ಲೋಕಸಭಾ ಚುನಾವಣೆಗೂ ಮುನ್ನ ಪ್ರಿಯಾಂಕಾ ಗಾಂಧಿಗೆ ಅತಿ ಪ್ರಮುಖ ಹುದ್ದೆ- ಕಾಂಗ್ರೆಸ್ನಲ್ಲಿ ಸ್ಫೋಟಕ ಬೆಳವಣಿಗೆಗಳ ನಿರೀಕ್ಷೆ
ನವದೆಹಲಿ, ಜೂನ್ 10: ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಸಂಘಟನಾ ತಂಡವನ್ನು ಮರುರೂಪಿಸುವ ಕುರಿತ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬಂದಿವೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಗೆ ಅತಿ ಪ್ರಮುಖ ಹುದ್ದೆ ದೊರೆಯುವ ನಿರೀಕ್ಷೆ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ.
ಉತ್ತರ ಪ್ರದೇಶದ ಉಸ್ತುವಾರಿಯಾಗಿ ಮುಂದುವರಿಯಲು ಉತ್ಸುಕರಾಗಿಲ್ಲ ಎಂದು ಪ್ರಿಯಾಂಕಾ ಗಾಂಧಿ ಪಕ್ಷದ ನಾಯಕರಿಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಪಕ್ಷದಲ್ಲಿ ಪ್ರಮುಖ ಹುದ್ದೆಯನ್ನು ನೀಡುವ ನಿರೀಕ್ಷೆ ಇದೆ.

ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಕಳೆದ ವರ್ಷ ಅಕ್ಟೋಬರ್ನಲ್ಲಿ ಪ್ರಿಯಾಂಕಾ ಅವರು ಉತ್ತರ ಪ್ರದೇಶ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ. ವಿಧಾನಸಭೆ ಚುನಾವಣೆ ಸೋಲಿನ ನಂತರ ಉತ್ತರ ಪ್ರದೇಶದಲ್ಲಿ ಹೊಸ ತಂಡವನ್ನು ರಚಿಸಲಾಗಿದೆ. ಆ ಬಳಿಕ ಪ್ರಿಯಾಂಕಾ ಅವರು ಅಂದಿನ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು.
ಆದರೆ, ರಾಜೀನಾಮೆ ಅಂಗೀಕಾರವಾಗದ ಕಾರಣ ಪ್ರಿಯಾಂಕಾ ಅವರು ಪಕ್ಷದ ಉಸ್ತುವಾರಿಯಾಗಿ ಮುಂದುವರಿದಿದ್ದಾರೆ. ಖರ್ಗೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ, ಎಲ್ಲಾ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳು ರಾಜೀನಾಮೆಯನ್ನು ಸಲ್ಲಿಸಿದರು. ಆದರೆ ಅದು ಸಹ ಅಂಗೀಕರಿಸಲ್ಪಟ್ಟಿಲ್ಲ.

ಖರ್ಗೆ ಅವರು ತಮ್ಮದೇ ಆದ ತಂಡವನ್ನು ರಚಿಸಲು ಸಿದ್ಧರಿರುವುದರಿಂದ, ಅಧಿಕೃತವಾಗಿ ಪ್ರಿಯಾಂಕಾಗೆ ದೊಡ್ಡ ಜವಾಬ್ದಾರಿ ಸಿಗುವ ನಿರೀಕ್ಷೆಯಿದೆ. ಚುನಾವಣಾ ಪ್ರಚಾರದಲ್ಲಿ ಪ್ರಿಯಾಂಕಾ ದೊಡ್ಡ ಪಾತ್ರವನ್ನು ವಹಿಸುತ್ತಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈ ವರ್ಷದ ಕೊನೆಯಲ್ಲಿ ದೇಶದ ಐದು ಪ್ರಮುಖ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿವೆ. ಮುಂದಿನ ವರ್ಷದ ಏಪ್ರಿಲ್-ಮೇನಲ್ಲಿ ಲೋಕಸಭೆಗೆ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಿಯಾಂಕಾ ಅವರಿಗೆ ಪ್ರಮುಖ ಹುದ್ದೆಯ ಜವಾಬ್ದಾರಿಯನ್ನು ವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಿಯಾಂಕಾ ಅವರು ಉತ್ತರ ಪ್ರದೇಶ ಉಸ್ತುವಾರಿಯಾಗಿ ಮುಂದುವರಿಯುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ. ಹಿಮಾಚಲ ಪ್ರದೇಶದಲ್ಲಿ ಪಕ್ಷದ ಗೆಲುವಿನಲ್ಲಿ ಅವರು ದೊಡ್ಡ ಪಾತ್ರವನ್ನು ವಹಿಸಿದ್ದಾರೆ. ಆ ನಂತರ ಕರ್ನಾಟಕದಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರೊಂದಿಗೆ ವ್ಯಾಪಕವಾಗಿ ಪ್ರಚಾರ ಮಾಡಿದ್ದರು.
ಪ್ರಿಯಾಂಕಾ ಅವರು ಛತ್ತೀಸ್ಗಢದಲ್ಲಿ ಸಕ್ರಿಯರಾಗಿದ್ದಾರೆ. ಅಲ್ಲಿ ಅವರು ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಅವರು ಮುಂದಿನ ಸೋಮವಾರ ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಈ ಮೂಲಕ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪ್ರಚಾರ ಆರಂಭಿಸಲಿದೆ. ತೆಲಂಗಾಣ ಘಟಕವೂ ಅವರನ್ನು ಪ್ರಚಾರದ ಭಾಗವಾಗುವಂತೆ ಆಹ್ವಾನಿಸಿದೆ.
ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ರಾಹುಲ್ ಅನರ್ಹಗೊಂಡರೆ, ಪ್ರಿಯಾಂಕಾ ಅವರನ್ನು ಮುನ್ನೆಲೆಗೆ ತರುವ ಸಾಧ್ಯತೆಗಳನ್ನೂ ಅಲ್ಲಗಳೆಯುವಂತಿಲ್ಲ.
ಹೊಸ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ (ಸಿಡಬ್ಲ್ಯುಸಿ) ಪ್ರಿಯಾಂಕಾ ಸ್ಥಾನ ಪಡೆಯುವುದು ಖಚಿತವಾಗಿದ್ದರೂ, ಚುನಾವಣಾ ನಿರ್ವಹಣೆಯ ಮುಖ್ಯಸ್ಥರ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗುತ್ತದೆಯೇ ಎಂದು ಕಾದು ನೋಡಬೇಕಿದೆ.












Click it and Unblock the Notifications