ಸಿ.ಟಿ ರವಿಗೆ ಮಹತ್ವದ ಜವಾಬ್ದಾರಿ ನೀಡಿದ ಬಿಜೆಪಿ ಹೈಕಮಾಂಡ್
ನವದೆಹಲಿ, ಅ. 7: ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯಕ್ಕೆ ಕರ್ನಾಟಕ ಮೂಲದ ಉಸ್ತುವಾರಿಯೊಬ್ಬರನ್ನು ಭಾರತೀಯ ಜನತಾ ಪಕ್ಷ(ಬಿಜೆಪಿ) ನೇಮಿಸಿದೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಇತ್ತೀಚೆಗೆ ನೇಮಕಗೊಂಡಿದ್ದ ಮಾಜಿ ಸಚಿವ ಸಿ.ಟಿ ರವಿ ಅವರಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ಸಿಕ್ಕಿದೆ.
ಕರ್ನಾಟಕ ಸೇರಿದಂತೆ ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ರಾಜ್ಯಗಳ ಬಿಜೆಪಿ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ. ದಕ್ಷಿಣ ಭಾರತದ ಬಿಜೆಪಿ ಉಸ್ತುವಾರಿಯಾಗಿ ಸಿ.ಟಿ ರವಿ ಕಾರ್ಯ ನಿರ್ವಹಿಸಬೇಕಿದ್ದು, ಈ ಬಗ್ಗೆ ಅಧಿಕೃತ ಪ್ರಕಟಣೆ ಅಕ್ಟೋಬರ್ 7ರ ಸಂಜೆ ಹೊರಡಿಸಲಾಗುತ್ತದೆ.
ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ರಾಜೀನಾಮೆ
ಈಗಾಗಲೇ ತಮಿಳುನಾಡಿನ ಉಸ್ತುವಾರಿಯಾಗಿ ಒಮ್ಮೆ ಕಾರ್ಯ ನಿರ್ವಹಿಸಿದ್ದ ಚಿಕ್ಕಮಗಳೂರಿನ ಶಾಸಕ ಸಿಟಿ ರವಿ ಅವರು ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಪ್ರವಾಸೋದ್ಯಮ ಸಚಿವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅಕ್ಟೋಬರ್ 2ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಷ್ಟೀಯ ನಾಯಕರ ಅಣತಿಯಂತೆ ಪ್ರಧಾನ ಕಾರ್ಯದರ್ಶಿ ಹುದ್ದೆ ಸ್ವೀಕರಿಸಿದ್ದರು. ಆದರೆ, ಕರ್ನಾಟಕ ತೊರೆದು ರಾಷ್ಟ್ರ ರಾಜಕೀಯಕ್ಕೆ ಹೋಗಲಾರೆ ಎಂದು ಘೋಷಿಸಿದ್ದರು.
Recommended Video
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಬಿಜೆಪಿ ಉಸ್ತುವಾರಿಗಳ ಹೊಸ ಪಟ್ಟಿ ಸಿದ್ಧಪಡಿಸಲಾಗಿದೆ. ಬಿಹಾರ ವಿಧಾನಸಭೆ ಚುನಾವಣೆ, ತಮಿಳುನಾಡಿನಲ್ಲಿ ಮುಂದಿನ ವರ್ಷದ ವಿಧಾನಸಭೆ ಚುನಾವಣೆ, ಹಲವು ರಾಜ್ಯಗಳಲ್ಲಿನ ಉಪ ಚುನಾವಣೆಯ ದೃಷ್ಟಿಯಿಂದ ಹೊಸ ಉಸ್ತುವಾರಿಗಳನ್ನು ನೇಮಿಸಲಾಗಿದ್ದು, ಚುನಾವಣೆ ಬಳಿಕ ಉಸ್ತುವಾರಿಗಳು ಬದಲಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎಂದು ತಿಳಿದು ಬಂದಿದೆ.