Breaking: ಇಡಿ ದಾಳಿ, ಕಾಂಗ್ರೆಸ್ ಸಂಸದರಿಂದ ಸಭೆ
ನವದೆಹಲಿ, ಆ.04: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿರುವ ಯಂಗ್ ಇಂಡಿಯನ್ ಕಚೇರಿಗೆ ಜಾರಿ ನಿರ್ದೇಶನಾಲಯ (ಇಡಿ) ಬೀಗ ಜಡಿದಿದೆ. ಕಾಂಗ್ರೆಸ್ ಸಂಸದರು ತಮ್ಮ ಮುಂದಿನ ಹೆಜ್ಜೆ ಕುರಿತು ಚರ್ಚಿಸಲು ಗುರುವಾರ ಸಭೆ ನಡೆಸಲಿದ್ದಾರೆ.
ದೆಹಲಿಯ ಹೆರಾಲ್ಡ್ ಹೌಸ್ನಲ್ಲಿರುವ ಯಂಗ್ ಇಂಡಿಯನ್ನ ಕಚೇರಿಯಲ್ಲಿ ಮಂಗಳವಾರ ಮತ್ತು ಬುಧವಾರದಂದು ಶೋಧ ನಡೆಯುವಾಗ ಅವರ ಕಡೆಯಿಂದ ಯಾರೂ ಇಲ್ಲದ ಕಾರಣ ತಾತ್ಕಾಲಿಕವಾಗಿ ಬೀಗ ಹಾಕಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿವೆ.
ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಸಮನ್ಸ್ ನೀಡಲಾಗಿದೆ. ಅಧಿಕೃತವಾಗಿ ಒಬ್ಬರು ಶೋಧಕಾರ್ಯದ ವೇಳೆ ಸ್ವತಃ ಹಾಜರಾದಾಗ, ಸೀಲ್ ಅನ್ನು ತೆಗೆದುಹಾಕಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಇತ್ತ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಮನೆಯ ಹೊರಗೆ ಭಾರೀ ಭದ್ರತೆ ನಿಯೋಜಿಸಲಾಗಿದೆ. ಕಾಂಗ್ರೆಸ್ ಪ್ರಧಾನ ಕಚೇರಿಗೆ ಹೋಗುವ ರಸ್ತೆಗಳಲ್ಲಿ ತಾತ್ಕಾಲಿಕವಾಗಿ ಬ್ಯಾರಿಕೇಡ್ ಹಾಕಲಾಗಿದೆ.
ಪ್ರಕರಣದಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯನ್ನು ಪ್ರಶ್ನಿಸಿದ ಕೆಲವು ದಿನಗಳ ನಂತರ ಮಂಗಳವಾರ, ರಾಷ್ಟ್ರ ರಾಜಧಾನಿಯ 12 ಸ್ಥಳಗಳಲ್ಲಿ ತನಿಖಾ ಸಂಸ್ಥೆ ದಾಳಿ ನಡೆಸಿತು. ಅದರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಕಚೇರಿಯು ಒಂದು.
ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಸ್ಥಾಪಿಸಿದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ನಡೆಸುತ್ತಿರುವ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಅನ್ನು ಯಂಗ್ ಇಂಡಿಯನ್ಸ್ ಸ್ವಾಧೀನಪಡಿಸಿಕೊಂಡಿದೆ. ಇದರಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಆರೋಪಿಸಲಾಗಿದ್ದು, ಇದನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣ ಎಂದು ಕರೆಯಲಾಗಿದೆ.
ಯಂಗ್ ಇಂಡಿಯನ್ ಲಾಭಕ್ಕಾಗಿ ಇರುವ ಕಂಪನಿಯಲ್ಲ ಎಂದು ಕಾಂಗ್ರೆಸ್ ಪ್ರತಿಪಾದಿಸುತ್ತದೆ. ಇದರಿಂದಾಗಿ ಅಕ್ರಮ ಹಣ ವರ್ಗಾವಣೆ ಪ್ರಶ್ನೆಯೇ ಇಲ್ಲ ಎಂದಿದೆ. ದಾಳಿ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಹೆರಾಲ್ಡ್ ಕಚೇರಿ ಮುಂದೆ ಭಾರೀ ಪ್ರತಿಭಟನೆ ನಡೆಸಿದ್ದರು. ಕಾಂಗ್ರೆಸ್ ಇದನ್ನು ಸೇಡಿನ ರಾಜಕಾರಣ ಎಂದು ಕರೆದಿದೆ. ಈ ಸಂಬಂಧ ಇಂದು ಕಾಂಗ್ರೆಸ್ ಸಂಸದರು ಸಭೆ ನಡೆಸಿ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ.












Click it and Unblock the Notifications