Breaking; ಪುಲ್ವಾಮಾ ಉಗ್ರರ ದಾಳಿ, ಸಿಆರ್ಪಿಎಫ್ ಅಧಿಕಾರಿ ಹುತಾತ್ಮ
ಪುಲ್ವಾಮಾ, ಜುಲೈ 17: ಭಾನುವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಕಳೆದ ಒಂದು ವಾರದಲ್ಲಿ ಭದ್ರತಾ ಪಡೆಗಳ ಮೇಲೆ ನಡೆದ ಎರಡನೇ ದೊಡ್ಡ ದಾಳಿ ಇದಾಗಿದೆ.
ಸಮೀಪದ ಹಣ್ಣಿನ ತೋಟದಿಂದ ಪುಲ್ವಾಮಾದ ಗಂಗೂ ಕ್ರಾಸಿಂಗ್ ಚೆಕ್ ಪೋಸ್ಟ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ CRPF ಸಹಾಯಕ ಸಬ್ ಇನ್ಸ್ಪೆಕ್ಟರ್ ವಿನೋದ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿಯಲ್ಲಿ ಗಾಯಗೊಂಡಿದ್ದ ಸಹಾಯಕ ಸಬ್ ಇನ್ಸ್ಪೆಕ್ಟರ್ ವಿನೋದ್ ಕುಮಾರ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಡೀ ಪ್ರದೇಶವನ್ನು ಸುತ್ತುವರೆಯಲಾಗಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ, ಶ್ರೀನಗರದ ಲಾಲ್ ಬಜಾರ್ ಪ್ರದೇಶದಲ್ಲಿನ ಪೊಲೀಸ್ ಚೆಕ್ ಪಾಯಿಂಟ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ನ ಸಹಾಯಕ ಸಬ್ ಇನ್ಸ್ಪೆಕ್ಟರ್ ಮುಷ್ತಾಕ್ ಅಹ್ಮದ್ ಮೃರುತಪಟ್ಟಿದ್ದರು. ಜೊತೆಗೆ ಇಬ್ಬರು ಪೊಲೀಸರು ಗಾಯಗೊಂಡಿದ್ದರು.
ಐಸಿಸ್ ಪ್ರಚಾರ ಅಂಗವಾದ ಅಮಾಕ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ದಾಳಿಕೋರರು ಧರಿಸಿರುವ ಬಾಡಿಕ್ಯಾಮ್ಗಳಿಂದ ಚಿತ್ರೀಕರಿಸಲಾದ ವೀಡಿಯೊವನ್ನು ಸಹ ಬಿಡುಗಡೆ ಮಾಡಿದ್ದು, ಮತ್ತಷ್ಟು ದಾಳಿಯನ್ನು ನಡೆಸುವ ಬೆದರಿಕೆ ಹಾಕಿದ್ದಾರೆ.
ಅಮರನಾಥ ಯಾತ್ರೆ ನಡೆಯುತ್ತಿರುವ ಮಧ್ಯೆ ಭದ್ರತಾ ಸಿಬ್ಬಂದಿ ಕಟ್ಟೆಚ್ಚರ ವಹಿಸಿರುವ ಈ ಸಂದರ್ಭದಲ್ಲಿ ದಾಳಿ ನಡೆದಿದೆ. ಕಣಿವೆಯಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಬೃಹತ್ ಭದ್ರತಾ ಸಿಬ್ಬಂದಿ ಜೊತೆಗೆ, ಈ ವರ್ಷ ಯಾತ್ರೆಯ ಭದ್ರತೆಗಾಗಿ ಸಾವಿರಾರು ಹೆಚ್ಚುವರಿ ಸೈನಿಕರನ್ನು ನಿಯೋಜಿಸಲಾಗಿದೆ.