎಂದ ರಾಹುಲ್ ಗಾಂಧಿ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆ ಮಾಡದರೆ ಇಂಡಿಯಾ ಒಕ್ಕೂಟದ ಅಡಿಯಲ್ಲಿ ಸ್ಪರ್ಧೆ ಮಾಡಲಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ದೆಹಲಿಯಲ್ಲಿ ಎಎಪಿ, ಕಾಂಗ್ರೆಸ್ ನಡುವಿನ ತಿಕ್ಕಾಟದಲ್ಲಿ ಇಂಡಿಯಾ ಒಕ್ಕೂಟದಲ್ಲಿ ಬಿರುಕು ಉಂಟಾಗಿದೆ ಎನ್ನುವ ವದಂತಿಗಳ ನಡುವೆ ರಾಹುಲ್ ಗಾಂಧಿ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಬಿಹಾರದ ಪಾಟ್ನಾದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿ ಮತ್ತು ಆರ್ಎಸ್ಎಸ್ ಅನ್ನು ಬಿಹಾರದಲ್ಲಿ ಸೋಲಿಸಬೇಕು . ಇಂಡಿಯಾ ಬ್ಲಾಕ್ ಜೊತೆ ಒಗ್ಗಟ್ಟಾಗಿ ಹೋರಾಟ ಮಾಡುವ ಮೂಲಕ ನಾವು ಬಿಜೆಪಿಯನ್ನು ಸೋಲಿಸುತ್ತೇವೆ ಎಂದರು. "ನೀವು ಕಾಂಗ್ರೆಸ್ನ ಹುಲಿಗಳು ಮತ್ತು ಸಿಂಹಗಳು, ಹೋರಾಟ ಮಾಡಲು ಸಜ್ಜಾಗಿ" ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ವಿರೋಧ ಪಕ್ಷದ ಸದಸ್ಯ ರಾಷ್ಟ್ರೀಯ ಜನತಾ ದಳ (ಆರ್ಜೆಡಿ)ದ ತೇಜಸ್ವಿ ಯಾದವ್, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾತ್ರ ಇಂಡಿಯಾ ಒಕ್ಕೂಟವನ್ನು ರಚನೆ ಮಾಡಲಾಗಿತ್ತು ಎಂದು ಹೇಳಿದ್ದರು. ಆದರೆ ಈಗ ರಾಹುಲ್ ಗಾಂಧಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕೂಡ ಇಂಡಿಯಾ ಒಕ್ಕೂಟದ ಅಡಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ.
ಶನಿವಾರ ಆರ್ಜೆಡಿ ಕಾರ್ಯಕಾರಿಣಿ ಸಭೆಯಲ್ಲಿ ತಮ್ಮ ತಂದೆ ಲಾಲು ಯಾದವ್ರ ಜೊತೆ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೊಂದಿರುವ ತೇಜಸ್ವಿ ಯಾದವ್, ರಾಹುಲ್ ಗಾಂಧಿ ಅವರ ಇಂಡಿಯಾ ಒಕ್ಕೂಟದ ಸ್ಪರ್ಧೆ ಬಗ್ಗೆ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.
ಶನಿವಾರ ರಾಹುಲ್ ಗಾಂಧಿ ಲಾಲು ಯಾದವ್ ಅವರ ಪಾಟ್ನಾ ಮನೆಗೆ ಹೋಗಿ ಪ್ರಮುಖ ಮಾತುಕತೆ ನಡೆಸಿದರು. ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ ಅವರು, ಬಿಹಾರದಲ್ಲಿ ಶಿಕ್ಷಣ ವ್ಯವಸ್ಥೆ ಮಾರಾಟವಾಗಿದೆ, ಸರ್ಕಾರವು ಯುವ ಜನರು ಉದ್ಯೋಗ ಪಡೆಯುವ ಅವಕಾಶಗಳನ್ನು ಕಸಿದುಕೊಳ್ಳುತ್ತಿದೆ. ಬಿಹಾರದ ಯುವಕರಿಗೆ ಕೆಲಸ ಸಿಗುತ್ತಿಲ್ಲ, ಹಣದುಬ್ಬರ ಗಗನಕ್ಕೇರುತ್ತಿದ್ದು, ಬಡ ಜನರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.
ಬಿಹಾರ ಸಾರ್ವಜನಿಕ ಸೇವಾ ಆಯೋಗದ (ಬಿಪಿಎಸ್ಸಿ) ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಉದ್ಯೋಗ ಆಕಾಂಕ್ಷಿಗಳ ನಿಯೋಗವನ್ನು ರಾಹುಲ್ ಗಾಂಧಿ ಭೇಟಿ ಮಾಡಿದರು. ಕಳೆದ ತಿಂಗಳು ನಡೆದಿರುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ರದ್ದು ಮಾಡಬೇಕು ಎಂದು ಹಲವು ಆಕಾಂಕ್ಷಿಗಳು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಗರ್ದಾನಿ ಬಾಗ್ಗೇ ಭೇಟಿ ನೀಡಿ ಸಮಸ್ಯೆ ಆಲಿಸುವಂತೆ ನಿಯೋಗವು ರಾಹುಲ್ ಗಾಂಧಿಗೆ ಮನವಿ ಮಾಡಿತು. ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಕಾರಣ ಅವರ ಬೆಂಬಲ ನಮಗೆ ಮುಖ್ಯವಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.












Click it and Unblock the Notifications