ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ನನ್ನ ಹೆಸರನ್ನು ಸೋನಿಯಾ ಗಾಂಧಿ ಸೂಚಿಸಿಲ್ಲ ಎಂದ ಖರ್ಗೆ
ಲಕ್ನೋ, ಅಕ್ಟೋಬರ್ 10: ಅಕ್ಟೋಬರ್ 17ರಂದು ನಡೆಯಲಿರುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಕಾವು ಪಡೆದುಕೊಂಡಿದೆ. ಕಾಂಗ್ರೆಸ್ನ ಪ್ರಮುಖ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಚುನಾವಣಾ ಕಣದಲ್ಲಿದ್ದಾರೆ. ಖರ್ಗೆ ಅವರಿಗೆ ಗಾಂಧಿ ಕುಟುಂಬದ ಬೆಂಬಲವಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ದಟ್ಟವಾಗಿವೆ. ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ ಖರ್ಗೆ ಹೆಸರನ್ನು ಸೂಚಿಸಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ.
ಈ ವಿಚಾರವಾಗಿ ಉತ್ತರ ಪ್ರದೇಶದ ಲಕ್ನೋನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಖರ್ಗೆ, ತಮ್ಮ ಹೆಸರನ್ನು ಸೋನಿಯಾ ಗಾಂಧಿ ಸೂಚಿಸಿರುವ ವದಂತಿ ಸುಳ್ಳು ಎಂದು ಸ್ಪಷ್ಪಪಡಿಸಿದ್ದಾರೆ.
ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ: ಬಾಲಕನೊಂದಿಗೆ ರಾಹುಲ್ ಗಾಂಧಿ ಪುಷ್ಅಪ್
'ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸೋನಿಯಾ ಗಾಂಧಿ ನನ್ನ ಹೆಸರನ್ನು ಸೂಚಿಸಿಯೇ ಇಲ್ಲ. ಇದು ವದಂತಿಯಾಗಿದೆ. ಈ ಬಗ್ಗೆ ನಾನು ಯಾವತ್ತೂ ಮಾತನಾಡಿಯೇ ಇಲ್ಲ. ಗಾಂಧಿ ಕುಟುಂಬದ ಯಾವುದೇ ಸದಸ್ಯರು ಈ ಚುನಾವಣೆಯಲ್ಲಿ ಸಕ್ರಿಯವಾಗಿರುವುದಿಲ್ಲ. ಅವರು ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸುವುದಿಲ್ಲ' ಎಂದು ತಿಳಿಸಿದ್ದಾರೆ.
'ಕಾಂಗ್ರೆಸ್ ಪಕ್ಷ, ಸೋನಿಯಾ ಗಾಂಧಿ ಹಾಗೂ ನನ್ನ ವಿರುದ್ಧ ಪಿತೂರಿಗಳು ನಡೆಯುತ್ತಿವೆ. ಆ ಕಾರಣ, ರಾಜಕೀಯ ವೈರಿಗಳು ವದಂತಿಗಳನ್ನು ಹಬ್ಬಿಸಿದ್ದಾರೆ. ಸೋನಿಯಾ, ರಾಹುಲ್ ಸೇರಿದಂತೆ ಗಾಂಧಿ ಕುಟುಂಬದ ಯಾವ ಸದಸ್ಯರೂ ಪಕ್ಷದ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ. ಅವರು ಯಾವುದೇ ಅಭ್ಯರ್ಥಿಯ ಬೆಂಬಲಕ್ಕೆ ನಿಲ್ಲುವುದಿಲ್ಲ' ಎಂದು ಖರ್ಗೆ ಸ್ಪಷ್ಟನೆ ನೀಡಿದ್ದಾರೆ.
ಈ ಚುನಾವಣೆಗೆ ಮತ ಚಲಾಯಿಸಲು ದೇಶದಾದ್ಯಂತ 9,300 ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗಿದೆ. ಅವರು ತಮಗಿಷ್ಟವಾಗುವ ಅಭ್ಯರ್ಥಿಗೆ ಮತ ಹಾಕುತ್ತಾರೆ. ಬಹುಮತ ಪಡೆದವರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದ ಪ್ರತಿನಿಧಿಗಳ ಕುರಿತು ಮಾಹಿತಿ ನೀಡಿರುವ ಖರ್ಗೆ, ಯುಪಿಯಲ್ಲಿ ಒಟ್ಟು 1,250 ಪ್ರತಿನಿಧಿಗಳು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.
'ದೇಶದ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದೆ. ಇದರ ವಿರುದ್ಧ ನಾನು ಹೋರಾಡಲು ಬಯಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿ ರಾಜಕಾರಣ ಮಾಡುತ್ತಿದ್ದಾರೆ' ಎಂದು ಆರೋಪಿಸಿದ್ದಾರೆ.
'ಬಿಜೆಪಿ ನಾಯಕರು ಸಿಬಿಐ ಹಾಗೂ ಇಡಿಯಂತಹ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಅವರ ವಿರುದ್ಧ ಹೋರಾಡಲು ನನಗೆ ಶಕ್ತಿ ಬೇಕು. ಈ ಕಾರಣಕ್ಕಾಗಿ, ಪಕ್ಷದ ಪ್ರಮುಖ ನಾಯಕರ ಆಶಯದ ಮೇರೆಗೆ ನಾನು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ' ಎಂದು ಖರ್ಗೆ ಹೇಳಿದ್ದಾರೆ.
ಪಕ್ಷದ ಮತ್ತೊಬ್ಬ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಈ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
'ಖರ್ಗೆ ಅವರು ಪಕ್ಷದ ಗೌರವಾನ್ವಿತ ಹಾಗೂ ಮುತ್ಸದ್ದಿ ನಾಯಕರು. ಅವರ ವಿರುದ್ಧ ಸ್ಪರ್ಧಿಸುವ ಬಗ್ಗೆ ಯೋಚಿಸಲೂ ಸಾಧ್ಯವಿಲ್ಲ' ಎಂದು ದಿಗ್ವಿಜಯ ಸಿಂಗ್ ಹೇಳಿದ್ದಾರೆ.
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋಟ್ ಸಹ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಈಗ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಮಹತ್ವ ಪಡೆದುಕೊಂಡಿದೆ.
ಗಾಂಧಿ ಮನೆತನದ ಸದಸ್ಯರು ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸದ ಕಾರಣ, 25 ವರ್ಷಗಳ ಬಳಿಕ ಗಾಂಧಿ ಮನೆತನದ ಸದಸ್ಯರಲ್ಲದವರು ಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆ.
ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ರಂದು ಫಲಿತಾಂಶ ಹೊರಬರಲಿದೆ.
ಇತ್ತ, ಕಾಂಗ್ರೆಸ್ ರಾಹುಲ್ ಗಾಂಧಿ ಅವರು ಭಾರತ್ ಜೋಡೊ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ. ತಮಿಳುನಾಡಿನ ಕನ್ಯಾಕುಮಾರಿಯಿಂದ ಹಿಡಿದು ಕಾಶ್ಮೀರದ ಶ್ರೀನಗರದವರೆಗೂ ನಡೆಯುವ ಯಾತ್ರೆಯು 3,500 ಕಿ.ಮೀ ಕ್ರಮಿಸಲಿದೆ. ಇದು ದೇಶದ ಹನ್ನೆರಡು ರಾಜ್ಯಗಳಲ್ಲಿ ಸಂಚರಿಸಲಿದೆ. ಸದ್ಯ, ಭಾರತ್ ಜೋಡೊ ಯಾತ್ರೆಯು ಕರ್ನಾಟಕದಲ್ಲಿ ಸಂಚರಿಸುತ್ತಿದ್ದು, ಜನಬೆಂಬಲ ಪಡೆದಿದೆ.