ಯಾಸ್ ಚಂಡಮಾರುತ: ಹಿರಿಯ ಅಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಭೆ
ನವದೆಹಲಿ, ಮೇ 23: ತೌಕ್ತೆ ಅಬ್ಬರದ ನಂತರ ಭಾರತಕ್ಕೆ ಯಾಸ್ ಚಂಡಮಾರುತ ಸಾಕಷ್ಟು ಆತಂಕವನ್ನು ಸೃಷ್ಟಿಸಿದೆ. ಈ ಹಿನ್ನಲೆಯಲ್ಲಿ ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಹಿರಿಯ ಅಧಿಕಾರಿಗಳ ಜೊತೆಗೆ ಸಭೆಯನ್ನು ಕರೆದಿದ್ದಾರೆ. ಯಾಸ್ ಚಂಡಮಾರುತವನ್ನು ಎದುರಿಸಲು ನಡೆಸಿರುವ ಸಿದ್ಧತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಪ್ರಧಾನಿ ಚರ್ಚಿಸಲಿದ್ದಾರೆ.
"ಇಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಿರಿಯ ಅಧಿಕಾರಿಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಟೆಲಿಕಾಂ, ಪವರ್, ನಾಗರೀಕ ವಿಮಾನಯಾನ, ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಯಾಸ್ ಚಂಡಮಾರುತ ಎದುರಿಸಲು ನಡೆಸಿರುವ ಸಿದ್ಧತೆಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ" ಎಂದು ಎಎನ್ಐ ಟ್ವೀಟ್ ಮಾಡಿದೆ.
ಈ ಸಭೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಮಿಶ್ರಾ ಹಾಗೂ ಇತರ ಸಚಿವರು ಕೂಡ ಭಾಗಿಯಾಗುವ ಸಾಧ್ಯತೆಯಿದೆ. ಈ ಮಧ್ಯೆ ಪಶ್ಚಿಮ ಬಂಗಾಳ ಹಾಗೂ ಒಡಿಶಾ ಸರ್ಕಾರಗಳು ಯಾಸ್ ಚಂಡಮಾರುತ ಎದುರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಮೇಲೆ ಯಾಸ್ ಚಂಡಮಾರುತ ನೇರ ಪ್ರಭಾವ ಬೀರುವ ಸಾಧ್ಯತೆ ಹೆಚ್ಚಾಗಿದೆ. ಭಾರತೀಯ ಸೇನೆ ಕೂಡ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಸಿದ್ಧತೆಗಳನ್ನು ಮಾಡಿಕೊಂಡಿರುವುದಾಗಿ ಶನಿವಾರ ತಿಳಿಸಿತ್ತು.
ಯಾಸ್ ಚಂಡಮಾರುತ ಮೇ 24 ರಿಂದ 26ರ ಮಧ್ಯೆ ಬಂಗಾಳ ಮತ್ತು ಒಡಿಶಾ ಕರಾವಳಿಯ ಭೂಭಾಗವನ್ನು ಅಪ್ಪಳಿಸುವ ಸಾಧ್ಯತೆಯಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಭಾಗದಲ್ಲಿ ಸಂಚರಿಸುವ ಹಲವಾರು ರೈಲುಗಳನ್ನು ಈಗಾಗಲೇ ರದ್ದುಗೊಳಿಸಲಾಗಿದೆ.












Click it and Unblock the Notifications