DCM: ಯತೀಂದ್ರ ಜೊತೆ ದೆಹಲಿಗೆ ಸಿದ್ದರಾಮಯ್ಯ: ಕಾಂಗ್ರೆಸ್ ನಾಯಕರೊಂದಿಗೆ ಮಹತ್ವದ ಚರ್ಚೆ
DCM: ಸಿದ್ದರಾಮಯ್ಯ ಅವರ ರಾಜೀನಾಮೆಯು ಕೊನೆಗೂ ಅಂಗೀಕರಾವಾಗಿದೆ. ಗುರುವಾರ ಲೋಕಭವನಕ್ಕೆ ತೆರಳಿದ್ದ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಕಾರ್ಯದರ್ಶಿಗಳಿಗೆ ರಾಜೀನಾಮೆ ಪತ್ರ ಕೊಟ್ಟಿದ್ದರು. ರಾಜ್ಯಪಾಲರು ಏಕಾಏಕಿ ಇಂದೋರ್ಗೆ ಹೋಗಿದ್ದರಿಂದ ರಾಜೀನಾಮೆ ಸ್ವೀಕರಿಸಲಾಗಿದ್ದರೂ ಅಂಗೀಕಾರವಾಗಿರಲಿಲ್ಲ. ಇದೀಗ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಮೇ 29ರ ಶುಕ್ರವಾರ ಅಂಗೀಕರಿಸಿದ್ದು, ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟವನ್ನು ತಕ್ಷಣ ಜಾರಿಗೆ ಬರುವಂತೆ ವಿಸರ್ಜಿಸಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಯತೀಂದ್ರ ಸಿದ್ದರಾಮಯ್ಯ ಅವರೊಂದಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ
ಇನ್ನು ಮೇ28ರ ಗುರುವಾರ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟಿದ್ದರು. ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ರಾಜ್ಯಪಾಲರು ಅವರ ಪತ್ನಿಯ ಅನಾರೋಗ್ಯದ ಕಾರಣಕ್ಕೆ ಏಕಾಏಕಿ ಇಂದೋರ್ಗೆ ತೆರಳಿದ್ದರು. ಸಿದ್ದರಾಮಯ್ಯ ಅವರು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಗುರುವಾರ ರಾತ್ರಿ ಬೆಂಗಳೂರಿನಗೆ ವಾಪಸ್ ಬಂದಿರುವ ರಾಜ್ಯಪಾಲರು, ಶುಕ್ರವಾರ ಮುಂಜಾನೆಯೇ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ದೆಹಲಿಗೆ ಸಿದ್ದರಾಮಯ್ಯ ಪಯಣ - ಯತೀಂದ್ರ ಸಿದ್ದರಾಮಯ್ಯ ಸಾಥ್
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಬೆಳಗ್ಗೆಯೇ ತಮ್ಮ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರೊಂದಿಗೆ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಇನ್ನು ಸಿದ್ದರಾಮಯ್ಯ ಅವರು ಈಗಾಗಲೇ ರಾಜ್ಯಸಭಾ ಸ್ಥಾನವನ್ನು ನಿರಾಕರಿಸಿರುವುದಾಗಿ ನೆನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಕಾಂಗ್ರೆಸ್ ನಾಯಕರೊಂದಿಗೆ ತಮ್ಮ ಮುಂದಿನ ರಾಜಕೀಯ ಭವಿಷ್ಯ ಹಾಗೂ ಯತೀಂದ್ರ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆಯೂ ಚರ್ಚೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯ ಅವರನ್ನು ಭೇಟಿ ಮಾಡಿದ ಬಳಿಕ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸಚಿವರಾದ ಕೆ.ಜೆ. ಜಾರ್ಜ್, ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.
ರಾಜ್ಯ ರಾಜಕೀಯದಲ್ಲೇ ಉಳಿಯಲಿದ್ದೇನೆ: ಸಿದ್ದರಾಮಯ್ಯ
ನನಗೆ ರಾಷ್ಟ್ರ ರಾಜಕೀಯದಲ್ಲಿ ಯಾವುದೇ ಆಸಕ್ತಿ ಇಲ್ಲ. ನಾನು ರಾಜ್ಯ ರಾಜಕೀಯದಲ್ಲೇ ಮುಂದುವರಿಯಲಿದ್ದೇನೆ. ರಾಜ್ಯಸಭಾ ಸ್ಥಾನ ಬೇಡ ಎಂದು ಅತ್ಯಂತ ವಿನಮ್ರವಾಗಿ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಹೇಳಿದ್ದೇನೆ. ರಾಷ್ಟ್ರರಾಜಕಾರಣದಲ್ಲಿ ನನಗೆಗೆ ಆಸಕ್ತಿಯಿಲ್ಲ. ಇನ್ನೂ ಎರಡು ವರ್ಷಗಳ ಕಾಲ ಅಧಿಕಾರ ಅವಧಿ ಇದೆ. ಶಾಸಕನಾಗಿ ಮುಂದುವರಿಯಲಿದ್ದೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.














Click it and Unblock the Notifications