DK Shivakumar: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಣ್ಣ, ಸತೀಶ್ ಜಾರಕಿಹೊಳಿ ಫೈಟ್: ಅಚ್ಚರಿ ಹೇಳಿಕೆ ನೀಡಿದ ಡಿ ಕೆ ಶಿವಕುಮಾರ್
ದೆಹಲಿ, ನವೆಂಬರ್ 29: ಕೆಪಿಸಿಸಿ ಅಧ್ಯಕ್ಷ ಗಾದಿಗೆ ನಾನೂ ಆಕಾಂಕ್ಷಿ ಎನ್ನುವ ಸಚಿವ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಅವರ ಹೆಸರು ಮುನ್ನೆಲೆಗೆ ಬಂದಿದ್ದು, ಈ ಕುರಿತು ದೆಹಲಿಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಇಂದು(ಶುಕ್ರವಾರ) ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಮಾಧ್ಯಮಗಳ ಜೊತೆಗೆ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಮಾಧ್ಯಮಗಳ ಮುಂದೆ ಮಾಡುವ ಚರ್ಚೆಯಿಂದ ರಾಜಕಾರಣ ನಡೆಯುವುದಿಲ್ಲ. ಮಾಧ್ಯಮಗಳ ಮುಂದೆ ರಾಜಕೀಯ ಚರ್ಚೆ ಮಾಡುವುದು ಯಾವ ಪಕ್ಷದವರಿಗೂ ಹಾಗೂ ಯಾರಿಗೂ ಸೂಕ್ತವಾದುದಲ್ಲ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಸಾಧನ ಸಮಾವೇಶವು ಸಿದ್ದರಾಮಯ್ಯ ಅವರ ಸಮಾವೇಶವಾಗಿ ಬದಲಾಗಿದೆ ಎನ್ನುವ ಕುರಿತು ಅಸಮಾಧಾನ ಹೊಂದಿರುವ ಪತ್ರವು ಎಐಸಿಸಿಗೆ ಬಂದಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಆದರೆ, ಸಮಾವೇಶವನ್ನು ಯಾವ ಕಾರಣಕ್ಕೆ ಮಾಡಲಾಗುತ್ತಿದೆ ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳು ನನಗೆ ಮೊದಲೇ ತಿಳಿಸಿದ್ದಾರೆ. ಮಿಕ್ಕ ವಿಚಾರಗಳು ನನಗೆ ಗೊತ್ತಿಲ್ಲ. ಏಕೆಂದರೆ ಮುಖ್ಯಮಂತ್ರಿಗಳು ಹಾಗೂ ನಾನು ಭೇಟಿ ಮಾಡಿ ಮೂರು ನಾಲ್ಕು ದಿನಗಳಾಗಿವೆ. ಪಕ್ಷದ ಭಾಗವಹಿಸುವಿಕೆ ಖಂಡಿತ ಇದ್ದೆ ಇರುತ್ತದೆ ಎಂದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ಬಗ್ಗೆ ಕೇಳಿದಾಗ, "ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಮಹಾತ್ಮಾ ಗಾಂಧಿಯವರು ಅಧಿಕಾರವಹಿಸಿಕೊಂಡು ನೂರು ವರ್ಷಗಳಾಗಿದೆ. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಅವರನ್ನು ಭೇಟಿಯಾಗಿದ್ದೆ.
ಡಿಸೆಂಬರ್ 28 ರಂದೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ. ಆದ ಕಾರಣ ಈ ಹಿಂದೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಬಳಿ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಿ ತೆಗೆದುಕೊಂಡ ಸಲಹೆ, ಸೂಚನೆಗಳನ್ನು ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಚರ್ಚೆ ಮಾಡಿದೆ. ಸುಮಾರು 300 ಕ್ಕೂ ಹೆಚ್ಚು ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ನಾವು ಈ ಕಾರ್ಯಕ್ರಮ ಕರ್ನಾಟಕದಲ್ಲಿ ನಡೆಯಬೇಕು ಎನ್ನುವ ಅಭಿಲಾಷೆಯನ್ನು ಹೊಂದಿದ್ದೇವೆ. ಈ ಬಗ್ಗೆ ಪಕ್ಷದ ಕಾರ್ಯಕಾರಿ ಸಭೆಯಲ್ಲಿ ಚರ್ಚಿಸಿ ತಿಳಿಸುವುದಾಗಿ ಅವರು ಹೇಳಿದ್ದಾರೆ. ನಾನು ಮತ್ತು ಮುಖ್ಯಮಂತ್ರಿ ಇಬ್ಬರು ಒಟ್ಟಿಗೆ ಈ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು.
ಇನ್ನೂ ಸಂಪುಟ ವಿಸ್ತರಣೆಯ ಕುರಿತು ಮಾತನಾಡಿ, ಸಂಪುಟ ವಿಸ್ತರಣೆಯ ಸಂದರ್ಭ ಬಂದಾಗ ಆಗುತ್ತದೆ. ಈಗ ಆ ಸಂದರ್ಭ ಒದಗಿ ಬಂದಿಲ್ಲವಲ್ಲ. ಒಂದು ಸಚಿವ ಸ್ಥಾನ ಖಾಲಿ ಇದ್ದು ಅದನ್ನು ತುಂಬುವ ಬಗ್ಗೆ ಚರ್ಚೆ ನಡೆದಿಲ್ಲ ಎಂದು ತಿಳಿಸಿದರು.
ಪ್ರಧಾನಿ ಮೋದಿ ಅವರ ಭೇಟಿಯ ಬಗ್ಗೆ ಕೇಳಿದಾಗ, "ರಾಜ್ಯದ ವಿಚಾರಗಳು ಹಾಗೂ ಮುಖ್ಯವಾಗಿ ನೀರಾವರಿ ವಿಚಾರವಾಗಿ ಮನವಿಯನ್ನು ಸಲ್ಲಿಸಲು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಾಗುತ್ತಿದೆ. ಗುರುವಾರದಂದು ಕೇಂದ್ರ ಅರಣ್ಯ ಸಚಿವರಾದ ಭೂಪೇಂದರ್ ಯಾದವ್ ಹಾಗೂ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಕಳಸಾ - ಬಂಡೂರಿ ವಿಚಾರವಾಗಿ ಪರಿಸರ ಇಲಾಖೆಯಿಂದ ಬಾಕಿ ಇರುವ ಅನುಮತಿ ಹಾಗೂ ಅಡೆತಡೆಗಳನ್ನು ನಿವಾರಿಸಬೇಕು ಎಂದು ಮನವಿ ಸಲ್ಲಿಸಿದ್ದೆವು. ಇದಕ್ಕೆ ಇಬ್ಬರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ವನ್ಯಜೀವಿ ಮಂಡಳಿಗೆ ಪ್ರಧಾನಿ ಅವರೇ ಅಧ್ಯಕ್ಷರಾಗಿರುವ ಕಾರಣಕ್ಕೆ ಅವರಿಗೂ ಮನವಿ ಸಲ್ಲಿಸಲಾಗುವುದು" ಎಂದರು.
"ರಾಂಚಿಯಲ್ಲಿ ನಡೆದ ಹೇಮಂತ್ ಸೋರೆನ್ ಅವರ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಕ್ಷದ ಪರವಾಗಿ ರಾಹುಲ್ ಗಾಂಧಿ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ನಾನು ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು. ಇಂಡಿಯಾ ಒಕ್ಕೂಟದ ನಾಯಕರು ಭಾಗವಸಿ ಹೇಮಂತ್ ಅವರಿಗೆ ಶುಭ ಕೋರಿದೆವು ಎಂದು ತಿಳಿಸಿದರು.












Click it and Unblock the Notifications