ನರೇಂದ್ರ ಮೋದಿ ಪ್ರಧಾನಿಯಾಗಲು ಕಾಂಗ್ರೆಸ್ನ 70 ವರ್ಷದ ಪ್ರಜಾಪ್ರಭುತ್ವ ಕಾರಣ: ಮಲ್ಲಿಕಾರ್ಜುನ ಖರ್ಗೆ
ಪಾಟ್ನಾ, ಜ. 05: 70 ವರ್ಷ ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಉಳಿಸಿಕೊಂಡಿದ್ದ ಕಾರಣಕ್ಕೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ಸಾಧ್ಯವಾಯಿತು. ನನ್ನಂತಹ ಬಡವರ ಮಗನು ಒಂದು ಪಕ್ಷವನ್ನು ಮುನ್ನಡೆಸುತ್ತಿದ್ದಾನೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಬಿಹಾರದ ಬಂಕಾ ಜಿಲ್ಲೆಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಿಂದ ಪ್ರೇರಿತವಾದ 1,000 ಕಿಲೋಮೀಟರ್ಗೂ ಹೆಚ್ಚು ದೂರದ ಯಾತ್ರೆಯನ್ನು ಆಯೋಜಿಸಲಾಗಿದೆ. ಈ ಮೆರವಣಿಗೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಚಾಲನೆ ನೀಡಿದ್ದಾರೆ.
ರಾಜ್ಯದ ಪ್ರಮುಖ ಭಾಗಗಳನ್ನು ಒಳಗೊಳ್ಳುವ ಈ ಮೆರವಣಿಗೆಯನ್ನು ರಾಜ್ಯ ರಾಜಧಾನಿಯಿಂದ ಸುಮಾರು 250 ಕಿಮೀ ದೂರದಲ್ಲಿರುವ "ಮಂದರ್" ಬೆಟ್ಟಗಳ ಸಮೀಪದಲ್ಲಿ ಪ್ರಾರಂಭಿಸಲಾಗಿದೆ. ಈ ಬೆಟ್ಟ ಹಿಂದೂ ಪುರಾಣಗಳಲ್ಲಿ ಉಲ್ಲೇಖವಾಗಿದೆ.

ಕಾಂಗ್ರೆಸ್ ಪಕ್ಷದ ಉನ್ನತ ಹುದ್ದೆಗೆ ಆಯ್ಕೆಯಾದ ನಂತರ ಮೊದಲ ಬಾರಿಗೆ ಬಿಹಾರಕ್ಕೆ ಭೇಟಿ ನೀಡಿರುವ ಮಲ್ಲಿಕಾರ್ಜುನ ಖರ್ಗೆ, "ಕೇಂದ್ರದ ಬಿಜೆಪಿ ಸರ್ಕಾರವು ಯುವಕರಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ ಮತ್ತು ಕೋಮು ಆರೋಪದ ಮಾತುಗಳನ್ನಾಡುತ್ತಾ ಸಾರ್ವಜನಿಕರ ಗಮನವನ್ನು ಬೇರೆಡೆಗೆ ತಿರುಗಿಸುತ್ತಿದೆ" ಎಂದು ಟೀಕಿಸಿದ್ದಾರೆ.
"ಸ್ವಾತಂತ್ರ್ಯದ ನಂತರ ದೇಶವನ್ನು ಆಳಿದ 70 ವರ್ಷಗಳಲ್ಲಿ ಕಾಂಗ್ರೆಸ್ ಏನನ್ನೂ ಸಾಧಿಸಲಿಲ್ಲ ಎಂದು ಆಗಾಗ್ಗೆ ಆರೋಪ ಮಾಡಲಾಗುತ್ತಿದೆ. ಆದರೆ, ಪ್ರಜಾಪ್ರಭುತ್ವವನ್ನು ಕಾಂಗ್ರೆಸ್ ಕಾಪಾಡಿದ್ದ ಕಾರಣಕ್ಕೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ಸಾಧ್ಯವಾಯಿತು. ನನ್ನಂತಹ ಬಡವರ ಮಗನು ಇಂದು ಒಂದು ರಾಷ್ಟ್ರೀಯ ಪಕ್ಷವನ್ನು ಮುನ್ನಡೆಸುತ್ತಿದ್ದಾನೆ" ಎಂದು ಖರ್ಗೆ ಹೇಳಿದ್ದಾರೆ.
ಇದರ ಜೊತೆಗೆ ಹಿರಿಯ ಕಾಂಗ್ರೆಸ್ ನಾಯಕ ಮತ್ತೊಮ್ಮೆ ಬಿಜೆಪಿಯ ರಾಷ್ಟ್ರೀಯತೆಯ ವಿರುದ್ಧ ಕಿಡಿ ಕಾರಿದ್ದಾರೆ. "ಬ್ರಿಟಿಷರ ವಿರುದ್ಧ ಹೋರಾಡಿದ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ್ದು ಕಾಂಗ್ರೆಸ್, ಸ್ವಾತಂತ್ರ್ಯ ಚಳವಳಿಯಲ್ಲಿ ಅವರು ಯಾವುದೇ ಪಾತ್ರವನ್ನು ವಹಿಸಲಿಲ್ಲ" ಎಂದು ಒತ್ತಿ ಹೇಳಿದ್ದಾರೆ.

ಈ ವೇಳೆ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಭಾಷಣದಲ್ಲಿ ಮಾಜಿ ಉಪಪ್ರಧಾನಿ ಜಗಜೀವನ್ ರಾಮ್ ಮತ್ತು ಮೊದಲ ಮುಖ್ಯಮಂತ್ರಿ ಕೃಷ್ಣ ಸಿಂಗ್ ಅವರಂತಹ ಬಿಹಾರದ ಕಾಂಗ್ರೆಸ್ ದಿಗ್ಗಜರನ್ನು ಸ್ಮರಿಸಿದ್ದಾರೆ. ಇತ್ತೀಚೆಗೆ ನೇಮಕಗೊಂಡ ರಾಜ್ಯಾಧ್ಯಕ್ಷ ಅಖಿಲೇಶ್ ಪ್ರಸಾದ್ ಸಿಂಗ್ ಸೇರಿದಂತೆ ಹಲವು ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಬುದ್ಧನ ಜ್ಞಾನೋದಯ ಮತ್ತು ಮಹಾತ್ಮಾ ಗಾಂಧಿಯವರ ಚಂಪಾರಣ್ ಸತ್ಯಾಗ್ರಹವನ್ನು ಒತ್ತಿಹೇಳುವ ಮೂಲಕ, ದೇಶದ ಎಲ್ಲಾ ದೊಡ್ಡ ಬದಲಾವಣೆಗಳು ಬಿಹಾರದೊಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಸಂಪರ್ಕ ಹೊಂದಿವೆ ಎಂದು ಹೇಳಿದ್ದಾರೆ.
ಮುಂದಿನ ತಿಂಗಳು ಸೋನಿಯಾ ಗಾಂಧಿ ಅಥವಾ ಪ್ರಿಯಾಂಕಾ ಗಾಂಧಿ ವಾದ್ರಾ ಸಾರ್ವಜನಿಕ ಸಭೆಗೆ ಬರುವ ನಿರೀಕ್ಷೆಯಿದ್ದು, ಅಂದ ಈಗ ಮೆರವಣಿಗೆಯು ರಾಜ್ಯ ರಾಜಧಾನಿ ಪಾಟ್ನಾವನ್ನು ತಲುಪುವ ಸಾಧ್ಯತೆಯಿದೆ. ಕಾರ್ಯಕ್ರಮವು ಗಯಾದಲ್ಲಿ ಮುಕ್ತಾಯಗೊಳ್ಳಲಿದ್ದು, ಅಲ್ಲಿ ರಾಹುಲ್ ಗಾಂಧಿ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ.












Click it and Unblock the Notifications