ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಶೇ 96ರಷ್ಟು ಮತದಾನ, ಅ.19ರಂದು ಫಲಿತಾಂಶ
ನವದೆಹಲಿ, ಅಕ್ಟೋಬರ್ 17: ಬಹುನಿರೀಕ್ಷಿತ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಇಂದು ಸಂಜೆ 4 ಗಂಟೆಗೆ ಮುಕ್ತಾಯವಾಗಿದೆ. ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯೂ ಸೇರಿದಂತೆ ದೇಶದಾದ್ಯಂತ ಒಟ್ಟು 65 ಮತ ಕೇಂದ್ರಗಳಲ್ಲಿ ಮತದಾನ ನಡೆದಿದೆ.
9,915 ಪ್ರತಿನಿಧಿಗಳ ಪೈಕಿ 9,497 ಪ್ರತಿನಿಧಿಗಳು ಮತ ಚಲಾಯಿಸಿದ್ದಾರೆ. ಶೇ 96ರಷ್ಟು ಮತದಾನ ನಡೆದಿದೆ. ಎಐಸಿಸಿ ಕೇಂದ್ರ ಕಚೇರಿಯಲ್ಲಿ ಬುಧವಾರ ಮತ ಎಣಿಕೆ ನಡೆಯಲಿದೆ.
ಪಕ್ಷದ ಪ್ರಮುಖ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಕಣದಲ್ಲಿದ್ದಾರೆ. ಖರ್ಗೆ ಅವರಿಗೆ ಗಾಂಧಿ ಪರಿವಾರದ ಬೆಂಬಲವಿದೆ ಎಂಬ ಮಾತುಗಳು ಕೇಳಿಬಂದಿದೆ. ಕಾಂಗ್ರೆಸ್ನ ಕೆಲ ಹಿರಿಯ ನಾಯಕರು ಖರ್ಗೆ ಅವರಿಗೆ ಬಹಿರಂಗವಾಗಿ ಬೆಂಬಲ ನೀಡಿದ್ದಾರೆ. ಹೀಗಾಗಿ, ಖರ್ಗೆ ಅವರು ಗೆಲ್ಲುವ ಸಾಧ್ಯತೆಗಳು ಹೆಚ್ಚಿವೆ ಎಂದು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ.

ದೇಶದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಪ್ರಮುಖ ನಾಯಕರು ಮತ ಚಲಾಯಿಸಿದರು. ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಪ್ರಮುಖರು ಮತ ಚಲಾವಣೆ ಮಾಡಿದರು.
ಮತದಾನದ ಕುರಿತು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ, 'ಪ್ರಾಥಮಿಕ ವರದಿಗಳ ಪ್ರಕಾರ, ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹತೆ ಹೊಂದಿದ್ದ 9,915 ಪಿಸಿಸಿ ಪ್ರತಿನಿಧಿಗಳಲ್ಲಿ 9,497 ಮಂದಿ ಮತ ಚಲಾಯಿಸಿದ್ದಾರೆ. ಮತ ಚಲಾಯಿಸಿದವರ ಪ್ರಮಾಣ ಶೇ 95.78 ರಷ್ಟಿದೆ' ಎಂದು ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಈ ವಿಚಾರವಾಗಿ ಯಾವುದೇ ದೂರುಗಳು ಬಂದಿಲ್ಲ ಎಂದು ಮಿಸ್ತ್ರಿ ಹೇಳಿದ್ದಾರೆ.
ಈ ಸಮಯಕ್ಕಾಗಿ ಕಾಯುತ್ತಿದ್ದೆ: ಸೋನಿಯಾ ಗಾಂಧಿ
ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮತ ಚಲಾಯಿಸಿ ಪ್ರತಿಕ್ರಿಯಿಸಿದ ಸೋನಿಯಾ ಗಾಂಧಿ, 'ಈ ಸಮಯಕ್ಕಾಗಿ ಬಹಳ ದಿನಗಳಿಂದ ಕಾಯುತ್ತಿದೆ' ಎಂದು ತಿಳಿಸಿದ್ದಾರೆ.
ಸೋಮವಾರ ಬೆಳಿಗ್ಗೆ ಸಂತಸದಿಂದಲೇ ಮತದಾನದಲ್ಲಿ ಪಾಲ್ಗೊಂಡಿದ್ದ ಸೋನಿಯಾಗೆ ಮಗಳು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜೊತೆಯಾದರು. ಅವರ ಜೊತೆ 75 ಪ್ರತಿನಿಧಿಗಳು ಮತ ಚಲಾಯಿಸಿದರು. ಪ್ರಮುಖವಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಖರ್ಗೆ ಮತದಾನ
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸ್ಪರ್ಧಿ ಮಲ್ಲಿಕಾರ್ಜುನ ಖರ್ಗೆ ಮತದಾನ ಮಾಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕರ್ನಾಟಕದ ಕಾಂಗ್ರೆಸ್ ನಾಯಕರು ಹಾಗೂ ಪ್ರತಿನಿಧಿಗಳು ಮತ ಚಲಾಯಿಸಿದರು.
ಭಾರತ್ ಜೋಡೊ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಬಳ್ಳಾರಿಯಲ್ಲಿ ಮತದಾನ ಮಾಡಿದರು.
ಐತಿಹಾಸಿಕ ದಿನವೆಂದು ಬಣ್ಣಿಸಿದ ಕಾಂಗ್ರೆಸ್ ನಾಯಕರು
ದೆಹಲಿಯಲ್ಲಿ ಮತದಾನ ಮಾಡಿ ಪ್ರತಿಕ್ರಿಯಿಸಿದ ಕಾಂಗ್ರೆಸ್ನ ಪ್ರಮುಖ ನಾಯಕ ಜೈರಾಮ್ ರಮೇಶ್, ಇದೊಂದು ಐತಿಹಾಸಿಕ ದಿನವಾಗಿದೆ. ಭಾರತದ ಬೇರೆ ಯಾವುದೇ ರಾಜಕೀಯ ಪಕ್ಷದಲ್ಲಿ ಚುನಾವಣೆ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡುವುದಿಲ್ಲ. ಈ ಪ್ರಕ್ರಿಯೆಯು ಕಾಂಗ್ರೆಸ್ನ ಆಂತರಿಕ ಪ್ರಜಾಪ್ರಭುತ್ವವನ್ನು ತೋರಿಸುತ್ತದೆ ಎಂದು ತಿಳಿಸಿದರು. ಇದೇ ರೀತಿಯ ಅಭಿಪ್ರಾಯವನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಕ್ತಪಡಿಸಿದರು.
ಗಾಂಧಿ ಕುಟುಂಬದ ರಬ್ಬರ್ ಸ್ಟಾಂಪ್: ಖರ್ಗೆ ಬಗ್ಗೆ ಬಿಜೆಪಿ ವ್ಯಂಗ್ಯ
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣಾ ಕಣದಲ್ಲಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು, ನಕಲಿ ಗಾಂಧಿ ಕುಟುಂಬದ ರಬ್ಬರ್ ಸ್ಟಾಂಪ್ ಎಂದು ವ್ಯಂಗ್ಯವಾಡಿದೆ. ಚುನಾವಣೆಗೂ ಮುನ್ನ ಮಾತನಾಡಿದ್ದ ಖರ್ಗೆ, 'ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಗಾಂಧಿ ಪರಿವಾರದವರ ಕೊಡುಗೆ ದೊಡ್ಡದಿದೆ. ಅವರು ಅನುಭವಸ್ಥರು. ಹೀಗಾಗಿ, ಅವರ ಸಲಹೆಯನ್ನು ತೆಗೆದುಕೊಳ್ಳುತ್ತೇನೆ' ಎಂದು ಹೇಳಿದ್ದಾರೆ.












Click it and Unblock the Notifications