ಬಿಜೆಪಿ ವಿರುದ್ಧದ ಮೈತ್ರಿಕೂಟಕ್ಕೆ ಸೀಟು ಹಂಚಿಕೆಯೇ ಸವಾಲು!
ಬೆಂಗಳೂರು, ಜನವರಿ 01 : 2019ರ ಲೋಕಸಭಾ ಚುನಾವಣೆಗೆ ಮೈತ್ರಿಕೂಟ ರಚನೆಯಾದರೆ ಪ್ರಾದೇಶಿಕ ಪಕ್ಷಗಳಿಗೆ ಎಷ್ಟು ಸ್ಥಾನ ನೀಡಬೇಕು? ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಕರ್ನಾಟಕದಲ್ಲಿ ಜೆಡಿಎಸ್ 28ರಲ್ಲಿ 12 ಸ್ಥಾನಗಳುಗೆ ಬೇಕು ಎಂದು ಬೇಡಿಕೆ ಇಟ್ಟಿದೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜನವರಿ 15ರ ಬಳಿಕ ಎನ್.ಚಂದ್ರಬಾಬು ನಾಯ್ಡು (ಟಿಡಿಪಿ), ಶರದ್ ಪವಾರ್ (ಎನ್ಸಿಪಿ), ಫಾರೂಕ್ ಅಬ್ದುಲ್ಲಾ (ನ್ಯಾಷನಲ್ ಕಾನ್ಫರೆನ್ಸ್) ಜೊತೆ ಸಭೆ ನಡೆಸಲಿದ್ದು, ಪ್ರಾದೇಶಿಕ ಪಕ್ಷಗಳಿಗೆ ಹಂಚಿಕೆ ಮಾಡುವ ಸೀಟುಗಳ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ.
ಪ್ರಾದೇಶಿಕ ಪಕ್ಷಗಳ ಜೊತೆ ಮಾತುಕತೆ ನಡೆಸುವ ಹೊಣೆಯನ್ನು ಚಂದ್ರಬಾಬು ನಾಯ್ಡು ಅವರಿಗೆ ನೀಡಲಾಗಿದೆ. ಸೀಟು ಹಂಚಿಕೆ ಬಗ್ಗೆ ಅಂತಿಮ ತೀರ್ಮಾನವಾದರೆ, ಬಿಜೆಪಿ ವಿರುದ್ಧ ಹೋರಾಡಲು ಮೈತ್ರಿಕೂಟ ಅಸ್ತಿತ್ವಕ್ಕೆ ಬಂದಂತೆಯೇ.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆ ಮಾಡುವಾಗ ಮಾಡಿಕೊಂಡ ಒಪ್ಪಂದದಂತೆ 2:1ರ ಅನುಪಾತದಲ್ಲಿ ಸೀಟು ಹಂಚಿಕೆ ನಡೆಯಬೇಕಿದೆ. ಜೆಡಿಎಸ್ಗೆ 10 ಸೀಟು ಬಿಟ್ಟುಕೊಡುವ ಬಗ್ಗೆ ಚರ್ಚೆ ನಡೆದಿತ್ತು. ಈಗ ದೇವೇಗೌಡರು 12 ಸೀಟುಗಳಿಗೆ ಬೇಡಿಕೆ ಇಟ್ಟಿದ್ದಾರೆ....

ಕಾಂಗ್ರೆಸ್ ಕಣ್ಣಿಟ್ಟಿರುವ ಕ್ಷೇತ್ರಗಳು
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸೀಟು ಹೊಂದಾಣಿಕೆ ಮಾಡಿಕೊಳ್ಳಬೇಕು. ರಾಜ್ಯದಲ್ಲಿರುವ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಎಷ್ಟು ಸ್ಥಾನ ಸಿಗಲಿದೆ? ಎಂಬುದನ್ನು ಕಾದು ನೋಡಬೇಕು. ಕಾಂಗ್ರೆಸ್ ಕಣ್ಣಿಟ್ಟಿರುವ ಕೆಲವು ಕ್ಷೇತ್ರಗಳನ್ನು ಬಿಟ್ಟು ಕೊಡುವಂತೆ ಜೆಡಿಎಸ್ ಮನವಿ ಮಾಡಿದೆ. ಆದ್ದರಿಂದ, ಮೈತ್ರಿಕೂಟ ರಚನೆಗೆ ಮೊದಲು ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಲು ಕಾಂಗ್ರೆಸ್ ಬಯಸಿದೆ.

ಜೆಡಿಎಸ್ ಬೇಡಿಕೆ ಇಟ್ಟಿರುವ ಕ್ಷೇತ್ರ
ಕರ್ನಾಟಕದ ಚಿಕ್ಕಬಳ್ಳಾಪುರ ಮತ್ತು ತುಮಕೂರು ಕ್ಷೇತ್ರಗಳಲ್ಲಿ ದೇವೇಗೌಡರ ಕುಟುಂಬ ಸದಸ್ಯರು ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ನವರು ಹಾಲಿ ಸಂಸದರಾಗಿದ್ದಾರೆ. ಅದರಲ್ಲೂ ಚಿಕ್ಕಬಳ್ಳಾಪುರದಲ್ಲಿ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಸಂಸದರು. ತುಮಕೂರು ಕ್ಷೇತ್ರದಲ್ಲಿ ಮುದ್ದಹನುಮೇಗೌಡ ಅವರು ಸಂಸದರು.

ದೇವೇಗೌಡರು ಹೇಳಿದ್ದೇನು?
'ಲೋಕಸಭೆ ಸೀಟು ಹಂಚಿಕೆಯಲ್ಲಿ 12 ಕ್ಷೇತ್ರಗಳು ನಮಗೆ ಬೇಕು. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷರ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಯಾವುದೇ ಸಮಸ್ಯೆ ಇಲ್ಲದಂತೆ ಈ ಹಂಚಿಕೆ ಮಾಡಿಕೊಳ್ಳುತ್ತೇವೆ. ಜನವರಿ 8ಕ್ಕೆ ಅಧಿವೇಶನ ಮುಗಿಯಲಿದೆ. ಅಧಿವೇಶನದ ಬಳಿಕ ರಾಹುಲ್ ಗಾಂಧಿ ಜೊತೆ ಸಭೆ ಮಾಡಲಾಗುತ್ತದೆ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಎಲ್ಲಿ ಸೀಟು ಹೇಳಬಹುದು?
ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಭದ್ರ ನೆಲೆ ಹೊಂದಿದೆ. ಆ ಕ್ಷೇತ್ರಗಳನ್ನು ತಮಗೆ ಬಿಟ್ಟುಕೊಡುವಂತೆ ಪಕ್ಷ ಬೇಡಿಕೆ ಇಡಬಹುದು. ಆದರೆ, ಇದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಲಿದ್ದಾರೆಯೇ? ಕಾದು ನೋಡಬೇಕು.












Click it and Unblock the Notifications