ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ: ಕೇಂದ್ರ ಸಚಿವ
ನವದೆಹಲಿ, ಡಿಸೆಂಬರ್, 21: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯಲ್ಲಿ ಕೋವಿಡ್ ನಿಯಮ ಪಾಲಿಸದಿದ್ದರೆ, ಯಾತ್ರೆಯನ್ನು ತಡೆಯಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಡಾ ಮನ್ಸುಖ್ ಮಾಂಡವಿಯಾ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ಕೆಂಡಾಮಂಡಲವಾಗಿದ್ದಾರೆ. ಭಾರತ್ ಜೋಡೊ ಯಾತ್ರೆಗೆ ಸಿಗುತ್ತಿರುವ ಜನಬೆಂಬಲವು ಬಿಜೆಪಿಯನ್ನು ಆತಂಕಕ್ಕೆ ತಳ್ಳಿದೆ. ಆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಯಾತ್ರೆಯನ್ನು ತಡೆಯುವ ಬಗ್ಗೆ ಚಿಂತನೆ ನಡೆಸಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಮನ್ಸುಖ್ ಮಾಂಡವಿಯಾ, 'ದೇಶದಲ್ಲಿ ಕೋವಿಡ್ ಹರಡದಂತೆ ನೋಡಿಕೊಳ್ಳುವುದು ನನ್ನ ಕರ್ತವ್ಯ. ಓರ್ವ ಸಚಿವನಾಗಿ ಅವರನ್ನು(ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ) ಹೇಗೆ ಪ್ರಶ್ನಿಸಬಹುದು ಎಂದು ಯಾರಾದರೂ ಭಾವಿಸಿದರೆ, ಅವರ ಮನಸ್ಥಿತಿಗೆ ನಾವು ಏನು ಮಾಡಬಹುದು? ಈ ಬಗ್ಗೆ ನನ್ನನ್ನು ಪ್ರಶ್ನಿಸುವುದು ನನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿದಂತೆ' ಎಂದು ಮಾಂಡವಿಯಾ ಹೇಳಿದ್ದಾರೆ.
'ರಾಜಸ್ಥಾನದಲ್ಲಿ ಕೋವಿಡ್ ಹರಡುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು, ನಾನು ತಜ್ಞರ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದೇನೆ. ಭಾರತ್ ಜೋಡೊ ಯಾತ್ರೆಯಲ್ಲಿ ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಬೇಕು ಎಂದು ರಾಹುಲ್ ಗಾಂಧಿಗೆ ಪತ್ರ ಬರೆದಿದ್ದೇನೆ' ಎಂದೂ ಮಾಂಡವಿಯಾ ತಿಳಿಸಿದ್ದಾರೆ.

'ಕಾಂಗ್ರೆಸ್ನ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸಿದವರಿಗೆ ಕೋವಿಡ್ 19 ಪಾಸಿಟಿವ್ ಪತ್ತೆಯಾಗಿದೆ. ಈ ಯಾತ್ರೆಯಲ್ಲಿ ಪಾಲ್ಗೊಂಡ ನಂತರ ಹಿಮಾಚಲ ಪ್ರದೇಶ ಸಿಎಂ ಕೂಡ ಪಾಸಿಟಿವ್ ಆಗಿದೆ' ಎಂದು ಅವರು ಹೇಳಿದ್ದಾರೆ.
ಕೋವಿಡ್ ಇನ್ನೂ ಮುಗಿದಿಲ್ಲ. ನಾನು ಸಂಬಂಧಪಟ್ಟ ಎಲ್ಲರಿಗೂ ಜಾಗರೂಕರಾಗಿರಬೇಕು ಎಂದು ಸೂಚಿಸಿದ್ದೇನೆ. ಕೋವಿಡ್ ಬೂಸ್ಟರ್ ಲಸಿಕೆಯನ್ನು ತೆಗೆದುಕೊಳ್ಳುವಂತೆ ನಾನು ಜನರನ್ನು ಒತ್ತಾಯಿಸುತ್ತೇನೆ ಎಂದೂ ಮಾಂಡವೀಯ ತಿಳಿಸಿದ್ದಾರೆ.
ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಚಳಿಗಾಲದಲ್ಲಿ ಮೂರು ಕೋವಿಡ್ ಅಲೆಗಳು ಬರಬಹುದು ಎಂದು ತಜ್ಞರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವರು ತಜ್ಞರು, ಆರೋಗ್ಯ ಇಲಾಖೆಯ ಮುಖ್ಯಸ್ಥರು, ನೀತಿ ಆಯೋಗದ ಸದಸ್ಯರ ಜೊತೆ ಪರಿಶೀಲನಾ ಸಭೆ ನಡೆಸಿದ್ದಾರೆ.

ಆ ಬಳಿಕ ಮಾತನಾಡಿದ ನೀತಿ ಆಯೋಗದ(ಆರೋಗ್ಯ) ಸದಸ್ಯ ಡಾ.ವಿ.ಕೆ.ಪೌಲ್, ಮಾಸ್ಕ್ ಧರಿಸಲು ಹಾಗೂ ಕೋವಿಡ್ ಬುಸ್ಟರ್ ಡೋಸ್ ತೆಗೆದುಕೊಳ್ಳಲು ಜನರಿಗೆ ಸಲಹೆ ನೀಡಿದ್ದಾರೆ.
ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆಯು ಪ್ರಸ್ತುತ ರಾಜಸ್ಥಾನದಲ್ಲಿದೆ. ತಮಿಳು ನಾಡಿನ ಕನ್ಯಾಕುಮಾರಿಯಿಂದ ಆರಂಭವಾಗಿರುವ ಯಾತ್ರೆಯು ನೂರು ದಿನಗಳನ್ನು ಪೂರೈಸಿದೆ. ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಕೊನೆಗೊಳ್ಳುವ ಯಾತ್ರೆಯು ಡಿಸೆಂಬರ್ 24ರಂದು ದೆಹಲಿ ಪ್ರವೇಶಿಸಲಿದೆ.












Click it and Unblock the Notifications