ಮಲ್ಲಿಕಾರ್ಜುನ ಖರ್ಗೆ ಕನ್ನಡಿಗರ ಹೆಮ್ಮೆ: ರಾಜ್ಯ ಕಾಂಗ್ರೆಸ್ ನಾಯಕರ ಶುಭಾಶಯ
ಬೆಂಗಳೂರು, ಅಕ್ಟೋಬರ್ 19: ಕಾಂಗ್ರೆಸ್ನ ನೂತನ ಸಾರಥಿಯಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಬುಧವಾರ ಆಯ್ಕೆಯಾಗಿದ್ದಾರೆ. ಏಳು ಸಾವಿರಕ್ಕೂ ಅಧಿಕ ಮತ ಗಳಿಸಿರುವ ಖರ್ಗೆ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಆಯ್ಕೆಗೆ ರಾಜ್ಯ ಕಾಂಗ್ರೆಸ್ ನಾಯಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, 'ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾರ್ದಿಕ ಅಭಿನಂದನೆಗಳು. ಪ್ರತಿಭೆ ಮತ್ತು ಅನುಭವವನ್ನು ಮೈಗೂಡಿಸಿಕೊಂಡ ಖರ್ಗೆಯವರಿಗೆ ಕಾಂಗ್ರೆಸ್ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವ ಶಕ್ತಿ ಇದೆ. ಖರ್ಗೆಯವರ ಆಯ್ಕೆ ಕನ್ನಡಿಗರಿಗೂ ಹೆಮ್ಮೆಯ ಸಂಗತಿ' ಎಂದು ತಿಳಿಸಿದ್ದಾರೆ.
ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ: ಹೋರಾಟದ ಬದುಕು, ಪಕ್ಷನಿಷ್ಠೆಗೆ ಒಲಿದ ಗೌರವ
ಖರ್ಗೆ ಅವರಿಗೆ ಅಭಿನಂದಿಸಿ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, 'ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೃದಯ ಪೂರ್ವಕ ಅಭಿನಂದನೆಗಳು. ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಎತ್ತರಕ್ಕೇರಲಿದೆ ಎನ್ನುವ ವಿಶ್ವಾಸವಿದೆ' ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಜೀವಂತವಾಗಿದೆ ಎಂದು ಈ ಚುನಾವಣೆಯು ತೋರಿಸಿದೆ. ಇದು ನ್ಯಾಯಯುತ ಚುನಾವಣೆಯಾಗಿತ್ತು. ಪಕ್ಷದ ಪ್ರತಿನಿಧಿಗಳು ಬಹಳ ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ನೂತನ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು. ಪ್ರತಿಸ್ಪರ್ಧಿ ಶಶಿ ತರೂರ್ ಅವರಿಗೆ ಧನ್ಯವಾದಗಳು' ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
'ರಾಷ್ಟ್ರದಲ್ಲಿ ಪ್ರಜಾಪ್ರಭುತ್ವವನ್ನು ಪ್ರತಿಷ್ಠಾಪಿಸುವಲ್ಲಿ ಕಾಂಗ್ರೆಸ್ ಕೊಡುಗೆ ಅನನ್ಯ. ಪ್ರಜಾಪ್ರಭುತ್ವದ ಆಶಯದಂತೆ ಪಕ್ಷದಲ್ಲೂ ಆಂತರಿಕ ಚುನಾವಣೆ ನಡೆದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು. ಇವರ ಅಧ್ಯಕ್ಷತೆಯಲ್ಲಿ ಪಕ್ಷ ಮತ್ತಷ್ಟು ಸದೃಢವಾಗಲಿದೆ' ಎಂದು ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ ಟ್ವೀಟಿಸಿದ್ದಾರೆ.
'ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತುಂಬು ಹೃದಯದ ಅಭಿನಂದನೆಗಳು. ಅನುಭವ, ಮುತ್ಸದ್ದಿತನ ಮತ್ತು ಜನಪರ ಕಾಳಜಿಯ ಮೇರು ವ್ಯಕ್ತಿತ್ವದ ಖರ್ಗೆಯವರು ಪಕ್ಷವನ್ನು ಅತ್ಯಂತ ಸಮರ್ಥವಾಗಿ ಮುನ್ನಡೆಸುತ್ತಾರೆಂಬ ಭರವಸೆಯಿದೆ. ಕರುನಾಡಿನ ನಾಯಕರೊಬ್ಬರು ಪಕ್ಷದ ಉನ್ನತ ಹುದ್ದೆ ಅಲಂಕರಿಸಿದ್ದು ನಮಗೆ ಹೆಮ್ಮೆ ತಂದಿದೆ' ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಘಟಕದ ಟ್ವೀಟ್
'ಎಐಸಿಸಿ ಅಧ್ಯಕ್ಷರಾಗಿ ಚುನಾಯಿತರಾದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು. ಖರ್ಗೆ ಅವರ ಸುದೀರ್ಘ ರಾಜಕೀಯ ಅನುಭವ, ಅಧ್ಯಯನ, ಜ್ಞಾನ, ಬದ್ಧತೆಗಳು ಕಾಂಗ್ರೆಸ್ ಪಕ್ಷವನ್ನು ಸೈದ್ದಂತಿಕವಾಗಿ ಹಾಗೂ ರಾಜಕೀಯವಾಗಿ ಇನ್ನಷ್ಟು ಗಟ್ಟಿಯಾಗಿ ಕಟ್ಟುವಲ್ಲಿ ಸಹಕಾರಿಯಾಗಲಿದೆ ಎಂದು ಕೆಪಿಸಿಸಿ ಟ್ವೀಟ್ ಮಾಡಿದೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಂಭ್ರಮಾಚರಣೆ
ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ರಾಜ್ಯ ಘಟಕದಲ್ಲಿ ಸಂತಸ ಮನೆ ಮಾಡಿದೆ. ಖರ್ಗೆ ಅವರ ಆಯ್ಕೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚಣೆ ಮಾಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಜರಿದ್ದರು.
ಖರ್ಗೆಗೆ ಅಭೂತಪೂರ್ವ ಗೆಲುವು
ಕಾಂಗ್ರೆಸ್ನ ಒಟ್ಟು 9,915 ಪ್ರತಿನಿಧಿಗಳ ಪೈಕಿ 9,497 ಪ್ರತಿನಿಧಿಗಳು ಮತ ಚಲಾಯಿಸಿದ್ದರು. ಚಲಾವಣೆಯಾದ ಮತಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ 7,897 ಮತಗಳು ಬಂದಿವೆ. ಪ್ರತಿಸ್ಪರ್ಧಿ ಶಶಿ ತರೂರ್ ಅವರು 1,000 ಮತಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 416 ಮತಗಳು ಅಮಾನ್ಯಗೊಂಡಿವೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮತ ಏಣಿಕೆ ಪ್ರಕ್ರಿಯ ನಡೆದಿದೆ.