Cyclone Remal: ರೆಮಲ್ ಅಬ್ಬರಕ್ಕೆ ನಾಲ್ವರು ಬಲಿ; 29,500 ಮನೆಗಳಿಗೆ ಹಾನಿ
ಭಾನುವಾರ ರಾತ್ರಿ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಕರಾವಳಿಯ ನಡುವೆ ಅಪ್ಪಳಿಸಿದ ಚಂಡಮಾರುತ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಚಂಡಮಾರುತದ ಪರಿಣಾಮ ಪಶ್ಚಿಮ ಬಂಗಾಳದಲ್ಲಿ ಇದುವರೆಗೂ 4 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಚಂಡಮಾರುತದ ಪರಿಣಾಮ ಸುಮಾರು 29,500 ಮನೆಗಳು ಹಾನಿಗೊಳಗಾಗಿವೆ ಮತ್ತು 207,060 ಜನರನ್ನು ರಕ್ಷಣಾ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

ರಾಜ್ಯಾದ್ಯಂತ ನೂರಾರು ಮರಗಳು ಉರುಳಿಬಿದ್ದಿದ್ದು, ಆಸ್ತಿಪಾಸ್ತಿಗಳನ್ನು ಹಾನಿಗೊಳಿಸಿದ್ದು, ಪೊಲೀಸರು ಮತ್ತು ಎನ್ಡಿಆರ್ಎಫ್ ಇನ್ನೂ ತೆರವುಗೊಳಿಸುತ್ತಿದ್ದಾರೆ. ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಧ್ಯಾಹ್ನ ಸ್ಥಗಿತಗೊಂಡ ನಂತರ ವಿಮಾನ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗಿದೆ.
ಕೋಲ್ಕತ್ತಾದಲ್ಲಿ ಗೋಡೆ ಕುಸಿತದಿಂದ ಒಬ್ಬರು ಮತ್ತು ದಕ್ಷಿಣ 24 ಪರಗಣಗಳಲ್ಲಿ ಮರ ಬಿದ್ದ ಕಾರಣ ಒಬ್ಬರು ಸಾವನ್ನಪ್ಪಿದರೆ, ಪುರ್ಬಾ ಬರ್ಧಮಾನ್ನಲ್ಲಿ ಇಬ್ಬರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ. ಕ್ಯಾನಿಂಗ್ನಲ್ಲಿ ಮರ ಬಿದ್ದ ಕಾರಣ ಗಾಯಗೊಂಡ ಒಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪರಿಸ್ಥಿತಿಯನ್ನು ಅವಲೋಕಿಸಿದ್ದು, ಚಂಡಮಾರುತದಿಂದ ರಾಜ್ಯಕ್ಕೆ ತೀವ್ರ ಹಾನಿಯಾಗಿದೆ ಎಂದು ಹೇಳಿದರು. ಚುನಾವಣಾ ಮಾದರಿ ನೀತಿ ಸಂಹಿತೆ ಮುಗಿದ ನಂತರ ತಕ್ಷಣದ ಆರ್ಥಿಕ ನೆರವು ಮತ್ತು ಹಾನಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.
ಹಾನಿಯ ಬಗ್ಗೆ ಮಮತಾ ಬ್ಯಾನರ್ಜಿ ಮಾಹಿತಿ
ಸೋಮವಾರ ಚಂಡಮಾರುತದ ಪರಿಸ್ಥಿತಿಯನ್ನು ಅವಲೋಕಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರೆಮಾಲ್ನಿಂದ ಸಾಕಷ್ಟು ಹಾನಿಯಾಗಿದೆ ಎಂದು ಹೇಳಿದ್ದಾರೆ. ಸರ್ಕಾರವು ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಮೃತರ ಕುಟುಂಬಗಳಿಗೆ ತಕ್ಷಣ ಆರ್ಥಿಕ ನೆರವು ನೀಡಲಾಗುವುದು ಮತ್ತು ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಬೆಳೆ ಮತ್ತು ಮನೆ ಹಾನಿಗೆ ಪರಿಹಾರವನ್ನು ವಿತರಿಸಲಾಗುವುದು ಎಂದು ಅವರು ಹೇಳಿದರು.
ಅಸ್ಸಾಂನ ಏಳು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವ ರೆಡ್ ಅಲರ್ಟ್ ಮತ್ತು 11 ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಸೋಮವಾರ ಮತ್ತು ಮಂಗಳವಾರದಂದು ಅಸ್ಸಾಂ ಮತ್ತು ಇತರ ಈಶಾನ್ಯ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ರೆಮಲ್ ಚಂಡಮಾರುತದ ಪ್ರತಿಕ್ರಿಯೆ ಮತ್ತು ಸಿದ್ಧತೆಗಳನ್ನು ಪರಿಶೀಲಿಸಲು ಸಭೆ ನಡೆಸಿದರು. ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿಯು ಬಂಗಾಳ ರಾಜ್ಯ ಸರ್ಕಾರದೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದೆ ಎಂದು ಅವರು ವಿವರಿಸಿದರು.












Click it and Unblock the Notifications