ಭಾರತದ ಪರಿಸ್ಥಿತಿಗೆ ಕಳವಳ ವ್ಯಕ್ತಪಡಿಸಿದ ವಿಶ್ವ ಆರೋಗ್ಯ ಸಂಸ್ಥೆ
ನವದೆಹಲಿ, ಏಪ್ರಿಲ್ 27: ಭಾರತದಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ನಿರೀಕ್ಷೆಗೂ ಮೀರಿ ಕೊರೊನಾ ಪ್ರಕರಣಗಳು ದಾಖಲಾಗುತ್ತಿದ್ದು, ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ದೇಶದಲ್ಲಿ ಏರುತ್ತಿರುವ ಕೊರೊನಾ ಪ್ರಕರಣಗಳು ಹಾಗೂ ಮರಣ ಪ್ರಮಾಣದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರು ಮಾತನಾಡಿದ್ದು, ಈ ಬಿಕ್ಕಟ್ಟಿಗೆ ಎಲ್ಲ ರೀತಿಯಿಂದಲೂ ನೆರವಾಗುವುದಾಗಿ ಭರವಸೆ ನೀಡಿದ್ದಾರೆ.
"ಭಾರತದಲ್ಲಿನ ಈ ಪರಿಸ್ಥಿತಿ ಚಿಂತಾಜನಕವಾಗಿದೆ" ಎಂದು ಡಬ್ಲು ಎಚ್ಒ ಮುಖ್ಯಸ್ಥ ಟಡ್ರೋಸ್ ಅದನಾಮ್ ಗೆಬ್ರಿಯೇಸುಸ್ ಹೇಳಿದ್ದಾರೆ.
ದೇಶದಲ್ಲಿ ಕೊರೊನಾ ಪ್ರಕರಣಗಳು ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮೀರಿ ಏರಿಕೆಯಾಗುತ್ತಿವೆ. ಆಸ್ಪತ್ರೆಗಳು, ಚಿತಾಗಾರಗಳು ಕೊರೊನಾ ಸೋಂಕಿತರಿಂದ ತುಂಬಿ ತುಳುಕುತ್ತಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದ್ದಾರೆ.
ದೇಶದಲ್ಲಿ ಕೆಲವು ದಿನಗಳಿಂದ ಕೊರೊನಾ ಪ್ರಕರಣಗಳಲ್ಲಿ ಭಾರೀ ಏರಿಕೆಯಾಗಿದೆ. ಕೊರೊನಾ ರೋಗಿಗಳ ಕುಟುಂಬಸ್ಥರು ಆಮ್ಲಜನಕ ಪೂರೈಕೆಗೆ ಹಾಗೂ ಆಸ್ಪತ್ರೆಯ ಹಾಸಿಗೆಗಳಿಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬೇಡಿಕೊಳ್ಳುವ ಪರಿಸ್ಥಿತಿ ಸೃಷ್ಟಿಯಾಗಿದೆ.
ಅಮೆರಿಕದಿಂದ ಕೋವಿಶೀಲ್ಡ್ ಲಸಿಕೆಗಾಗಿ ಭಾರತಕ್ಕೆ ಕಚ್ಚಾವಸ್ತುಗಳ ಪೂರೈಕೆ
"ವಿಶ್ವ ಆರೋಗ್ಯ ಸಂಸ್ಥೆ ಈ ಬಿಕ್ಕಟ್ಟು ನಿವಾರಣೆಗೆ ಏನು ನೆರವು ಬೇಕೋ ಎಲ್ಲವನ್ನೂ ನೀಡುತ್ತಿದೆ. ಅವಶ್ಯ ಸಾಧನಗಳನ್ನು ಪೂರೈಸುತ್ತಿದೆ" ಎಂದು ಟೆಡ್ರೋಸ್ ಹೇಳಿದ್ದಾರೆ.
ಸಾವಿರಗಟ್ಟಲೆ ಆಮ್ಲಜನಕ ಸಾಂದ್ರತೆಗಳನ್ನು ಹಾಗೂ ಇನ್ನಿತರೆ ಆಸ್ಪತ್ರೆ ಸಾಧನಗಳನ್ನು ಅಮೆರಿಕ ಆರೋಗ್ಯ ಸಂಸ್ಥೆ ಭಾರತಕ್ಕೆ ಕಳುಹಿಸಿಕೊಡುತ್ತಿವೆ. ತಮ್ಮ ಹಲವು ಆರೋಗ್ಯ ಕಾರ್ಯಕ್ರಮಗಳಗೆ ನಿಯೋಜಿಸಲಾದ 2600 ತಜ್ಞರು ಭಾರತಕ್ಕೆ ನೆರವಾಗುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ವಿಶ್ವದ ಕೊರೊನಾ ಪ್ರಮಾಣದಲ್ಲಿ ಒಂಬತ್ತು ವಾರಗಳ ಹಿಂದೆ ಭಾರತ ನಾಲ್ಕನೇ ಸ್ಥಾನದಲ್ಲಿತ್ತು. ಆದರೆ ಈಗ ಎಲ್ಲ ದೇಶಗಳನ್ನು ಹಿಂದಿಕ್ಕಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ.
ಭಾರತದಲ್ಲಿ ಸೋಮವಾರ 3,52,991 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಒಂದೇ ದಿನ 2812 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 2,19,272 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.