ಮಾನಹಾನಿ ಪ್ರಕರಣ: ರಾಹುಲ್ ಗಾಂಧಿ ವಿರುದ್ಧ ಆರೋಪ ನಿಗದಿ
ಮುಂಬೈ, ಜೂನ್ 12: ಮಾನಹಾನಿ ಆರೋಪ ಪ್ರಕರಣ ಎದುರಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಮಹಾರಾಷ್ಟ್ರದ ಭಿವಾಂಡಿಯ ಆರೋಪ ನಿಗದಿಪಡಿಸಿದೆ. ಆದರೆ ತಾವು ತಪ್ಪು ಎಸಗಿಲ್ಲ ಎಂದು ರಾಹುಲ್ ಗಾಂಧಿ ವಾದಿಸಿದ್ದಾರೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ಮತ್ತು 500ರ ಅಡಿ ರಾಹುಲ್ ಗಾಂಧಿ ಅವರ ವಿರುದ್ಧ ಮಂಗಳವಾರ ಆರೋಪ ನಿಗದಿಪಡಿಸಲಾಗಿದೆ.
ನ್ಯಾಯಾಧೀಶ ಅಲ್ ಶೇಖ್ ಅವರು 'ನೀವು ತಪ್ಪು ಮಾಡಿದ್ದಾಗಿ ಒಪ್ಪಿಕೊಳ್ಳುತ್ತೀರಾ?' ಎಂದು ಪ್ರಶ್ನಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ರಾಹುಲ್, 'ನಾನು ತಪ್ಪು ಒಪ್ಪಿಕೊಳ್ಳುವುದಿಲ್ಲ' ಎಂದು ಹೇಳಿದರು.
ಮುಂದಿನ ವಿಚಾರಣೆಯನ್ನು ಕೋರ್ಟ್ ಆಗಸ್ಟ್ 10ಕ್ಕೆ ಮುಂದೂಡಿದೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಇದು ಸಿದ್ಧಾಂತಕ್ಕಾಗಿ ನಡೆಯುತ್ತಿರುವ ಹೋರಾಟ. ಇದರಲ್ಲಿ ನಾವು ಗೆಲುವು ಸಾಧಿಸುತ್ತೇವೆ ಎಂದರು.
ನಾನು ಆಡಿದ ಪ್ರತಿ ಪದವನ್ನೂ ಸಮರ್ಥಿಸಿಕೊಳ್ಳುತ್ತೇನೆ. ನನ್ನ ಮಾತುಗಳನ್ನು ಹಿಂದಕ್ಕೆ ತೆಗೆದುಕೊಳ್ಳುವುದಿಲ್ಲ. ನಾನು ವಿಚಾರಣೆ ಎದುರಿಸಲು ಸಿದ್ಧ ಎಂದು ರಾಹುಲ್ ಹೇಳಿದರು.
ಮಹಾತ್ಮ ಗಾಂಧಿ ಅವರ ಹತ್ಯೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೈವಾಡ ಇದೆ ಎಂದು ರಾಹುಲ್ ಗಾಂಧಿ 2014ರ ಚುನಾವಣಾ ಪ್ರಚಾರದ ವೇಳೆ ಆರೋಪಿಸಿದ್ದರು. ಇದರ ವಿರುದ್ಧ ಆರೆಸ್ಸೆಸ್ ಕಾರ್ಯಕರ್ತ ರಾಜೇಶ್ ಕುಂಟೆ ಎಂಬುವವರು ಮಾನನಷ್ಟ ಪ್ರಕರಣ ದಾಖಲಿಸಿದ್ದರು.
ಪ್ರಕರಣದ ವಿರುದ್ಧ ತಾವು ಸಲ್ಲಿಸಿದ್ದ ಅರ್ಜಿಯನ್ನು 2016ರ ಸೆಪ್ಟೆಂಬರ್ನಲ್ಲಿ ಹಿಂದಕ್ಕೆ ಪಡೆದುಕೊಂಡಿದ್ದ ರಾಹುಲ್ ಗಾಂಧಿ, ತಾವು ವಿಚಾರಣೆ ಎದುರಿಸುವುದಾಗಿ ಹೇಳಿದ್ದರು.
ರಾಹುಲ್ ಅವರಿಗೆ ನ್ಯಾಯಾಲಯದಿಂದ ಖುದ್ದು ಹಾಝರಾತಿಗೆ ವಿನಾಯಿತಿ ಕೋರಿ ರಾಹುಲ್ ಗಾಂಧಿ ಅವರ ವಕೀಲರು ಏಪ್ರಿಲ್ 23ರಂದು ಮನವಿ ಮಾಡಿದ್ದರು. ಆದರೆ ಅದನ್ನು ನ್ಯಾಯಾಲಯ ತಿರಸ್ಕರಿಸಿತ್ತು.












Click it and Unblock the Notifications