ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ; ಅಮಿತ್ ಶಾ ಗುರಿಯಾಗಿಸಿ ಅಭಿಯಾನ ಆರಂಭಿಸಿದ ಕಾಂಗ್ರೆಸ್
ಸಂಸತ್ ಅಧಿವೇಶನದ ಸಮಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಬಗ್ಗೆ ನೀಡಿದ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಕಿಡಿ ಕಾರಿತ್ತು. ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆ ಕೂಡ ನಡೆಸಲಾಗಿತ್ತು. ಈಗ ಹೋರಾಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಕಾಂಗ್ರೆಸ್ ನಿರ್ಧರಿಸಿದ್ದು, ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನ ಆರಂಭಿಸುವುದಾಗಿ ಘೋಷಿಸಿದೆ.
ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಶನಿವಾರ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿದ್ದು, ಅಮಿತ್ ಶಾ ವಿರುದ್ಧ ದೇಶಾದ್ಯಂತ ಅಭಿಯಾನ ಆರಂಭಿಸುವುದಾಗಿ ಮಾಹಿತಿ ನೀಡಿದರು. ಈ ಅಭಿಯಾನದಲ್ಲಿ ಕಾಂಗ್ರೆಸ್ ನಾಯಕರು ಗ್ರಾಮ ಮಟ್ಟದಲ್ಲಿ ಸಭೆಗಳನ್ನು ನಡೆಸಲಿದ್ದಾರೆ. ಆರಂಭದಲ್ಲಿ ಜನವರಿ 3ರಿಂದ ಜನವರಿ 26ರವರೆಗೆ ಅಭಿಯಾನ ನಡೆಯಲಿದ್ದು ಬಿಜೆಪಿ ಮತ್ತು ಆರ್ ಎಸ್ಎಸ್ ದಶಕಗಳಿಂದ ಅಂಬೇಡ್ಕರ್ ಮತ್ತು ಸಂವಿಧಾನಕ್ಕೆ ಹೇಗೆ ಅವಮಾನ ಮಾಡುತ್ತಿದೆ ಎನ್ನುವುದನ್ನು ಜನತೆಗೆ ತಿಳಿಸಲಿದ್ದಾರೆ ಎಂದರು.

ಒಂದು ವರ್ಷ ಅಭಿಯಾನ
ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನ ಮಹಾತ್ಮ ಗಾಂಧಿ, ಅಂಬೇಡ್ಕರ್ ಮತ್ತು ಸಂವಿಧಾನವನ್ನು ಗೌರವಿಸುತ್ತದೆ. ಭಾರತದ ಹಳ್ಳಿ ಹಳ್ಳಿಯಲ್ಲೂ ಅಭಿಯಾನ ನಡೆಲಿದೆ. ಏಕತೆ ಮತ್ತು ಸಾಮಾಜಿಕ ನ್ಯಾಯದ ಪ್ರಬಲ ಸಂದೇಶ ನೀಡಲಾಗುತ್ತದೆ. ವರ್ಷವಿಡೀ ಅಭಿಯಾನ ಮುಂದುವರೆಸಲು ಕಾಂಗ್ರೆಸ್ ನಿರ್ಧರಿಸಿದೆ.
ಪವನ್ ಖೇರಾ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಕಾರ, ಶುಕ್ರವಾರವೇ ಅಭಿಯಾನಕ್ಕೆ ಚಾಲನೆ ನೀಡಿದ್ದು, ಜನವರಿ 26, 2025ರಂದು ನಮ್ಮ ಸಂವಿಧಾನ ಮತ್ತು ಗಣರಾಜ್ಯದ 75 ವರ್ಷಗಳ ಸ್ಮರಣಾರ್ಥ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮಸ್ಥಳವಾದ ಮಧ್ಯಪ್ರದೇಶದ ಡಾ. ಅಂಬೇಡ್ಕರ್ ನಗರದಲ್ಲಿ ಬೃಹತ್ ರ್ಯಾಲಿಯೊಂದಿಗೆ ಮುಗಿಯಲಿದೆ ಎಂದು ಹೇಳಿದ್ದಾರೆ.
ಜನವರಿ 26, 2025 ರಿಂದ ಜನವರಿ 26, 2026 ರವರೆಗೆ ಸಂವಿಧಾನ ಉಳಿಸಿ ರಾಷ್ಟ್ರೀಯ ಪಾದಯಾತ್ರೆ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ. ದೇಶಾದ್ಯಂತ ಪಟ್ಟಣಗಳು ಮತ್ತು ಹಳ್ಳಿಗಳಲ್ಲಿ ಪಾದಯಾತ್ರೆ ನಡೆಯಲಿದೆ. ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಗೃಹ ಸಚಿವ ಅಮಿತ್ ಶಾ ಅವರನ್ನು ವಜಾ ಮಾಡಬೇಕು ಎಂದು ಪವನ್ ಖೇರಾ ತಿಳಿಸಿದ್ದಾರೆ.
ಅಮಿತ್ ಶಾ ಹೇಳಿದ್ದೇನು?
ಸಂಸತ್ತಿನ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಅಮಿತ್ ಶಾ ತಮ್ಮ ಭಾಷಣದ ವೇಳೆ, ಅಂಬೇಡ್ಕರ್, ಅಂಬೇಡ್ಕರ್ ಎಂದು ನಾಮಸ್ಮರಣೆ ಮಾಡುವುದು ಒಂದು ಫ್ಯಾಷನ್ ಆಗಿದೆ. ಇಷ್ಟು ಬಾರಿ ದೇವರ ನಾಮಸ್ಮರಣೆ ಮಾಡಿದರೆ ಏಳು ಜನ್ಮಗಳಿಗೆ ಸ್ವರ್ಗ ಸಿಗುತ್ತಿತ್ತು ಹೇಳಿದ್ದರು.












Click it and Unblock the Notifications