Jharkhand Election: ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ಎರಡನೇ ದೂರು ಕೊಟ್ಟ ಕಾಂಗ್ರೆಸ್
ಜಾರ್ಖಂಡ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ನವೆಂಬರ್ 20ರಂದು 38 ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಎನ್ಡಿಎ ಮತ್ತು ಇಂಡಿಯಾ ಒಕ್ಕೂಟ ಭರ್ಜರಿ ಪ್ರಚಾರ ನಡೆಸುತ್ತಿವೆ. ಇದೀಗ ಕಾಂಗ್ರೆಸ್ ಜಾರ್ಖಂಡ್ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಜಾರ್ಖಂಡ್ ಬಿಜೆಪಿಯ ಫೇಸ್ಬುಕ್ ಮತ್ತು 'ಎಕ್ಸ್' ಖಾತೆಗಳನ್ನು ನಿರ್ಬಂಧಿಸುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಜಾರ್ಖಂಡ್ ಬಿಜೆಪಿ ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳಲ್ಲಿ ಪೋಸ್ಟ್ ಮಾಡಲಾದ ಎಲ್ಲಾ ಕೋಮುವಾದ, ವಿಭಜಕ ಮತ್ತು ದುರುದ್ದೇಶಪೂರಿತ ವಿಡಿಯೊಗಳನ್ನು ತೆಗೆದುಹಾಕಲು ಆದೇಶ ಕೊಡುವಂತೆ ಕೇಳಿದೆ. ಇದಕ್ಕೂ ಮೊದಲು ಕಾಂಗ್ರೆಸ್ ಬಿಜೆಪಿ ವಿರುದ್ಧ ಈಗಾಗಲೇ ದೂರು ಕೊಟ್ಟಿದೆ.

ದೂರು ಕೊಟ್ಟ ಜೈರಾಮ್ ರಮೇಶ್
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ದೂರು ನೀಡಿದ್ದು, ಜಾರ್ಖಂಡ್ ಬಿಜೆಪಿ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಸುಳ್ಳು ಮಾಹಿತಿ ನೀಡಿದ್ದು ಮತದಾರರ ದಿಕ್ಕು ತಪ್ಪಿಸಲು ಬಿಜೆಪಿ ಮುಂದಾಗಿದೆ ಎಂದು ಆರೋಪಿಸಲಾಗಿದೆ. ದೂರು ಕೊಟ್ಟ ಬಳಿಕವೂ ಜಾರ್ಖಂಡ್ ಬಿಜೆಪಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವನ್ನು ತೆಗೆಯದೇ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಚುನಾವಣಾ ಆಯೋಗ ಮಧ್ಯಪ್ರವೇಶಿಸಬೇಕು ಎಂದು ಕೇಳಿದ್ದಾರೆ.
ಇಂಡಿಯಾ ಒಕ್ಕೂಟದ ಮಿತ್ರ ಪಕ್ಷ ಜೆಎಂಎಂ ಪಕ್ಷವನ್ನು ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ಜೈರಾಂ ರಮೇಶ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಅಲ್ಪ ಸಂಖ್ಯಾತರನ್ನು ಓಲೈಕೆ ಮಾಡಲಾಗುತ್ತಿದೆ ಎನ್ನುವ ರೀತಿಯಲ್ಲಿ ತೋರಿಸಲಾಗಿದ್ದು ವಿಡಿಯೋದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಹೋಲುವ ನಟ ಕೂಡ ಕಾಣಿಸಿಕೊಂಡಿರುವುದು ಕಾಂಗ್ರೆಸ್ ಅಸಮಾಧಾನಕ್ಕೆ ಕಾರಣವಾಗಿದೆ.
ಬಿಜೆಪಿ ಹಂಚಿಕೊಂಡಿರುವ ವಿಡಿಯೋ ಸ್ಪಷ್ಟವಾಗಿ ದುರುದ್ದೇಶಪೂರ್ವಕವಾಗಿದ್ದು, ತಪ್ಪಾದ ಸಂದೇಶವನ್ನು ನೀಡುತ್ತಿದೆ. ಈಗಾಗಲೇ ನಾವು ಈ ಬಗ್ಗೆ ದೂರು ಕೊಟ್ಟಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದರಿಂದಲೇ ಬಿಜೆಪಿ ಮತ್ತೆ ಅಂತಹ ಉದ್ಧಟತನ ಪ್ರದರ್ಶಿಸಿದೆ ಎಂದು ಜೈರಾಂ ರಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ವಿಡಿಯೋಗಳ ಮತದಾರರ ದಿಕ್ಕನ್ನು ತಪ್ಪಿಸುತ್ತವೆ, ಒಂದು ಪಕ್ಷಕ್ಕೆ ಮತ ಹಾಕದಂತೆ ಮಾಡಲು ಧರ್ಮ ದ್ವೇಷವನ್ನು ಬಿತ್ತಲಾಗುತ್ತಿದೆ, ಬಿಜೆಪಿಯ ಕೋಮು ಚುನಾವಣಾ ಪ್ರಚಾರಕ್ಕೆ ಬ್ರೇಕ್ ಹಾಕಬೇಕಿದೆ ಎಂದು ಅವರು ಹೇಳಿದ್ದಾರೆ.
ಜಾರ್ಖಂಡ್ ಬಿಜೆಪಿ ಸಾಮಾಜಿಕ ಮಾಧ್ಯಮಗಳನ್ನು ನೋಡಿಕೊಳ್ಳುವವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು, ಕೂಡಲೇ ಆಕ್ಷೇಪಾರ್ಹ ವಿಡಿಯೋ ಮತ್ತು ಜಾಹೀರಾತುಗಳನ್ನು ತೆಗೆದುಹಾಕಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.












Click it and Unblock the Notifications