Breaking: ಭಾರತದ ಕೋವಿಡ್ ಪ್ರಕರಣಗಳಲ್ಲಿ ಶೇ.41ರಷ್ಟು ಏರಿಕೆ
ನವದೆಹಲಿ, ಜೂನ್ 8: ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹೊಸ ಅಲೆ ಸೃಷ್ಟಿಯಾಗುತ್ತಿದೆಯಾ ಎಂಬ ಆತಂಕ ಹುಟ್ಟಿಕೊಳ್ಳುತ್ತಿದೆ. ಮೂರು ತಿಂಗಳ ನಂತರದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಶೇ.41ರಷ್ಟು ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 5233 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 7ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 3,345 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,190,282ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 42,636,710 ಸೋಂಕಿತರು ಗುಣಮುಖರಾಗಿದ್ದು, 524,715 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 28,857ಕ್ಕೆ ಏರಿಕೆಯಾಗಿದೆ.

ಮಾಹಾರಾಷ್ಟ್ರದಲ್ಲಿ ಹೆಚ್ಚಿದ ಮಹಾಮಾರಿ ಹಾವಳಿ
ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಆರಂಭದಿಂದಲೂ ಮಹಾರಾಷ್ಟ್ರವನ್ನು ಬೆನ್ನು ಬಿಡದ ಭೂತದಂತೆ ಕಾಡುತ್ತಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರವೊಂದರಲ್ಲೇ 1881 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಇದು ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿನ ಶೇ.81ರಷ್ಟು ಹೆಚ್ಚಳವನ್ನು ಸೂಚಿಸುತ್ತದೆ. ಅಲ್ಲದೇ ಫೆಬ್ರವರಿ 18ರ ನಂತರದಲ್ಲಿ ವರದಿಯಾದ ಅತಿಹೆಚ್ಚು ಪ್ರಕರಣಗಳ ಸಂಖ್ಯೆ ಇದಾಗಿದೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಹೊಸ ಅಲೆಯನ್ನು ಸೃಷ್ಟಿಸುತ್ತಿದೆಯಾ ಕೊರೊನಾ ವೈರಸ್ ಎನ್ನುವ ಅನುಮಾನಗಳು ಹುಟ್ಟಿಕೊಳ್ಳುತ್ತಿವೆ.

ಮುಂಬೈನಲ್ಲಿ B.A.5 ರೂಪಾಂತರ ತಳಿ ವರದಿ
ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಕೊರೊನಾ ವೈರಸ್ ಸೋಂಕಿನ ಓಮಿಕ್ರಾನ್ ರೂಪಾಂತರದ B.A.5 ತಳಿಯ ಪ್ರಕರಣ ವರದಿಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ 1,242 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಖಾತ್ರಿಯಾಗಿದೆ. ಈ ಮಟ್ಟದಲ್ಲಿ ಕೊಂಚ ನೆಮ್ಮದಿ ಕೊಡುವ ವಿಚಾರ ಎಂದರೆ ಮಂಗಳವಾರ ಕೊರೊನಾ ವೈರಸ್ ಸೋಂಕಿನಿಂದ ಯಾವುದೇ ಸಾವಿನ ಪ್ರಕರಣಗಳು ವರದಿಯಾಗಿಲ್ಲ.

ಕೋವಿಡ್-19 ಸೋಂಕಿನಿಂದ ಆಸ್ಪತ್ರೆ ಸೇರಿದವರ ಸಂಖ್ಯೆ ಎಷ್ಟಿದೆ?
ಮಹಾರಾಷ್ಟ್ರದಲ್ಲಿ ಮತ್ತು ಮುಂಬೈನಲ್ಲಿ ಕೊರೊನಾ ವೈರಸ್ ಸೋಂಕಿನ ಸಂಖ್ಯೆ ಏರಿಕೆಯಾಗಿದ್ದರೂ, ಅದರಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಆಗಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಸ್ಪಷ್ಟಪಡಿಸಿದ್ದಾರೆ. ಸರ್ಕಾರದ ಅಂಕಿ-ಅಂಗಳ ಪ್ರಕಾರ, ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಪೈಕಿ ಶೇ.1ರಷ್ಟು ರೋಗಿಗಳಷ್ಟೇ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಆದ್ದರಿಂದ ಸೋಂಕು ಹೆಚ್ಚು ಅಪಾಯವನ್ನು ಹುಟ್ಟು ಹಾಕುವುದಿಲ್ಲ, ಈ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಕಿಲ್ಲ. ಮುಂಬೈನಲ್ಲಿರುವ 24,579 ಹಾಸಿಗೆಗಳಲ್ಲಿ ಸೋಮವಾರ ಶೇ. 0.74ರಷ್ಟು ಮಾತ್ರ ಭರ್ತಿಯಾಗಿವೆ. 4,768 ಆಕ್ಸಿಜನ್ ಹಾಸಿಗೆಗಳಲ್ಲಿ ಶೇ.0.29% ಮಾತ್ರ ತುಂಬಿವೆ. ಮುಂಬೈನಲ್ಲಿ ಸೋಮವಾರ 676 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದೆ. ಕಳೆದ ಏಳು ದಿನಗಳಲ್ಲಿ, ಥಾಣೆಯಲ್ಲಿ ಶೇ.17.17, ಪುಣೆಯಲ್ಲಿ ಶೇ7.42, ರಾಯಗಡ ಶೇ.3.36 ಮತ್ತು ಪಾಲ್ಘರ್ ಶೇ.2 ನಂತರ ರಾಜ್ಯದಲ್ಲಿ ದಾಖಲಾದ ಒಟ್ಟು ಪ್ರಕರಣಗಳಲ್ಲಿ ಮುಂಬೈ ಶೇ.67.28 ರಷ್ಟಿವೆ.

ಕರುನಾಡಿನಲ್ಲೂ ಹರಡುತ್ತಿರುವ ಕೋವಿಡ್-19 ಮಹಾಮಾರಿ
ಕರ್ನಾಟಕದಲ್ಲಿ ಕಡಿಮೆ ಆಯಿತು ಕೊರೊನಾ ವೈರಸ್ ಎನ್ನುವಷ್ಟರಲ್ಲೇ ಲೆಕ್ಕಾಚಾರಗಳು ಉಲ್ಟಾ ಹೊಡೆಯುತ್ತಿವೆ. ಕಳೆದ 24 ಗಂಟೆಗಳಲ್ಲೇ 348 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 311 ಸೋಂಕಿತರು ಗುಣಮುಖರಾಗಿದ್ದಾರೆ. ಮಂಗಳವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 3953937 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 3911351 ಸೋಂಕಿತರು ಗುಣಮುಖರಾಗಿದ್ದು, 40,066 ಜನರು ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರ ಹೊತರಾಗಿ ರಾಜ್ಯದಲ್ಲಿ 2478 ಸಕ್ರಿಯ ಪ್ರಕರಣಗಳಿವೆ.












Click it and Unblock the Notifications