"ಕೃಷಿ ಕಾಯ್ದೆ ವಾಪಸ್ ಪಡೆಯಲು ಕೇಂದ್ರ ಸರ್ಕಾರಕ್ಕೆ ನವೆಂಬರ್ 26ರ ಟಾರ್ಗೆಟ್"
ನವದೆಹಲಿ, ನವೆಂಬರ್ 1: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ನವೆಂಬರ್ 26ರೊಳಗೆ ರದ್ದುಗೊಳಿಸುವಂತೆ ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ.
ದೆಹಲಿ-ಹರಿಯಾಣ-ಉತ್ತರ ಪ್ರದೇಶ ಮತ್ತು ಪಂಜಾಬಿನ ಮೂರು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಒಂದು ವರ್ಷ ಸಮೀಪಿಸುತ್ತಿರುವ ಹಿನ್ನೆಲೆ ರೈತ ಸಂಘಟನೆಗಳಿಂದ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ. ಕೃಷಿ ಕಾಯ್ದೆಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಗಡುವು ವಿಧಿಸಲಾಗಿದೆ.
ಕಳೆದ 2020ರ ನವೆಂಬರ್ 26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮುಂದುವರಿಸಿದ್ದಾರೆ.
|
ಟ್ರ್ಯಾಕ್ಟರ್ ಗಳಲ್ಲಿ ಗಡಿ ಪ್ರದೇಶಕ್ಕೆ ಆಗಮಿಸಲಿರುವ ರೈತರು
"ಕೇಂದ್ರ ಸರ್ಕಾರಕ್ಕೆ ನವೆಂಬರ್ 26ರವರೆಗೂ ಕಾಲಾವಕಾಶವಿದೆ. ಅದಾದ ಮರುದಿನವೇ ಅಂದರೆ ನವೆಂಬರ್ 27ರಂದು ರೈತರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲಿದ್ದಾರೆ. ದೇಶದ ಮೂಲೆ ಮೂಲಗಳಿಂದ ಟ್ರ್ಯಾಕ್ಟರ್ ಗಳಲ್ಲಿ ಪ್ರತಿಭಟನೆ ನಡೆಯುತ್ತಿರುವ ದೆಹಲಿಯ ಮೂರು ಗಡಿಗಳಿಗೆ ಆಗಮಿಸಲಿದ್ದಾರೆ. ಆ ಮೂಲಕ ರೈತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು," ಎಂದು ಕಿಸಾನ್ ಯೂನಿಯಸ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಎರಡನೇ ಬಾರಿ ಎಚ್ಚರಿಕೆ ಸಂದೇಶ ರವಾನಿಸಿದ ಟಿಕಾಯತ್
ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಕಳೆದ ಎರಡು ದಿನಗಳಲ್ಲಿ ಎರಡನೇ ಬಾರಿ ಎಚ್ಚರಿಕೆ ನೀಡಿದ್ದಾರೆ. ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬಲವಂತವಾಗಿ ಅಲ್ಲಿಂದ ತೆರವುಗೊಳಿಸುವುದಕ್ಕೆ ಪ್ರಯತ್ನಿಸಿದರೆ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ರೈತರನ್ನು ಗಡಿಯಿಂದ ಬಲವಂತವಾಗಿ ಹೊರಹಾಕುವ ಪ್ರಯತ್ನ ನಡೆದರೆ, ದೇಶಾದ್ಯಂತ ಇರುವ ಸರ್ಕಾರಿ ಕಚೇರಿಗಳನ್ನು ಗಲ್ಲಾ ಮಂಡಿ (ಧಾನ್ಯ ಮಾರುಕಟ್ಟೆ)ಯನ್ನಾಗಿ ಪರಿವರ್ತಿಸಲಾಗುತ್ತದೆ ಎಂದು ಟ್ವಿಟರ್ ಮಾಡಿದ್ದರು.

ರೈತರ ಟೆಂಟ್ ತೆರವುಗೊಳಿಸಲು ಯತ್ನಿಸಿದರೆ ಎಚ್ಚರ
ದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ಪ್ರತಿಭಟನಾನಿರತ ರೈತರ ಟೆಂಟ್ ಅನ್ನು ತೆರವುಗೊಳಿಸಲು ಪ್ರಯತ್ನಿಸುವಂತಿಲ್ಲ. ಅಧಿಕಾರಿಗಳು ಈ ಕಾರ್ಯಕ್ಕೆ ಮುಂದಾದರೆ ಪೊಲೀಸ್ ಠಾಣೆಗಳು ಮತ್ತು ಜಿಲ್ಲಾಧಿಕಾರಿ ಕಚೇರಿಗಳ ಬಳಿ ರೈತರು ಟೆಂಟ್ ಹಾಕಿಕೊಂಡು ಪ್ರತಿಭಟನೆ ನಡೆಸುತ್ತಾರೆ ಎಂದು ಎಚ್ಚರಿಸಲಾಗಿದೆ.

ಕೇಂದ್ರ ಸರ್ಕಾರದ ವಿವಾದಿತ ಕಾಯ್ದೆಗಳು ಯಾವುವು?
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳು ರೈತರ ಕಣ್ಣು ಕೆಂಪಾಗಿಸಿವೆ. ಈ ಕಾಯ್ದೆಗಳನ್ನು ರದ್ದುಗೊಳಿಸುವಂತೆ ರೈತರು ನಿರಂತರವಾಗಿ ಹೋರಾಟ, ಪ್ರತಿಭಟನೆ, ಟ್ರ್ಯಾಕ್ಟರ್ ರ್ಯಾಲಿಗಳನ್ನು ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಪ್ರತಿಭಟನಾ ನಿರತ ರೈತ ಸಂಘಟನೆಗಳ ಪ್ರತಿನಿಧಿಗಳ ನಡುವೆ ಈಗಾಗಲೇ 13ಕ್ಕೂ ಹೆಚ್ಚು ಸುತ್ತಿನ ಸಂಧಾನ ಮಾತುಕತೆಗಳನ್ನು ನಡೆಸಲಾಗಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಕ್ಕೆ ಸಾಧ್ಯವಿಲ್ಲ ಎಂಬ ನಿಲುವು ಪ್ರದರ್ಶಿಸುತ್ತಿದೆ. ಕೇಂದ್ರ ಸರ್ಕಾರದ ಮೊಂಡುತನದ ವಿರುದ್ಧ ರೈತರ ಹೋರಾಟವು ತೀವ್ರಗೊಳುತ್ತಿದೆ. ಇದೇ ನವೆಂಬರ್ 26ರಂದು ರೈತರ ಸುದೀರ್ಘ ಪ್ರತಿಭಟನೆ ಒಂದು ವರ್ಷ ಪೂರೈಸಲಿದೆ.












Click it and Unblock the Notifications