ರಾಹುಲ್ ಗಾಂಧಿಯವರೇ ಎಐಸಿಸಿ ಸಾರಥಿಯಾಗಲಿ: ಕೈ ನಾಯಕರ ಬಯಕೆ
ನವದೆಹಲಿ, ಮಾರ್ಚ್ 13: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿಯವರನ್ನೇ ಆಯ್ಕೆ ಮಾಡಬೇಕೆಂದು ಪಕ್ಷದ ಕಾರ್ಯಕರ್ತರು ಬಯಸುತ್ತಾರೆ ಎಂದು ಕಾಂಗ್ರೆಸ್ ಮುಖ್ಯ ಸಚೇತಕ ಮಾಣಿಕಂ ಠಾಗೋರ್ ಹೇಳಿದ್ದಾರೆ.
ಪಂಚರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶವು ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆ ಗಾಳಿ ಬೀಸುವಂತೆ ಮಾಡಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ನೂತನ ಅಧ್ಯಕ್ಷ ಗಾದಿಗೆ ಯಾರು ಸೂಕ್ತ ಎನ್ನುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಈ ಹಿನ್ನೆಲೆ ಭಾನುವಾರ ನವದೆಹಲಿ ಎಐಸಿಸಿ ಕಚೇರಿಯಲ್ಲಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಯಿತು.
ಐದು ರಾಜ್ಯಗಳ ಚುನಾವಣಾ ಫಲಿತಾಂಶವು ಕಾಂಗ್ರೆಸ್ ಭವಿಷ್ಯದ ಬಗ್ಗೆ ಯೋಚಿಸುವಂತೆ ಮಾಡಿದೆ. ಪಂಜಾಬ್ ನೆಲದಲ್ಲೂ ಅಧಿಕಾರವನ್ನು ಕಳೆದುಕೊಂಡ ಕಾಂಗ್ರೆಸ್, ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ್ ಮತ್ತು ಮಣಿಪುರದಲ್ಲಿ ಹೀನಾಯವಾಗಿ ಸೋಲು ಕಂಡಿದೆ. ಸೋಲಿನ ಕುರಿತು ಆತ್ಮಾವಲೋಕನ ನಡೆಸುವುದಕ್ಕೆ ಹಾಗೂ ಎಐಸಿಸಿಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವುದಕ್ಕೆ ಸಂಬಂಧಿಸಿದಂತೆ ಚರ್ಚಿಸುವುದಕ್ಕಾಗಿ ಸಿಡಬ್ಲ್ಯೂಸಿ ಸಭೆಯನ್ನು ನಡೆಸಲಾಯಿತು. ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆಗೂ ಪೂರ್ವದಲ್ಲಿ ಮತ್ತು ಸಭೆಯ ನಂತರದಲ್ಲಿ ನಾಯಕರ ಪ್ರತಿಕ್ರಿಯೆ ಹೇಗಿತ್ತು ಎಂಬುದನ್ನು ಈ ವರದಿಯಲ್ಲಿ ತಿಳಿಯೋಣ.

"ರಾಹುಲ್ ಗಾಂಧಿಯವರೇ ಭವಿಷ್ಯ ಕಾಂಗ್ರೆಸ್ ಅಧ್ಯಕ್ಷ"
"2019ರಲ್ಲಿ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಲೋಕಸಭೆ ಚುನಾವಣೆಯನ್ನು ಸೋತ ನಂತರದಲ್ಲಿ ಅವರು ಕಾರ್ಯಕಾರಿ ಸಮಿತಿಗೆ ತೆರಳಿ ಪಕ್ಷದ ಮುಖ್ಯಸ್ಥರ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಅವರು ದಾರಿ ತೋರಿಸುವ ನಾಯಕರಾಗಿದ್ದು, ಅವರೇ ನಮ್ಮನ್ನು ಮುನ್ನಡೆಸಬೇಕು. "ಕಾಂಗ್ರೆಸ್ ಕಾರ್ಯಕರ್ತರಾದ ನಾವು ಯಾವಾಗಲೂ ರಾಹುಲ್ ಗಾಂಧಿ ರಾಜೀನಾಮೆಯನ್ನು ಹಿಂಪಡೆಯಬೇಕೆಂದು ಬಯಸುತ್ತೇವೆ. ಭವಿಷ್ಯದಲ್ಲಿ ರಾಹುಲ್ ಗಾಂಧಿಯವರೇ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವುದಾಗಿ ನಾವು ಭಾವಿಸುತ್ತೇವೆ," ಎಂದು ಕಾಂಗ್ರೆಸ್ ಮುಖ್ಯ ಸಚೇತಕ ಮಾಣಿಕಂ ಠಾಗೋರ್ ಹೇಳಿದ್ದಾರೆ.
ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಬೇಕು ಎಂದ ಗೆಹ್ಲೋಟ್:
ಎಐಸಿಸಿ ಸಭೆ ಆರಂಭಕ್ಕೂ ಮುನ್ನ ಮಾತನಾಡಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, "ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಬೇಕು. ಕಳೆದ ಮೂರು ದಶಕದಲ್ಲಿ ಗಾಂಧಿ ಕುಟುಂಬದ ಯಾವೊಬ್ಬ ಸದಸ್ಯರು ಪ್ರಧಾನಿ, ಸಚಿವರಾಗಿಲ್ಲ. ಕಾಂಗ್ರೆಸ್ ಒಟ್ಟಾಗಿರಲು ಗಾಂಧಿ ಕುಟುಂಬದ ಅಗತ್ಯವಿದೆ" ಎಂದು ಹೇಳಿದ್ದರು.

ಜಿ-23 ಸದಸ್ಯರ ಒತ್ತಾಯವೇ ಬೇರೆ:
ಪಂಚರಾಜ್ಯ ಚುನಾವಣೆ ಫಲಿತಾಂಶಗಳು ಹೊರ ಬೀಳುತ್ತಿದ್ದಂತೆ ಕಾಂಗ್ರೆಸ್ ವಲಯದಲ್ಲಿ ರಾಜಕೀಯ ಬೆಳವಣಿಕೆಗಳು ಚುರುಕು ಪಡೆದುಕೊಳ್ಳುತ್ತಿವೆ. ಎಐಸಿಸಿಗೆ ಹೊಸ ಅಧ್ಯಕ್ಷರ ನೇಮಕ ಯಾವಾಗ ಎಂಬ ಪ್ರಶ್ನೆಗೆ ಮತ್ತೆ ಮುನ್ನಲೆಗೆ ಬಂದಿದೆ. ಐದು ರಾಜ್ಯಗಳಲ್ಲಿನ ಹೀನಾಯ ಸೋಲು ಕಾಂಗ್ರೆಸ್ ವಲಯದ ನಾಯಕರ ನಿದ್ದೆ ಕೆಡಿಸಿದೆ. ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ, ಪಂಜಾಬ್ ಮತ್ತು ಮಣಿಪುರದಲ್ಲಿ ಪಕ್ಷ ಎದುರಿಸಿದ ಮುಖಭಂಗದ ಹಿಂದಿನ ಕಾರಣವನ್ನು ಕಂಡುಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ತುರ್ತು ಎಐಸಿಸಿ ಸಭೆ ಕರೆಯುವಂತೆ ಜಿ-23 ಸದಸ್ಯರು ಒತ್ತಾಯಿಸುತ್ತಿದ್ದಾರೆ.
ಇದರ ಮಧ್ಯೆ ಕಾಂಗ್ರೆಸ್ ಸಂಸದ ಕಪಿಲ್ ಸಿಬಲ್ ಮತ್ತು ಮನೀಶ್ ತಿವಾರಿ ಶುಕ್ರವಾರ ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರ ನಿವಾಸದಲ್ಲಿ ಸಭೆ ನಡೆಸಿದರು. ಮೂಲಗಳ ಪ್ರಕಾರ, ಅವರು ಪಕ್ಷದ ಕಳಪೆ ಪ್ರದರ್ಶನ ಮತ್ತು ಭವಿಷ್ಯದ ಕಾರ್ಯತಂತ್ರದ ಬಗ್ಗೆ ಚರ್ಚಿಸಿದ್ದರು.












Click it and Unblock the Notifications