ಸಿಎಂ ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್ ಜಗಳದ ನಡುವೆ ರಾಜಸ್ಥಾನವನ್ನು ಗೆಲ್ಲಲು ಕಾಂಗ್ರೆಸ್ ಪಣ
ಜೈಪುರ, ಜುಲೈ. 06: ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಅವರ ವಿರುದ್ಧ ನಿಂತಿರುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ನಡುವಿನ ಜಗಳವನ್ನು ಪರಿಹರಿಸಲು ಕಾಂಗ್ರೆಸ್ನ ವರಿಷ್ಠರು ಗುರುವಾರ ರಾಜ್ಯದ ನಾಯಕರೊಂದಿಗೆ ಚುನಾವಣಾ ಸಿದ್ಧತೆ ಕುರಿತು ಸಮಾಲೋಚನೆ ನಡೆಸಿದ್ದಾರೆ. ಇದರ ಜೊತೆಗೆ ಏನೇ ಆದರೂ ಈ ಬಾರಿಯೂ ರಾಜಸ್ಥಾನದ ಗದ್ದುಗೆ ಏರಬೇಕು ಎಂದು ಕಾಂಗ್ರೆಸ್ ಪಣ ತೊಟ್ಟಿದೆ.
ರಾಜ್ಯದ ಇಬ್ಬರು ಪ್ರಭಾವಿ ನಾಯಕರ ಜಗಳದ ಮಧ್ಯೆಯೂ ಎಲ್ಲರೂ ಒಟ್ಟಾಗಿ ಹೋರಾಡುತ್ತೇವೆ ಎಂದು ನಿರ್ಧರಿಸಿದ್ದೇವೆ ಮತ್ತು ನಾವು ಯಾವುದೇ ಬೆಲೆ ತೆತ್ತಾದರೂ ರಾಜಸ್ಥಾನವನ್ನು ಗೆಲ್ಲಲೇಬೇಕು ಎಂದು ಸಭೆಯ ಮುಕ್ತಾಯದ ನಂತರ ಹಿರಿಯ ನಾಯಕ ವೇಣುಗೋಪಾಲ್ ಹೇಳಿದ್ದಾರೆ.

ರಾಜ್ಯದಲ್ಲಿ ಜಾರಿಗೆ ತಂದಿರುವ ಕಲ್ಯಾಣ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್ ಪಕ್ಷವು ಮನೆ ಮನೆಗೆ ಪ್ರಚಾರ ನಡೆಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಗುರುವಾರ ಹೇಳಿದ್ದಾರೆ. ಮುಂದಿನ 90 ದಿನಗಳಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಪಕ್ಷದ ಮುಖಂಡರು ಜನರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ವೇಣುಗೋಪಾಲ್ ಮಾಧ್ಯಮಗಳಿಗೆ ವಿವರಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ವೇಣುಗೋಪಾಲ್, ಎಐಸಿಸಿ ರಾಜ್ಯ ಉಸ್ತುವಾರಿ ಸುಖಜೀಂದರ್ ರಾಂಧವಾ, ರಾಜ್ಯ ಘಟಕದ ಮುಖ್ಯಸ್ಥ ಗೋವಿಂದ್ ಸಿಂಗ್ ದೋತಸ್ರಾ, ಪೈಲಟ್ ಮತ್ತು ರಾಜಸ್ಥಾನದ ಇತರ ಹಿರಿಯ ನಾಯಕರು ಗುರುವಾರ ನಡೆದ ಚುನಾವಣಾ ಸಿದ್ಧತೆ ಸಭೆಯಲ್ಲಿ ಉಪಸ್ಥಿತರಿದ್ದರು.
ತಮ್ಮ ಎರಡೂ ಕಾಲ್ಬೆರಳುಗಳ ಮುರಿತದಿಂದ ಚೇತರಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ವೇಣುಗೋಪಾಲ್, "ನಾವು ಎಂದಿಗೂ ಸಿಎಂ ಅಭ್ಯರ್ಥಿಯನ್ನು ಘೋಷಿಸುವುದಿಲ್ಲ, ಚುನಾವಣೆಯನ್ನು ಒಟ್ಟಿಗೆ ಎದುರಿಸುತ್ತೇವೆ" ಎಂದು ತಿಳಿಸಿದ್ದಾರೆ.

"ಮಾಧ್ಯಮಗಳೊಂದಿಗೆ ಮಾತನಾಡದಂತೆ ಮತ್ತು ಪಕ್ಷದ ಅಸಮಾಧಾನವನ್ನು ಪಕ್ಷದೊಳಗೆ ಇಟ್ಟುಕೊಳ್ಳುವಂತೆ ಪಕ್ಷವು ನಾಯಕರಿಗೆ ಕಟ್ಟುನಿಟ್ಟಾಗಿ ಹೇಳಿದೆ. ಇದಲ್ಲದೆ, ಕಾಂಗ್ರೆಸ್ ಪಕ್ಷವು ರಾಜಸ್ಥಾನ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡಲು ಸಿದ್ಧವಾಗಿದೆ ಮತ್ತು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕಾ ಗಾಂಧಿ ಶೀಘ್ರದಲ್ಲೇ ಪ್ರಚಾರಕ್ಕಾಗಿ ರಾಜಸ್ಥಾನಕ್ಕೆ ಹೋಗಲಿದ್ದಾರೆ ಎಂದು ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ.
ಹಿಂದಿನ ವಸುಂಧರಾ ರಾಜೆ ನೇತೃತ್ವದ ಬಿಜೆಪಿ ಆಡಳಿತದ ವಿರುದ್ಧ ಭ್ರಷ್ಟಾಚಾರದ ಆರೋಪದ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪದ ಮೇಲೆ ರಾಜಸ್ಥಾನದ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೇಲೆ ಸಚಿನ್ ಪೈಲಟ್ ದಾಳಿ ನಡೆಸಿದ್ದರು. ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಅವರು ರಾಜಸ್ಥಾನ ಲೋಕಸೇವಾ ಆಯೋಗವನ್ನು ವಿಸರ್ಜಿಸಲು ಮತ್ತು ಅದರ ಪುನರ್ರಚನೆಗೆ ಒತ್ತಾಯಿಸಿದ್ದಾರೆ. ಜೊತೆಗೆ ಸರ್ಕಾರದಿಂದ ನಿರ್ಣಾಯಕ ಕ್ರಮ ಮತ್ತು ಉದ್ಯೋಗ ಪರೀಕ್ಷೆಯ ಪತ್ರಿಕೆ ಸೋರಿಕೆಯಾದ ಸಂತ್ರಸ್ತರಿಗೆ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.
ಕುತೂಹಲಕಾರಿಯಾಗಿ, ಚುನಾವಣಾ ಕಾರ್ಯತಂತ್ರದ ಸಭೆಗೆ ಎರಡು ದಿನಗಳ ಮೊದಲು, ಮಂಗಳವಾರ ಅಶೋಕ್ ಗೆಹ್ಲೋಟ್ ಅವರು ನೇಮಕಾತಿ ಪರೀಕ್ಷೆಯ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರಿಗೆ ಶಿಕ್ಷೆಯ ಪ್ರಮಾಣವನ್ನು 10 ವರ್ಷಗಳಿಂದ ಜೀವಾವಧಿ ಶಿಕ್ಷೆಗೆ ಹೆಚ್ಚಿಸಲು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಮಸೂದೆಯನ್ನು ತರಲಿದೆ ಎಂದು ಹೇಳಿದ್ದಾರೆ.












Click it and Unblock the Notifications