ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ: ಆಂತರಿಕ ಸಮೀಕ್ಷೆ ಬಿಚ್ಚಿಟ್ಟ ರಾಹುಲ್ ಗಾಂಧಿ ಹೇಳಿದ್ದೇನು?
ನವದೆಹಲಿ, ಮೇ 29: ಈ ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಈ ಕುರಿತು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
'ನಾವು ಸುದೀರ್ಘ ಚರ್ಚೆ ನಡೆಸಿದ್ದೇವೆ. ನಮ್ಮ ಆಂತರಿಕ ಸಮೀಕ್ಷೆ ಕರ್ನಾಟಕದಲ್ಲಿ ಸರಿಯಾಗಿದೆ. ನಾವು ಕರ್ನಾಟಕದಲ್ಲಿ 136 ಸ್ಥಾನಗಳನ್ನು ಪಡೆದಿದ್ದೇವೆ. ಈಗ ನಾವು ಮಧ್ಯಪ್ರದೇಶದಲ್ಲಿ 150 ಸ್ಥಾನಗಳನ್ನು ಪಡೆಯಲಿದ್ದೇವೆ' ಎಂದು ಹೇಳಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆ ಕುರಿತು ಮಧ್ಯಪ್ರದೇಶದ ಪ್ರಮುಖ ಕಾಂಗ್ರೆಸ್ ನಾಯಕರು ಇಂದು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಪಕ್ಷದ ಪ್ರಧಾನ ಕಚೇರಿಯಲ್ಲಿ ಭೇಟಿಯಾದರು.
ಈ ಮಹತ್ವದ ಸಭೆಯಲ್ಲಿ ರಾಜ್ಯ ಘಟಕದ ಮುಖ್ಯಸ್ಥ ಕಮಲ್ ನಾಥ್ ಮತ್ತು ಮಧ್ಯಪ್ರದೇಶದ ಪಕ್ಷದ ಉಸ್ತುವಾರಿಗಳು ಭಾಗವಹಿಸಿದ್ದರು. ಪಕ್ಷದ ಕಾರ್ಯಕರ್ತರನ್ನು ಸಕ್ರಿಯಗೊಳಿಸಲು ಮತ್ತು ಚುನಾವಣೆಗೆ ವೇದಿಕೆಯನ್ನು ಸಿದ್ಧಪಡಿಸುವ ಯತ್ನಗಳನ್ನು ಕಾಂಗ್ರೆಸ್ ಮಾಡುತ್ತಿದೆ.
'ಮಧ್ಯಪ್ರದೇಶದಲ್ಲಿ ಚುನಾವಣೆಗೆ ಸುಮಾರು 4 ತಿಂಗಳುಗಳು ಉಳಿದಿವೆ. ಮಧ್ಯಪ್ರದೇಶದ ಭವಿಷ್ಯ ಮತ್ತು ರಾಜ್ಯದ ಪ್ರಮುಖ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ' ಎಂದು ಸಭೆಯ ನಂತರ ಕಮಲ್ ನಾಥ್ ಹೇಳಿದರು.

ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿ 'ಭಾರತ್ ಜೋಡೋ ಯಾತ್ರೆ' ನಡೆಸಿದ್ದರು. ಆ ಸಮಯದಲ್ಲಿ ಜನರು ಹಲವಾರು ಪ್ರಮುಖ ಸಮಸ್ಯೆಗಳನ್ನು ಎತ್ತಿದ್ದರು. ಈ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಪಕ್ಷವು ಹೇಳಿದೆ. ನಾವು ಯಾರೊಬ್ಬರ ಮುಖವನ್ನು ಇಟ್ಟುಕೊಂಡು ಚುನಾವಣೆ ಎದುರಿಸುವುದಿಲ್ಲವೆಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಈ ವಿಚಾರವಾಗಿ ಮಾತನಾಡಿರುವ ಪಕ್ಷದ ನಾಯಕ ಪವನ್ ಖೇರಾ ಅವರು, ಕನ್ಯಾಕುಮಾರಿಯಿಂದ ಶ್ರೀನಗರದವರೆಗೆ ಭಾರತ್ ಜೋಡೊ ಯಾತ್ರೆ ನಡೆಯಿತು. ರಾಹುಲ್ ಗಾಂಧಿ ಅವರು ರಾಜ್ಯದಾದ್ಯಂತ ಜನರೊಂದಿಗೆ ಹಲವಾರು ಸಂವಾದಗಳನ್ನು ನಡೆಸಿದರು' ಎಂದು ಹೇಳಿದ್ದಾರೆ.
ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ ಮತ್ತು ಮಹಿಳೆಯರ ಸುರಕ್ಷತೆಯಂತಹ ವಿಚಾರಗಳು ಈ ಸಂವಾದದಲ್ಲಿ ವ್ಯಕ್ತವಾಗಿದ್ದವು. ತಮ್ಮನ್ನು ಕಾಡುವ ಸಮಸ್ಯೆಗಳನ್ನು ರಾಜಕೀಯ ಪಕ್ಷಗಳು ಕೈಗೆತ್ತಿಕೊಳ್ಳಬೇಕೆಂದು ಜನರು ನಿರೀಕ್ಷಿಸುತ್ತಾರೆ ಎಂದು ಖೇರಾ ಹೇಳಿದರು.
ಮಧ್ಯಪ್ರದೇಶದಲ್ಲಿ 2018 ರ ಚುನಾವಣೆಯಲ್ಲಿ ಬಿಜೆಪಿ ಪರಾಭವಗೊಂಡಿತು. ಆದರೆ 2020 ರಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪತನದವಾಯಿತು. ಆ ನಂತರ ಮತ್ತೆ ಅಧಿಕಾರಕ್ಕೆ ಬರಲು ಯಶಸ್ವಿಯಾಯಿತು. ನವೆಂಬರ್ 29, 2005 ರಿಂದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದಲ್ಲಿ ಮತ್ತೊಂದು ಅವಧಿಯನ್ನು ಗೆಲ್ಲಲು ಬಿಜೆಪಿ ಮುಂದಾಗಿದೆ. ಡಿಸೆಂಬರ್ 18, 2018 ರಿಂದ ಮಾರ್ಚ್ 2020 ರ ಅವಧಿಯಲ್ಲಿ ಕಮಲ್ ನಾಥ್ ಅವರು ಕಾಂಗ್ರೆಸ್ ಸರ್ಕಾರದ ನೇತೃತ್ವ ವಹಿಸಿದ್ದರು.












Click it and Unblock the Notifications