ಮಧ್ಯಪ್ರದೇಶ, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು: ಬಿಜೆಪಿಯ ಆಂತರಿಕ ಸಮೀಕ್ಷೆ ಬಹಿರಂಗಪಡಿಸಿದ ರಾಹುಲ್
ನವದೆಹಲಿ, ಸೆಪ್ಟೆಂಬರ್ 25: ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ ಹಾಗೂ ಛತ್ತೀಸ್ಗಢ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ಪಕ್ಷದ ಆಂತರಿಕ ಸಮೀಕ್ಷೆ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ನಾವು ಖಂಡಿತವಾಗಿಯೂ ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿ ಅಭೂತಪೂರ್ವ ಗೆಲುವು ಸಾಧಿಸುತ್ತೇವೆ. ಬಹುಶಃ ತೆಲಂಗಾಣದಲ್ಲೂ ಜಯಭೇರಿ ಬಾರಿಸುತ್ತೇವೆ. ರಾಜಸ್ಥಾನದಲ್ಲಿ ಅತ್ಯಂತ ನಿಕಟ ಸ್ಪರ್ಧೆಯಿದೆ ಎಂದು ಅವರು ಹೇಳಿದ್ದಾರೆ.

ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಬಿಜೆಪಿಯ ಆಂತರಿಕ ಸಮೀಕ್ಷೆಯೂ ಇದೇ ರೀತಿಯಾಗಿದೆ ಎಂದು ಅವರು ಹೇಳಿದರು. 2024 ರ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ' ಭಾರತವು ವಿಜಯಶಾಲಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ರಾಷ್ಟ್ರವ್ಯಾಪಿ ಜಾತಿ ಗಣತಿ ಮಾಡಬೇಕೆಂದು ಬೇಡಿಕೆ ಇಟ್ಟ ಅವರು, 'ಜಾತಿ ಜನಗಣತಿಯ ಬೇಡಿಕೆಯಿಂದ ಗಮನವನ್ನು ಸೆಳೆಯಲು ಬಿಜೆಪಿಯು ವಿಭಿನ್ನ ತಂತ್ರಗಳನ್ನು ಬಳಸಿಕೊಳ್ಳುತ್ತಿದೆ' ಎಂದು ಆರೋಪಿಸಿದ್ದಾರೆ.
ಲೋಕಸಭೆಯಲ್ಲಿ ಬಿಎಸ್ಪಿ ನಾಯಕ ಡ್ಯಾನಿಶ್ ಅಲಿ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ರಾಹುಲ್ ಕಿಡಿಕಾರಿದ್ದಾರೆ.

ದೇಶದ ಸಂಪತ್ತಿನಲ್ಲಿ ಭಾರಿ ಅಸಮಾನತೆ ಕಂಡುಬರುತ್ತಿದೆ. ದೊಡ್ಡ ಪ್ರಮಾಣದ ನಿರುದ್ಯೋಗ ಸಮಸ್ಯೆ ಇದೆ. ಕೆಳಜಾತಿ, ಒಬಿಸಿ ಮತ್ತು ಬುಡಕಟ್ಟು ಸಮುದಾಯಗಳಿಗೆ ಭಾರಿ ಅನ್ಯಾಯವಾಗಿದೆ. ದೇಶವು ಬೆಲೆ ಏರಿಕೆಯಂತಹ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ನಮ್ಮ ವಾದವನ್ನು ಮಂಡಿಸಲು ಸಂಸತ್ತಿನಲ್ಲಿ ನಮಗೆ ಅವಕಾಶ ನೀಡಲಾಗುತ್ತಿಲ್ಲ. ನಮಗೆ ಅಡ್ಡಿಪಡಿಸುವ ಮೂಲಕ ಬಿಜೆಪಿ ಚುನಾವಣೆಗಳನ್ನು ಗೆಲ್ಲುತ್ತಿದೆ. ಆದ್ದರಿಂದ ನಾವು ನಮ್ಮ ಪಕ್ಷದ ನೆರೆಟಿವ್ ಅನ್ನು ನಿರ್ಮಿಸುವ ಮೂಲಕ ಚುನಾವಣೆಯನ್ನು ಎದುರಿಸುತ್ತಿವೆ. ಇದು ಕರ್ನಾಟಕ ಕೆಲಸ ಮಾಡಿದೆ. ಕರ್ನಾಟಕ ಚುನಾವಣೆಯಿಂದ ಕಾಂಗ್ರೆಸ್ ಪ್ರಮುಖ ಪಾಠವನ್ನು ಕಲಿತಿದೆ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ.
ತೆಲಂಗಾಣ, ಛತ್ತೀಸ್ಗಢ ಮತ್ತು ಇತರ ರಾಜ್ಯಗಳಲ್ಲಿ ಸಕಾರಾತ್ಮಕ ಕಾರ್ಯಸೂಚಿಯೊಂದಿಗೆ ನಿರೂಪಣೆಯನ್ನು ಕಾಂಗ್ರೆಸ್ ನಿಯಂತ್ರಿಸುತ್ತಿದೆ. ಈ ರಾಜ್ಯಗಳಲ್ಲಿ ಬಿಜೆಪಿ ಎಲ್ಲಿಯೂ ಕಾಣಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.
ಈ ವರ್ಷದ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವನ್ನು ದಾಖಲಿಸಿದೆ. ಈ ಮೂಲಕ ಕಾಂಗ್ರೆಸ್ನ ಉತ್ಸಾಹ ಹೆಚ್ಚಾಗಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬಂದಿವೆ.
ರಾಜಸ್ಥಾನ, ತೆಲಂಗಾಣ, ಛತ್ತೀಸ್ಗಢ ಹಾಗೂ ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಗಳು ಈ ವರ್ಷದ ಕೊನೆಯಲ್ಲಿ ನಡೆಯಲಿವೆ.












Click it and Unblock the Notifications