ಕಾಂಗ್ರೆಸ್ ಮುಕ್ತ ಭಾರತ ಎಂದಿಗೂ ಸಾಧ್ಯವಿಲ್ಲ: ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್
ಮುಂಬೈ, ಡಿ. 29: ದೇಶದಲ್ಲಿ ಕಾಂಗ್ರೆಸ್ ಮುಕ್ತ ಭಾರತ ಎಂದಿಗೂ ಸಾಧ್ಯವಿಲ್ಲ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.
ರಾಜಕೀಯ ಜೀವನದಲ್ಲಿ ಹಲವು ಏಳು ಬೀಳುಗಳನ್ನು ಅನುಭವಿಸಿರುವ ಹಿರಿಯ ರಾಜಕಾರಣಿ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆಯಂದು ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದ್ದು, "ಕಾಂಗ್ರೆಸ್ ಮುಕ್ತ ಭಾರತ" ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
"ಕಾಂಗ್ರೆಸ್ ಮುಕ್ತ ಭಾರತವಾಗಲು ಸಾಧ್ಯವಿಲ್ಲ. ದೇಶವನ್ನು ಮುಂದೆ ಕೊಂಡೊಯ್ಯಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಮರೆಯಲು ಸಾಧ್ಯವಿಲ್ಲ. ದೇಶದ ಪ್ರಗತಿಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ. ನಾವು ಅದರ ಮೌಲ್ಯವನ್ನು ನಿರ್ಲಕ್ಷಿಸಲಾಗುವುದಿಲ್ಲ" ಎಂದು ತಿಳಿಸಿದ್ದಾರೆ.

"ಪಕ್ಷಗಳ ನೀತಿಗಳಲ್ಲಿ ವ್ಯತ್ಯಾಸಗಳಿರಬಹುದು. ನನಗೂ ಇದೆ. ಆದರೆ, ದೇಶಕ್ಕಾಗಿ ಅದರ ಕೊಡುಗೆಯನ್ನು ನಾವು ಮರೆಯಲು ಸಾಧ್ಯವಿಲ್ಲ. ಅಧಿಕಾರದಲ್ಲಿರುವವರು ಕಾಂಗ್ರೆಸ್ ಬಗ್ಗೆ ದ್ವೇಷವನ್ನು ಹರಡುತ್ತಿದ್ದಾರೆ" ಎಂದು ಪವಾರ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಮುಂಬೈ ಕಾಂಗ್ರೆಸ್ ನಗರ ಘಟಕಕ್ಕೆ ಶರದ್ ಪವಾರ್ ಧನ್ಯವಾದ ಅರ್ಪಿಸಿದ್ದಾರೆ. ಕಾಂಗ್ರೆಸ್ ಭವನದ ನೆನಪುಗಳನ್ನು ಮೆಲುಕು ಹಾಕಿದ ಅವರು, "ಸ್ವಾತಂತ್ರ್ಯದ ನಂತರ ರಾಜ್ಯ ಕಾಂಗ್ರೆಸ್ ಕಚೇರಿ ಕಾಂಗ್ರೆಸ್ ಭವನದಲ್ಲಿತ್ತು. ಕಾಂಗ್ರೆಸ್ ಮತ್ತು ಪುಣೆ ನಡುವೆ ಬಲವಾದ ಸಂಪರ್ಕವಿದೆ" ಎಂಬುದನ್ನು ತಿಳಿಸಿದ್ದಾರೆ.
ಬಹಳ ದಿನಗಳ ನಂತರ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಅವರ ಜೊತೆಗೆ ಎನ್ಸಿಪಿ ಸಂಸದ ಶ್ರೀನಿವಾಸ್ ಪಾಟೀಲ್ ಮತ್ತು ಇತರ ಸ್ಥಳೀಯ ಎನ್ಸಿಪಿ ನಾಯಕರು ಇದ್ದರು.

ಶರದ್ ಪವಾರ್ ಈ ಹಿಂದೆ 2014 ರ ಲೋಕಸಭೆ ಚುನಾವಣೆಯ ವೇಳೆ ಕಾಂಗ್ರೆಸ್ ಭವನಕ್ಕೆ ಬಂದಿದ್ದರು.
ಈ ವೇಳೆ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ಎನ್ಸಿಪಿಯ ಅನಿಲ್ ದೇಶಮುಖ್, ಶಿವಸೇನೆ (ಉದ್ಧವ್) ನಾಯಕ ಸಂಜಯ್ ರಾವತ್ ನಾಯಕರ ಹೆಸರನ್ನು ಪಟ್ಟಿ ಮಾಡಿದ್ದು, ಜಾರಿ ನಿರ್ದೇಶನಾಲಯದಂತಹ ಕೇಂದ್ರ ತನಿಖಾ ಸಂಸ್ಥೆಗಳನ್ನು ಹೇಗೆ ದುರುಪಯೋಗ ಮಾಡಬಹುದು ಎಂಬುದಕ್ಕೆ ಉತ್ತಮ ಉದಾಹರಣೆ ಎಂದು ಎನ್ಸಿಪಿ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಹೇಳಿದ್ದಾರೆ.
ಭವಿಷ್ಯದಲ್ಲಿ ಯಾರಿಗಾದರೂ ಇದೇ ರೀತಿಯ ಪರಿಸ್ಥಿತಿ ಎದುರಾಗದಂತೆ ತಡೆಯಲು ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.












Click it and Unblock the Notifications